ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಶಿರಮನಗೊಂಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ಮುಖ್ಯಮಂತ್ರಿಯೆಂದು ಸ್ವತಃ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಕುರ್ಚಿ ಕಿತ್ತಾಟಕ್ಕೆ ಪರಿಹಾರ ಕಂಡುಕೊಳ್ಳದೆ, ಬೆಳಗಾವಿ ಅಧಿವೇಶನಕ್ಕೆ ಬಂದರೆ ರೈತರು, ಜನರ ಸಮಸ್ಯೆಗಳಿಗೆ ಪರಿಹಾರವಂತೂ ಸಿಗುವುದಿಲ್ಲ. ಹೀಗಿರುವಾಗ ಯಾವ ಪುರುಷಾರ್ಥಕ್ಕೆ ಅಧಿವೇಶನ ನಡೆಸುತ್ತೀರಿ?. ರೈತರ ಸಮಸ್ಯೆಗೆ ಪರಿಹಾರ ನೀಡುವುದಿದ್ದರೆ ಅಧಿವೇಶನ ನಡೆಸಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಹಲವಾರು ಜ್ವಲಂತ ಸಮಸ್ಯೆಗಳು, ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬಗ್ಗೆ ಗಮನ ಕೊಡಿ. ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡಿಯೇ ನೀವು ಬೆಳಗಾವಿ ಅಧಿವೇಶನ ನಡೆಸಬೇಕಾಗುತ್ತದೆ. ನಿಮ್ಮ ಕುರ್ಚಿ ಕಾಳಗದ ಮಧ್ಯೆ ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಧಿವೇಶನದ ವೇಳೆ ಕುರ್ಚಿಗಾಗಿ ಪೈಪೋಟಿ ಮುಂದುವರಿಸಿದರೆ ರೈತರ ಹಿತಕಾಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಬಿಜೆಪಿ ಧರಣಿ:ಉತ್ತರ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪರ ಹೋರಾಟ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈಗ ಮಧ್ಯ ಕರ್ನಾಟಕದ ದಾವಣಗೆರೆಯಿಂದ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯವ್ಯಾಪಿ ಬಿಜೆಪಿ ಹೋರಾಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಖರೀದಿ ಕೇಂದ್ರ ಆರಂಭಿಸಿ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಮಂಗಳವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.ಮಂಗಳವಾರ ಬೆಳಗ್ಗೆ ದಾವಣಗೆರೆಗೆ ಆಗಮಿಸಿದ ವಿಜಯೇಂದ್ರ, ನಗರದ ಡಾ। ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ, ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎತ್ತಿನ ಬಂಡಿಯನ್ನೇರಿದ ವಿಜಯೇಂದ್ರ, ಬಾರುಕೋಲನ್ನು ಬೀಸುತ್ತಾ ಮೆರವಣಿಗೆಯಲ್ಲಿ ಸಾಗಿದರು. ಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತಿತರ ನಾಯಕರು ವಿಜಯೇಂದ್ರಗೆ ಸಾಥ್ ನೀಡಿದರು. ಬಳಿಕ, ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆಯಡಿ ಮೆಕ್ಕೆಜೋಳ ಮತ್ತು ಭತ್ತವನ್ನು ಖರೀದಿಸುವಂತೆ ಉಪ ವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆದಿಲ್ಲ. ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸದೆ, ಇಡೀ ಸಚಿವ ಸಂಪುಟ ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ ಕುರಿತಂತೆ ಚರ್ಚಿಸಲು ಸಭೆ ಕರೆದರೆ, ಕೃಷಿ ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.