ಮಂಗಳೂರು: ಸಹಕಾರಿ ಸಂಘಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ 30 ಕೋಟಿಗೂ ಹೆಚ್ಚು ಮಂದಿ ಸಹಕಾರಿ ಸಂಘಗಳ ಸದಸ್ಯರಾಗಿದ್ದಾರೆ. ಸಹಕಾರಿ ಸಂಘಗಳ ಮೂಲಕ ಜನತೆ ಆರ್ಥಿಕ ಪ್ರಗತಿ ಹೊಂದಿದ್ದಾರೆ. ಸಹಕಾರಿ ಕ್ಷೇತ್ರದಿಂದ ಮಾತ್ರ ನಾವು ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಸಹಕಾರದಿಂದ ಸಮೃದ್ಧಿ ಧ್ಯೇಯದೊಂದಿಗೆ ಇಂದು ವಿಶೇಷ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಇ ಎಲ್ಲರಿಗಿಂತ ಮೊದಲು ಸಹಕಾರದಿಂದ ಸಮೃದ್ಧಿ ಸಪ್ತಾಹವನ್ನು ಮಂಗಳೂರಿನಲ್ಲಿ ನಡೆಸುತ್ತಿದ್ದೇವೆ. ದ.ಕ., ಉಡುಪಿಗೆ ಈ ವರ್ಷ ಶೇ.54ರಷ್ಟು ಮಳೆ ಕಡಿಮೆ ಇದೆ. ಈ ಹಿನ್ನಲೆಯಲ್ಲಿ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸಿ ಯೋಜನೆ ಇರಿಸಲಾಗುವುದು ಎಂದರು.
ಶಾಸಕ ವೇದವ್ಯಾಸ್ ಡಿ.ಕಾಮತ್ ಸಹಕಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ 2047ರ ವಿಕಸಿತ ಭಾರತದ ಮೂಲಕ ಶಕ್ತಿಶಾಲಿ ಭಾರತ ಆಗಬೇಕೆಂಬ ಯೋಜನೆಗೆ ಹೊಸತಾಗಿ ಸ್ಥಾಪನೆಗೊಂಡ ಕೇಂದ್ರ ಸಹಕಾರ ಸಚಿವಾಲಯ ಯಶಸ್ವಿ ಕೊಡುಗೆ ನೀಡುತ್ತಿದೆ ಎಂದರು.ಗ್ರಾಮ ಗ್ರಾಮಗಳಲ್ಲಿ ಸಹಕಾರಿ ಕ್ಷೇತ್ರಗಳು ಅನುಷ್ಠಾನ ಆಗಿ ಗ್ರಾಮದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂಬುದು ಸರ್ಕಾರದ ಉದ್ದೇಶ. ಕಳೆದ ನವೆಂಬರ್ನಲ್ಲಿ ದೇಶಾದ್ಯಂತ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ಸಿಡಿಸಿ) ವತಿಯಿಂದ 4,67,555.66 ಕೋಟಿ ರು. ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 4,164 ಕೋಟಿ ರು.ದೊರೆತಿದೆ. ಈ ಮೂಲಕ ಕೇಂದ್ರ ಸರ್ಕಾರ ಸಹಕಾರಿ ಕ್ಷೇತ್ರಕ್ಕೆ ವಿಶೇಷ ಮಹತ್ವ ನೀಡುತ್ತಿದೆ ಎಂದರು. ಜಿಲ್ಲೆಯಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿ ಕ್ಷೇತ್ರ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ದೇಶದ, ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರದ ಕೊಡುಗೆ ದೊಡ್ಡದಾಗಿದೆ ಎಂದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ಬ್ಯಾಂಕ್ ಸಿಬ್ಬಂದಿ ರಾಜೀವ್ ಕಾರ್ಯಕ್ರಮ ನಿರೂಪಿಸಿದರು.