ರಾಮನಗರ: ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಮಾಜಿಕ ಭದ್ರತೆ ಒದಗಿಸುವ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲತೆ ಸಾಧಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಅಸಂಘಟಿತ ಕಾರ್ಮಿಕರು ಶ್ರಮ ಜೀವಿಗಳು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಅವರೆಲ್ಲರ ಆಶೀರ್ವಾದವೂ ಇದೆ. ಹೀಗಾಗಿ ಅಸಂಘಟಿತ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಅವರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಅರ್ಹ ಫಲಾನುಭವಿಗಳಿಗೆ ವಂಚಿತರಾಗದಂತೆ ಎಚ್ಚರ ವಹಿಸಬೇಕು ಎಂದರು.
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ಪ್ರಾರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಮಾತ್ರ ನೊಂದಾಯಿಸಲಾಗುತ್ತಿತ್ತು. ಸರ್ಕಾರ ವಿಶೇಷವಾಗಿ ಮುತುವರ್ಜಿ ವಹಿಸಿ ಅದನ್ನು ಇತರೆ ವರ್ಗಗಳಿಗೂ ವಿಸ್ತರಿಸಿದೆ ಎಂದು ತಿಳಿಸಿದರು.ಈಗ ಹೊಸದಾಗಿ ಹಿಂದಳುದ ವರ್ಗಗಳ ಪ್ರವರ್ಗ -1, 2 ಎ, 3 ಎ ಮತ್ತು 3 ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ 91 ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ ಎಂದು ಹೇಳಿದರು.
ಶ್ರಮಿಕ ವಸತಿ ಶಾಲೆ ಪ್ರಾರಂಭ:
ಬಡವರು, ರೈತರು, ಕೂಲಿ ಕಾರ್ಮಿಕರೆಲ್ಲರ ಪ್ರಾರ್ಥನೆ ಫಲವಾಗಿ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಈ ಹಿಂದೆ ಶಾಸಕರಾಗಿದ್ದವರು ನಿಮ್ಮ ಕಷ್ಟ ಸುಖವನ್ನು ಯಾರೂ ಕೇಳಲಿಲ್ಲ. ಆದರೆ, ನಾನು ನಿಮ್ಮ ಮನೆ ಮಗ, ಸಹೋದರನಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಆಶಯದಂತೆ ನವ ರಾಮನಗರ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದೇನೆ ಎಂದರು.
ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳದ ಮೂಲಕ ಉದ್ಯೋಗಾವಕಾಶ ಕಲ್ಪಿಸಿದೆವು. ಅಲ್ಪಸಂಖ್ಯಾತರ ಸಮುದಾಯದ ಬಡ ಕುಟುಂಬಗಳ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನೆರವೇರಿಸಿದೇವು. ಮುಂದಿನ ದಿನಗಲ್ಲಿ ಮತ್ತೆ 150 ಜೋಡಿಗಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಈ ಸಂದರ್ಭದಲ್ಲಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್, ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ಕಾರ್ಮಿಕ ಅಧಿಕಾರಿ ನಾಗೇಂದ್ರ, ಕಾರ್ಮಿಕ ನಿರೀಕ್ಷಕ ಪ್ರದೀಪ್, ಮುಖಂಡರಾದ ಮತೀನ್ ಪಾಷ, ಗುರುವೇಗೌಡ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಶಾಸಕ ಇಕ್ಬಾಲ್ ಹುಸೇನ್ ಅಸಂಘಟಿತ ಕಾರ್ಮಿಕರಿಗೆ ಸವಲತ್ತುಗಳನ್ನು ವಿತರಿಸಿದರು.