ಆದಿದ್ರಾವಿಡ ಸಮುದಾಯದ ಬೇಡಿಕೆ ಈಡೇರಿಸಲು ಬದ್ಧ: ಪರಮೇಶ್ವರ್‌

KannadaprabhaNewsNetwork | Published : Dec 25, 2023 1:30 AM

ಮಂಗಳೂರಿನಲ್ಲಿ ನಡೆದ ರಾಜ್ಯ ಆದಿ ದ್ರಾವಿಡ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಪರಮೇಶ್ವರ್‌, ಆದಿ ದ್ರಾವಿಡರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಆದಿ ದ್ರಾವಿಡ ಸಮುದಾಯದವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಭಾನುವಾರ ರಾಜ್ಯ ಆದಿ ದ್ರಾವಿಡ ಸಮಾವೇಶರಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆದಿ ದ್ರಾವಿಡ ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿ ಹಂತ ಹಂತವಾಗಿ ಈಡೇರಿಸಲಾಗುವುದು. ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ಮೀಸಲಿಡಲಾಗುವುದು. ಸಮುದಾಯದ ಮೂಲಕ್ಷೇತ್ರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಇತ್ಯಾದಿಗಳಿಗೆ ಅಗತ್ಯ ನೆರವು ನೀಡಲಾಗುವುದು. ಅಲ್ಲದೆ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸುವ ಸಂದರ್ಭ ಒಂದು ನಿಗಮ ಮಂಡಳಿಗೆ ಆದಿ ದ್ರಾವಿಡ ಸಮುದಾಯದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದರು.ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಜಮೀನನ್ನು ಪರಿಶಿಷ್ಟ ಸಮುದಾಯಕ್ಕೆ ಮೀಸಲಿರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದ ಅವರು, ಆದಿ ದ್ರಾವಿಡ ಸಮುದಾಯದವರನ್ನು ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿ ಗುರುತಿಸುತ್ತಾರೆ. ಉಪಜಾತಿಗಳನ್ನಾಗಿ ಮಾಡುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಸಚಿವ ಮಹದೇವಪ್ಪ ಅವರೊಂದಿಗೆ ಮಾತನಾಡಿ ಜಾತಿ ಪ್ರಮಾಣ ಪತ್ರದ ಗೊಂದಲವನ್ನೂ ಬಗೆಹರಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ಹುದ್ದೆ ಭರ್ತಿ:

ರಾಜ್ಯದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ 1 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಲೋಕೋಪಯೋಗಿ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮೀಸಲಾತಿಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಅಸಮಾನತೆಗೆ ಶಿಕ್ಷಣ ಮದ್ದು:

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸಮಾನತೆ ದೂರವಾಗಿಲ್ಲ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಶೋಷಿತ ಸಮುದಾಯದ ಪ್ರತಿ ಮನೆಯಿಂದ ಪದವೀಧರರು ಹೊರಬರಬೇಕು. ವೈದ್ಯರು, ಎಂಜಿನಿಯರ್‌ ಸೇರಿದಂತೆ ಐಎಎಸ್‌, ಕೆಎಎಸ್‌ನಂಹ ಹುದ್ದೆಗಳನ್ನು ಪಡೆಯುವ ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು. ಮನೆಯ ಹಿರಿಯರು ಈ ನಿಟ್ಟಿನಲ್ಲಿ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಅಸಮಾನತೆಯನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು ಎಂದು ಡಾ.ಪರಮೇಶ್ವರ್‌ ಕರೆ ನೀಡಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಆದಿ ದ್ರಾವಿಡ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ವಿಧಾನಸೌಧದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಬಲ್ಲಾಳ್‌ ಬಾಗ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್‌ ಪೂಂಜ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ, ಕಾಂಗ್ರೆಸ್‌ ಮುಖಂಡರಾದ ಐವನ್‌ ಡಿಸೋಜ, ಮಿಥುನ್‌ ರೈ, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಭರತ್‌ ಕುಮಾರ್‌ ಎಸ್‌., ಮನೋಜ್‌ ಕೋಡಿಕಲ್‌,ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ್‌ ಉಪ್ಪಿನಂಗಡಿ, ಜಿಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್‌ ಮುಖ್ಯ ಅತಿಥಿಗಳಾಗಿದ್ದರು. ಸಂಘದ ಪದಾಧಿಕಾರಿಗಳು ಇದ್ದರು.

ಆದಿ ದ್ರಾವಿಡ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯ ಸಂಘಟನಾ ಸಂಚಾಲಕ ಪ್ರೇಮನಾಥ ಬಲ್ಲಾಳ್‌ಬಾಗ್‌ ಸ್ವಾಗತಿಸಿದರು. ರೋಹಿತ್‌ ಉಳ್ಳಾಲ್‌ ನಿರೂಪಿಸಿದರು.