ಗದಗಕ್ಕೆ ಮುಖ್ಯಮಂತ್ರಿ ಭೇಟಿ: ಸಮನ್ವಯದಿಂದ ಕಾರ್ಯಕ್ರಮ ಯಶಸ್ವಿಗೊಳಿಸಿ

KannadaprabhaNewsNetwork |  
Published : Jun 03, 2025, 01:59 AM ISTUpdated : Jun 03, 2025, 02:00 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಜೂ. 3ರಂದು ಬೆಳಗ್ಗೆ 11.40ಕ್ಕೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ಅಧಿಕಾರಿಗಳ ಸಭೆ ನಡೆಸಿದರು.

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ. 3ರಂದು ಗದಗ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಮುಖ್ಯಮಂತ್ರಿ ಕಾರ್ಯಕ್ರಮವನ್ನು ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ‌ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ. 3ರಂದು ಬೆಳಗ್ಗೆ 11.40ಕ್ಕೆ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡುವರು. ಬಯಲು ವಸ್ತು ಸಂಗ್ರಹಾಲಯ ಆವರಣದ ಪ್ರಾಚ್ಯಾವಶೇಷಗಳ ವೀಕ್ಷಣೆ, ಶ್ರೀಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12.40ಕ್ಕೆ ಲಕ್ಕುಂಡಿ ಗ್ರಾಮದಿಂದ ಹೊರಟು ಗದಗ ನಗರಕ್ಕೆ ಆಗಮಿಸುವರು.

ನಂತರ ನಗರದ ಎಪಿಎಂಸಿ ಆವರಣದಲ್ಲಿನ ಸ್ವಾಮಿ ವಿವೇಕಾನಂದ ಭವನದಲ್ಲಿ ಕರ್ನಾಟಕ ಕುರುಬರ ಸಂಘ ಹಾಗೂ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ತದನಂತರ ಸಂಜೆ 4.30ಕ್ಕೆ ಗದಗ ನಗರದ ಪಂಡಿತ ಭೀಮಸೇನ ಜೋಶಿ ರಂಗಮಂದಿರದಲ್ಲಿ ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ 34 ಎಕರೆ ಪ್ರದೇಶದ ಪ್ರಾಧಿಕಾರದ ಪರಿಕಲ್ಪನೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಸರಿಯಾಗಿ‌ ನಿರ್ವಹಿಸಬೇಕು. ಲೋಪದೋಷಗಳನ್ನು ಸಹಿಸಲಾಗದು ಎಂದರು.

ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸಿ ನಿರ್ಗಮಿಸುವ ವರೆಗೂ ಎಲ್ಲರೂ ನಿರಂತರವಾಗಿ ನಿಗಾದಲ್ಲಿರಬೇಕು. ಈಗಾಗಲೇ ಕೆಲವು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗಿದೆ. ಅವರು ತಮ್ಮ ಕೆಲಸ ಸರಿಯಾಗಿ ನಿರ್ವಹಿಸಬೇಕು. ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ನಿರ್ದೇಶಿಸಿದರು.

ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ಮುಖ್ಯಮಂತ್ರಿ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಅನಗತ್ಯ ತೊಂದರೆಗಳಿಗೆ ಆಸ್ಪದವಾಗದಂತೆ ಕಾರ್ಯನಿರ್ವಹಿಸಬೇಕು. ಯಾವುದೇ ತರಹದ ಅನುಮಾನಗಳು, ಬದಲಾವಣೆಗಳು ಎದುರಾದಲ್ಲಿ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕೊಂಡುಕೊಳ್ಳುವಂತೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನವಲಗುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಆಹಾರ ಇಲಾಖೆ ಜಂಟಿ ನಿರ್ದೇಶಕ ವಿನಯಕುಮಾರ ಹೆಗ್ಗಳಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ‌ ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ