ಸಾಲ ಮನ್ನಾಕ್ಕೆ ಕಾಫಿ ಬೆಳೆಗಾರರ ಒತ್ತಾಯ

KannadaprabhaNewsNetwork |  
Published : Jul 22, 2026, 02:45 AM IST
ಮಳೆ ಕೊರತೆ, ಸಂಕಷ್ಟದಲ್ಲಿರುವ ಬೆಳೆಗಾರರ ಫಸಲು ಸಾಲ ಮತ್ತು ಬಡ್ಡಿ ಮನ್ನಾ ಮಾಡಲು ಕಾಫಿ ಬೆಳೆಗಾರರ ಸಂಘ ಒತ್ತಾಯ | Kannada Prabha

ಸಾರಾಂಶ

ಹವಾಮಾನ ವೈಪರಿತ್ಯ, ಅಕಾಲಿಕ ಮಳೆ, ಮುಂಗಾರು ವಿಳಂಬ ಇನ್ನಿತರ ಕಾರಣಗಳಿಂದ ಕಾಫಿ ಫಸಲು ಹಾನಿಯಾಗಿ ಬೆಳೆಗಾರರು ಸಾಲಗಾರರಾಗಿ ಸಂಕಷ್ಟದಲ್ಲಿದ್ದು, ಬೆಳೆಗಾರರ ಫಸಲು ಸಾಲ ಮತ್ತು ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ತಾಲೂಕು ಕಾಫಿ ಬೆಳೆಗಾರರ ಸಂಘ ಒತ್ತಾಯಿಸಿದೆ.

ಸೋಮವಾರಪೇಟೆ: ಹವಾಮಾನ ವೈಪರಿತ್ಯ, ಅಕಾಲಿಕ ಮಳೆ, ಮುಂಗಾರು ವಿಳಂಬ ಇನ್ನಿತರ ಕಾರಣಗಳಿಂದ ಕಾಫಿ ಫಸಲು ಹಾನಿಯಾಗಿ ಬೆಳೆಗಾರರು ಸಾಲಗಾರರಾಗಿ ಸಂಕಷ್ಟದಲ್ಲಿದ್ದು, ಬೆಳೆಗಾರರ ಫಸಲು ಸಾಲ ಮತ್ತು ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ತಾಲೂಕು ಕಾಫಿ ಬೆಳೆಗಾರರ ಸಂಘ ಒತ್ತಾಯಿಸಿದೆ.

ಕಾಫಿ ಉದ್ದಿಮೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ವಿವಿಧ ಮೂಲಗಳಿಂದ ೨೮ ಸಾವಿರ ಕೋಟಿ ರೂ. ಆದಾಯ ಹೋಗುತ್ತಿದೆ. ಆದರೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರಗಳು ಸ್ಪಂದಿಸದೆ ಅನ್ಯಾಯ ಮಾಡುತ್ತಿವೆ ಎಂದು ಸಂಘದ ಅಧ್ಯಕ್ಷ ಬಿ.ಎಂ. ಲವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕೊಡಗಿನಲ್ಲಿ ಅರೇಬಿಕಾ ಮತ್ತು ರೋಬಸ್ಟಾ ಕಾಫಿ ಫಸಲು ಶೇ. ೬೦ರಷ್ಟು ಹಾನಿಯಾಗಿದೆ. ಅತಿಯಾದ ಬಿಸಿಲಿನಿಂದ ಅರೇಬಿಕ ಕಾಫಿ ತೋಟಗಳಲ್ಲಿ ಬಿಳಿಕಾಂಡ ಕೊರಕ ಕೀಟಬಾಧೆಯಿಂದ ಫಸಲು ನೀಡುವ ಗಿಡಗಳು ಸಾಯುತ್ತಿವೆ. ಬಹುತೇಕ ಕಾಫಿ ತೋಟಗಳು ರೋಗಪೀಡಿತವಾಗಿವೆ. ಉತ್ಪಾದನಾ ವೆಚ್ಚ ಹೆಚ್ಚಳದಿಂದ ಬೆಳೆಗಾರರಿಗೆ ಕಾಫಿ ತೋಟ ನಿರ್ವಹಣೆ ಸಾಧ್ಯವಾಗದೆ ಪಾಳುಬಿಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಫಿ ತೋಟದ ನಿರ್ವಹಣೆಗಾಗಿ ಸಹಕಾರ ಸಂಘ ಮತ್ತು ವಾಣಿಜ್ಯ ಬ್ಯಾಂಕ್‌ನಲ್ಲಿ ಸಾಲ ಮಾಡಲಾಗಿದೆ. ಬೆಳೆಗಾರರಿಗೆ ಬಡ್ಡಿ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಇವೆಲ್ಲ ಕಾರಣಗಳಿಂದ ಸಾಲ ಮನ್ನಾ ಮಾಡಬೇಕು ಎಂದು ಹೇಳಿದರು.

ಸರ್ಕಾರ ಬೆಳೆಗಾರರಿಗೆ ಸೌಲಭ್ಯ ಒದಗಿಸದಿದ್ದರೆ ಕಾಫಿ ಉತ್ಪಾದನೆ ಗಣನೀಯವಾಗಿ ಕುಸಿತಗೊಂಡು, ಸರ್ಕಾರಗಳಿಗೆ ಆದಾಯಕ್ಕೂ ಹೊಡೆತ ಬೀಳಲಿದೆ. ಸಂಸದರು ಹಾಗೂ ಮಲೆನಾಡು ಭಾಗದ ಶಾಸಕರು ಕಾಫಿ ಉದ್ದಿಮೆಯ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಸಾಲ ಮನ್ನಾ ಮಾಡಲು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.ಸರ್ಫೆಸಿ ಕಾಯಿದೆ ಕಾಫಿ ಬೆಳೆಗಾರರಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಕೂಡಲೇ ಕಾಯಿದೆಯನ್ನು ರದ್ದುಪಡಿಸಬೇಕು. ತಪ್ಪಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಕಾಯಿದೆ ಪ್ರಕಾರ ಬ್ಯಾಂಕ್‌ಗಳಿಗೆ ಸಾಲ ಪಡೆಯಲು ಅಡವಿಟ್ಟ ಭೂಮಿಯನ್ನು ವಾಯಿದೆ ಮುಗಿದ ನಂತರ ಮಾಲೀಕರ ಗಮನಕ್ಕೆ ತರದೆ ಸಿಕ್ಕ ಬೆಲೆಗೆ ಹರಾಜು ಮಾಡುವ ಪರಮಾಧಿಕಾರವನ್ನು ಬ್ಯಾಂಕ್‌ಗಳಿಗೆ ನೀಡಲಾಗಿದೆ. ಭಾಗಮಂಡಲದಲ್ಲಿ ೩೫ ಎಕರೆ ಕಾಫಿ ತೋಟವನ್ನು ೯೦ ಲಕ್ಷಕ್ಕೆ ಹರಾಜು ಮಾಡಲಾಗಿದೆ. ಕೊಡಗಿನಲ್ಲಿ ಒಂದು ಎಕರೆ ಕಾಫಿ ತೋಟಕ್ಕೆ ೧೫ರಿಂದ ೩೦ ಲಕ್ಷ ರೂ. ಬೆಲೆ ಇದೆ. ಇಂತಹ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಹಾಲು ಕೊಡುವ ಹಸುವಿನ ಕೆಚ್ಚಲನ್ನು ಸರ್ಕಾರಗಳು ಕತ್ತರಿಸುವ ಕೃತ್ಯ ಮಾಡಬಾರದು ಎಂದು ತಮ್ಮ ಅಸಮಧಾನ ವ್ಯಕ್ತಪಡಿಸಿದರು.

ಕಾಫಿ ಬ್ಲಾಸಂ ಸಂದರ್ಭ ನಿಗದಿತ ಪ್ರಮಾಣದಲ್ಲಿ ಹೂಮಳೆ ಬೀಳಲಿಲ್ಲ. ಜೂನ್ ತಿಂಗಳಲ್ಲಿ ವಿಪರೀತ ಬಿಸಿಲು ಕಾಣಿಸಿಕೊಂಡಿತು. ಮುಂಗಾರು ವಿಳಂಬವಾಯಿತು. ಈಗ ಗಿಡಗಳು ರೋಗಪೀಡಿತವಾಗಿವೆ. ಕೀಟನಾಶಕ, ಶಿಲಿಂದ್ರನಾಶಕ, ರಾಸಾಯನಿಕ ಗೊಬ್ಬರ ಬೆಲೆ ಗಗನಕ್ಕೇರಿದೆ. ನಿಗದಿತ ಸಮಯದಲ್ಲಿ ಗೊಬ್ಬರ ಸಿಗುತ್ತಿಲ್ಲ. ಕಳೆದ ವರ್ಷ ಅಕಾಲಿಕ ಮಳೆಯಿಂದ ತೇವಾಂಶ ಹೆಚ್ಚಾಗಿ ಕಾಳುಮೆಣಸು ಬಳ್ಳಿಗಳು ನಾಶವಾಗಿವೆ. ಕೂಲಿ ಕಾರ್ಮಿಕರ ಸಂಬಳ ಹೆಚ್ಚಾಗಿದೆ. ಕಾಫಿ ಬೆಳೆಗಾರರು ಜೀವನ ಹೇಗೆ ಸಾಗಿಸಬೇಕು. ಸರ್ಕಾರಗಳು ತುರ್ತಾಗಿ ಬೆಳೆಗಾರರಿಗೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಚ್.ಕೆ. ಪ್ರಸಿ, ಕಾರ್ಯದರ್ಶಿ ಮನೋಹರ್, ನಿರ್ದೇಶಕರಾದ ಅನಂತರಾಮ್, ಕೆ.ಜಿ.ಎಫ್. ನಿರ್ದೇಶಕ ಸಿ.ಕೆ. ಮಲ್ಲಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ