ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ

KannadaprabhaNewsNetwork |  
Published : Mar 11, 2024, 01:18 AM IST
ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ: ಈಶ್ವರ ಖಂಡ್ರೆ | Kannada Prabha

ಸಾರಾಂಶ

ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆಯಲ್ಲಿ ಮಾತನಾಡಿ, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.

ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ. ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು. ವನ್ಯಜೀವಿಗಳ, ಜನಸಂಖ್ಯೆಯ ಹೆಚ್ಚಳದಿಂದ ವಸತಿ ಪ್ರದೇಶಗಳು ಅರಣ್ಯದಂಚಿಗೆ ಬರುತ್ತಿರುವ ಕಾರಣ ವನ್ಯಜೀವಿ-ಮಾನವ ಸಂಘರ್ಷ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹೀಗಾಗಿ ಕಾಡಿನಂಚಿನ ವಸತಿ ಪ್ರದೇಶಗಳ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅಗತ್ಯ ಎಂದು ಪ್ರತಿಪಾದಿಸಿದರು. ತಮಿಳುನಾಡಿನ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮೂರೂ ರಾಜ್ಯದಲ್ಲಿ ಅಳವಡಿಸಿಕೊಳ್ಳಲಾಗಿರುವ ಉತ್ತಮ ರೂಢಿಗಳ ಕುರಿತಂತೆ ಚರ್ಚಿಸಿ, ಜ್ಞಾನ ವಿನಿಮಯ ಮಾಡಲಾಯಿತು, ಜೊತೆಗೆ ಹೊಸ ಅನ್ವೇಷಣೆಗಳ ಬಗ್ಗೆಯೂ ಚರ್ಚಿಸಲಾಯಿತು ಎಂದರು.ವನ್ಯಜೀವಿ -ಮಾನವ ಸಂಘರ್ಷ ಮತ್ತು ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆಯೂ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂರೂ ರಾಜ್ಯಗಳ ನಡುವೆ ನಡೆಯುವ ಸಭೆಗಳಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗುವುದು. ಜೊತೆಗೆ ಸನ್ನಾ ಮತ್ತು ಲಾಂಟನಾ ಕಳೆಯ ಸಮಸ್ಯೆಯ ನಿವಾರಣೆಗೂ ಸಹಯೋಗ ಅಗತ್ಯವಾಗಿದ್ದು, ತಂತ್ರಜ್ಞಾನ ಅಳವಡಿಕೆ ಮತ್ತು ಕಳೆ ನಾಶಕ್ಕೆ ಒಂದು ಸಲಹಾ ಸಮಿತಿ ರಚಿಸಲು ಪ್ರಸ್ತಾಪಿಸಲಾಗಿದೆ ಎಂದರು.ಸಭೆಯ ಮುಖ್ಯಾಂಶಗಳು:

1. ಹಂಚಿಕೆಯ ಹೊಣೆಗಾರಿಕೆ ಸಮ್ಮತಿ: ವನ್ಯಜೀವಿಗಳ ಆವಾಸಸ್ಥಾನಗಳನ್ನು ಗುರುತಿಸುವುದು ಮತ್ತು ವಿಸ್ತರಿಸುತ್ತಿರುವುದು. ವಿಸ್ತರಣೆಯಾಗುತ್ತಿರುವ ವಸತಿ ಪ್ರದೇಶಗಳ ನಡುವೆಯೂ ಅರಣ್ಯ ಸಂರಕ್ಷಿಸುವ ಬದ್ಧತೆ.

2. ಸಹಯೋಗದ ಚಾರ್ಟರ್: ಗಡಿಗಳನ್ನು ಮೀರಿ, ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವ ಹೃತ್ಪೂರ್ವಕ ಪ್ರತಿಜ್ಞೆ.

3. ಕಾರ್ಯತಂತ್ರದ ಸಮನ್ವಯ: ತಡೆರಹಿತ ಸಹಯೋಗ, ರಚನಾತ್ಮಕ ಮಾಹಿತಿಯ ಹಂಚಿಕೆ ಮತ್ತು ಮಾನವ-ವನ್ಯಜೀವಿ ಸಂಘರ್ಷ ಸವಾಲುಗಳ ವಿರುದ್ಧ ಜಂಟಿ ಪ್ರಯತ್ನ.

4. ಸಂಪನ್ಮೂಲ ವಿನಿಮಯ ಕಾರ್ಯಕ್ರಮ: ಸಮನ್ವಯತೆಯನ್ನು ಸಂಕೇತಿಸುವ ಈ ಕಾರ್ಯಕ್ರಮವು ನಿರ್ಣಾಯಕ ಸಂಪನ್ಮೂಲಗಳು, ಪರಿಣತಿ ಮತ್ತು ಜ್ಞಾನದ ವಿನಿಮಯವನ್ನು ಸುಗಮಗೊಳಿಸುತ್ತದೆ.

5. ವನ್ಯಜೀವಿ ಸಂಖ್ಯೆಯ ಅಂದಾಜು ಮತ್ತು ಜಂಟಿ ಕಾರ್ಯಾಚರಣೆಗಳು: ವನ್ಯಜೀವಿಗಳ ಸಂಖ್ಯೆಯ ಆಧಾರದ ಮೇಲೆ ಮತ್ತು ಸಂಘಟಿತ ಕಾರ್ಯಾಚರಣೆಗಳ ಮೂಲಕ ಮಾಹಿತಿ ಆಧಾರಿತವಾಗಿ ನಿರ್ಧಾರ ತೆಗೆದುಕೊಳ್ಳುವುದು.

6. ಸಲಹಾ ಮಂಡಳಿ: ವನ್ಯಜೀವಿ ಸಂರಕ್ಷಣಾ ತಜ್ಞರನ್ನು ಒಳಗೊಂಡು, ಸಂಘರ್ಷ ನಿರ್ವಹಣಾ ತಂತ್ರಗಳನ್ನು ಹೆಚ್ಚಿಸಲು ಅಮೂಲ್ಯವಾದ ಒಳನೋಟಗಳನ್ನು ಒದಗಿಸುವ ನಿಟ್ಟಿನಲ್ಲಿ ಒಂದು ಸಲಹಾ ಮಂಡಳಿ ರಚಿಸುವ ಪ್ರಸ್ತಾಪ.

7. ವಿಮರ್ಶೆ ಮತ್ತು ಹೊಂದಾಣಿಕೆ: ಸುಸ್ಥಿರ ಉತ್ಕೃಷ್ಟತೆ ಮತ್ತು ವಿಕಸನಗೊಳ್ಳುತ್ತಿರುವ ಜವಾಬ್ದಾರಿಗಳಿಗೆ ಹೊಂದಿಕೊಳ್ಳುವಿಕೆಗಾಗಿ ಆಡಳಿತದಲ್ಲಿ ನಿಯಮಿತ ಪರಾಮರ್ಶೆ.

ಭವಿಷ್ಯದ ಹಂಚಿಕೆಯ ದೃಷ್ಟಿಕೋನ:

ಮಾನವ ಮತ್ತು ವನ್ಯಜೀವಿಗಳು ಸಾಮರಸ್ಯದಿಂದ ಸಹಬಾಳ್ವೆ ನಡೆಸುವ ಜವಾಬ್ದಾರಿಯುತ ಸಂರಕ್ಷಣೆಯ ಪರಂಪರೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಆಡಳಿತಾತ್ಮಕ ಗಡಿಗಳನ್ನು ಮೀರಿದ ಹಂಚಿಕೆಯ ದೃಷ್ಟಿಕೋನವನ್ನು ಈ ಚಾರ್ಟರ್ ಒಳಗೊಂಡಿದೆ.

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪಿಸಿಸಿಎಫ್), ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ವಾರ್ಡನ್‌ಗಳು ಮತ್ತು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಇತರ ಅಧಿಕಾರಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ಎರಡೂ ಬಣದಲ್ಲಿ ಖರ್ಗೆ ಮಾತಿಂದ ಸಂಚಲನ
‘ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂದ ಮರುದಿನವೇ ಸ್ಪಷ್ಟನೆ