ಆಟೋ ಚಾಲಕರು ಹಾಗೂ ಮಕ್ಕಳ ಪಕ್ಷದ ಸದಸ್ಯರ ಪ್ರತಿಭಟನೆ
ನಗರದಲ್ಲಿ ಹದಗೆಟ್ಟ ಕಾರವಾರ-ಹಬ್ಬುವಾಡ-ಕೈಗಾ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಆಟೋ ಚಾಲಕರು ಹಾಗೂ ಮಕ್ಕಳ ಪಕ್ಷದ ಸದಸ್ಯರು ಜಂಟಿಯಾಗಿ ಮಂಗಳವಾರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ನಗರದ ಹಬ್ಬುವಾಡದಿಂದ ಕೈಗಾ ಮಾರ್ಗವಾಗಿ ಸಾಗುವ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಯೋಗ್ಯವಿಲ್ಲದಂತಾಗಿದ್ದು, ಈ ಕುರಿತು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಸಾಮಾಜಿಕ ಹೋರಾಟಗಾರ ರಾಘು ನಾಯ್ಕ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹಬ್ಬುವಾಡದಿಂದ ಪಿಡಬ್ಲೂಡಿ ಕಚೇರಿಯವರೆಗೆ ಸುಮಾರು 3 ಕಿಮೀ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ರಸ್ತೆಯುದ್ದಕ್ಕೂ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳಿಂದ ಮಡಿಕೆ ಹಿಡಿದು ಭಿಕ್ಷೆ ಸಂಗ್ರಹಿಸಿದ ಪ್ರತಿಭಟನಾಕಾರರು, ಆಡಳಿತ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಕಳೆದ ವರ್ಷವಷ್ಟೇ ರಸ್ತೆಗೆ ತೇಪೆ ಕಾರ್ಯ ಮಾಡಲಾಗಿತ್ತಾದರೂ, ಮಳೆಗಾಲದಲ್ಲಿ ಅದು ಸಂಪೂರ್ಣವಾಗಿ ಕಿತ್ತುಹೋಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ, ನ. 27 ಅಥವಾ ಡಿ. 1ರೊಳಗೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ್ದರು. ₹20 ಕೋಟಿ ಅನುದಾನ ಮಂಜೂರಾಗಿದ್ದು, ಗುತ್ತಿಗೆ ನೀಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ನಿಗದಿತ ಗಡುವು ಮುಗಿದರೂ ಕಾಮಗಾರಿ ಆರಂಭವಾಗದ ಹಿನ್ನೆಲೆ ಜನರು ರಸ್ತೆಗಿಳಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಒಂದೆಡೆ ರಸ್ತೆಗಳು ಹೊಂಡ ಬಿದ್ದು ಜನರ ಪ್ರಾಣಕ್ಕೆ ಕುತ್ತು ತರುತ್ತಿವೆ. ಇಂತಹ ಸಂದರ್ಭದಲ್ಲಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಕರಾವಳಿ ಉತ್ಸವ ಮಾಡುವುದು ಎಷ್ಟು ಸರಿ? ಮೊದಲು ರಸ್ತೆಗಳನ್ನು ಸರಿಪಡಿಸಿ, ನಂತರ ಉತ್ಸವ ಮಾಡಿ, ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ತಕ್ಷಣವೇ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.