ಶಾಸಕರ ವೇತನ ಹೆಚ್ಚಳಕ್ಕೆ ಸಮಿತಿ ಪ್ರಸ್ತಾಪ

KannadaprabhaNewsNetwork |  
Published : Mar 04, 2025, 12:30 AM IST

ಸಾರಾಂಶ

ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಸೋಮವಾರ ಅಧಿವೇಶನದ ಕಲಾಪ ಮುಂದೂಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷ ಯು.ಟಿ.ಖಾದರ್‌, ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಉಭಯ ಸದನಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಯಿತು.

ಸಭೆಯಲ್ಲಿ ಶಾಸಕರ ವೇತನ ಹೆಚ್ಚಳ ಕುರಿತು ಕೆಲ ಶಾಸಕರು ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಗಮನಹರಿಸಲಾಗುವುದು ಎಂಬುದಾಗಿ ಅಶ್ವಾಸನೆ ನೀಡಿದರು ಎಂದು ತಿಳಿದು ಬಂದಿದೆ.

ಶಾಸಕರ ವೇತನ ಹೆಚ್ಚಳ ಸಂಬಂಧ ತಜ್ಞರ ನೇತೃತ್ವದಲ್ಲಿ ಆಯೋಗವೊಂದನ್ನು ರಚಿಸುವುದು ಸೂಕ್ತ. ಆಯೋಗದ ಮೂಲಕ ವೇತನವನ್ನು ವೈಜ್ಞಾನಿಕ ಹೆಚ್ಚಳ ಮಾಡಬೇಕು. ಇದರಿಂದ ಪ್ರತಿಬಾರಿ ಇಂತಿಷ್ಟು ಶೇಕಡವಾರು ವೇತನ ಹೆಚ್ಚಳವಾಗುವಂತೆ ನಿಗಧಿಗೊಳಿಸಲು ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾದವು ಎಂದು ಹೇಳಲಾಗಿದೆ.

ಮೂಲ ವೇತನದಲ್ಲಿ ಶೇ.50ರಷ್ಟು ವೇತನ ಹೆಚ್ಚಳವಾಗುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಈ ಬಗ್ಗೆ ಉಭಯ ಸದನದಲ್ಲಿ ಚರ್ಚೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅಲ್ಲದೇ, ಶಾಸಕರ ಬಹುದಿನಗಳ ಬೇಡಿಕಯಾಗಿರುವ ಶಾಸಕರ ಕ್ಲಬ್‌ಗೆ 20 ಕೋಟಿ ರು. ಬಿಡುಗಡೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಗಿದೆ. ಬಜೆಟ್‌ನಲ್ಲಿ ಅನುದಾನಕ್ಕನುಗುಣವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.

ಇನ್ನುಳಿದಂತೆ ರಾಜ್ಯಪಾಲರ ಭಾಷಣದ ಮೇಲೆ ಮಂಗಳವಾರದಿಂದ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ. ಗುರುವಾರದವರೆಗೆ ಚರ್ಚೆ ನಡೆಯಲಿದ್ದು, ಮುಂದಿನ ಸೋಮವಾರ (ಮಾ.10) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಮಾ.11ರಂದು ವಿಧಾನಪರಿಷತ್‌ನಲ್ಲಿ ಉತ್ತರ ನೀಡಲಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಕಾಂಗ್ರೆಸ್‌ ಸದಸ್ಯ ಟಿ.ಬಿ.ಜಯಚಂದ್ರ ಅವರು ಸೂಚಿಸಲಿದ್ದು, ನಯನಾ ಮೋಟಮ್ಮ ಅನುಮೋದಿಸಲಿದ್ದಾರೆ. ಬಜೆಟ್‌ ಮೇಲಿನ ಚರ್ಚೆಯು ಮಾ.18ರವರೆಗೆ ನಡೆಯಲಿದೆ. 19ರಂದು ವಿಧಾನಸಭೆಯಲ್ಲಿ ಮತ್ತು 20ರಂದು ವಿಧಾನಪರಿಷತ್‌ನಲ್ಲಿ ಸಿದ್ದರಾಮಯ್ಯ ಅವರು ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ.

ಇದೇ ವೇಳೆ ವಿಧೇಯಕಗಳನ್ನು ಅಂಗೀಕರಿಸಿಕೊಳ್ಳುವ ಎರಡು ದಿನ ಮುನ್ನ ಸದನದಲ್ಲಿ ಮಂಡಿಸಬೇಕು. ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಇದು ಸಹಕಾರಿಯಾಗಲಿದೆ. ವಿಧೇಯಕ ಮೇಲಿನ ಚರ್ಚೆಗಳು ನಡೆಯಲು ಅವಕಾಶ ನೀಡಬೇಕು. ಕೊನೇ ಗಳಿಗೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲು ಮುಂದಾದರೆ ಸದಸ್ಯರು ಚರ್ಚಿಸಲು ಸಾಧ್ಯವಿಲ್ಲ. ಹೀಗಾಗಿ ಸಂಬಂಧಪಟ್ಟ ಇಲಾಖಾ ಸಚಿವರು ಗಮನಹರಿಸಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ