ನಿಜಾಮರ ವಿರುದ್ಧ ಹೋರಾಡಿದ ಸಾಕಷ್ಟು ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಇಂತಹ ನಾಯಕರನ್ನು ಈ ಸಮಯದಲ್ಲಿ ಸ್ಮರಿಸಬೇಕಾಗಿದೆ.
ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಶಾಸಕ
ಕನ್ನಡಪ್ರಭ ವಾರ್ತೆ ಗಂಗಾವತಿ
ಗಂಗಾವತಿ ನಗರ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.ಇಲ್ಲಿಯ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದರು. ಈ ಹಿಂದೆ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿತ್ತು. ನಂತರ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಎಸ್ ಯಡಿಯೂರಪ್ಪ ಬಸವಣ್ಣ ನೆಲೆಸಿರುವ ಈ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು, ಬಳಿಕ ಕಲ್ಯಾಣ ಕರ್ನಾಟಕ ಉತ್ಸವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.
ನಿಜಾಮರ ವಿರುದ್ಧ ಹೋರಾಡಿದ ಸಾಕಷ್ಟು ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಇಂತಹ ನಾಯಕರನ್ನು ಈ ಸಮಯದಲ್ಲಿ ಸ್ಮರಿಸಬೇಕಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಯಡಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಾಂತರ ರುಪಾಯಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪ್ರಮುಖವಾಗಿ 100 ಹಾಸಿಗೆ ಆಸ್ಪತ್ರೆಯನ್ನು 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ಅನುದಾನ ನೀಡುವಂತೆ ಕೋರಲಾಗಿದೆ. ಬೈ ಪಾಸ್ ರಸ್ತೆಗೆ ₹150 ಕೋಟಿ, ಕಂಪ್ಲಿ ಸೇತುವೆ ನವೀಕರಣಕ್ಕೆ ₹45 ಕೋಟಿ, ರಸ್ತೆ ನಿರ್ಮಾಣಕ್ಕೆ ಕೆಕೆಆರ್ ಡಿಬಿಯಿಂದ ₹25 ಕೋಟಿ ಅನುದಾನ ಕೋರಲಾಗಿದೆ ಎಂದರು.
ತಹಸೀಲ್ದಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ನಗರಸಭೆ ಅಧ್ಯಕ್ಷ ಮೌಲಾಸಾಬ, ಉಪಾಧ್ಯಕ್ಷೆ ಪಾರ್ವತಮ್ಮ, ಪೌರಾಯುಕ್ತ ವಿರೂಪಾಕ್ಷಮೂರ್ತಿ, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ, ತಾಲೂಕು ಪಂಚಾಯಿತಿ ಇಒ ಲಕ್ಷ್ಮೀದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಸೇರಿದಂತೆ ಪ್ರಮುಖರಿದ್ದರು.
ಶಿಕ್ಷಕಿ ಜಯಶ್ರೀ ಶರಣಪ್ಪ ಹಕ್ಕಂಡಿ ನಿರೂಪಿಸಿದರು. ರವಿ ನಾಗಮ್ಮನವರ್ ಸ್ವಾಗತಿಸಿ, ಶಿಕ್ಷಕ ವೃಂದದವರು ನಾಡಗೀತೆ ಪ್ರಸ್ತುತ ಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.