ಚುನಾವಣೆಗೆ ಸ್ಪರ್ಧೆ ಖಚಿತ: ಪವಿತ್ರ ಕ್ಷೇತ್ರದಲ್ಲಿ ಬಿಎಸ್‌ವೈ ಬಗ್ಗೆ ಮಾತಾಡಲ್ಲ

KannadaprabhaNewsNetwork |  
Published : Mar 26, 2024, 01:23 AM IST
೨೫ಬಿಹೆಚ್‌ಆರ್ ೪: ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವದಿಸಿದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ನೂರಕ್ಕೆ ನೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಯಾವುದೇ ಸಂಧಾನಕ್ಕೂ ನಾನು ಒಪ್ಪಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ನೂರಕ್ಕೆ ನೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಯಾವುದೇ ಸಂಧಾನಕ್ಕೂ ನಾನು ಒಪ್ಪಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ರಂಭಾಪುರಿ ಪೀಠಕ್ಕೆ ಸೋಮವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತೀ ವರ್ಷದಂತೆ ನಾನು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದೇನೆ. ನಾನು ರಂಭಾಪುರಿ ಸ್ವಾಮೀಜಿ ಅವರ ಬಳಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ.

ಇಲ್ಲಿ ನೀವು (ಮಾಧ್ಯಮದವರು) ಕೇಳುವ ಯಾವ ಪ್ರಶ್ನೆಗೂ ಉತ್ತರ ಕೊಡಲ್ಲ. ಯಡಿಯೂರಪ್ಪನವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪನವರ ಬಗ್ಗೆ ಹೊರಗಡೆ ಏನು ಮಾತನಾಡಬೇಕೋ ಅದನ್ನು ಅಲ್ಲಿಯೇ ಮಾತನಾಡುತ್ತೇನೆ. ಈ ಪವಿತ್ರ ಕ್ಷೇತ್ರದಲ್ಲಿ ಇದ್ದುಕೊಂಡು ರಾಜಕಾರಣ ಮಾಡಲು ನನಗೆ ಇಷ್ಟವಿಲ್ಲ. ದಯವಿಟ್ಟು ಇಲ್ಲಿ ಏನೂ ಕೇಳಬೇಡಿ ಎಂದರು.ಬಿ.ವೈ.ರಾಘವೇಂದ್ರ ಅವರು ಇತ್ತೀಚೆಗೆ ಈಶ್ವರಪ್ಪನವರ ಆಶೀರ್ವಾದ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸನ್ನಿಧಾನದಲ್ಲಿ ನಾನು ಏನೂ ಮಾತನಾಡಲ್ಲ. ರಾಜಕೀಯ ಮಾತನಾಡಿ ಆ ಪಾಪ ಹೊತ್ತುಕೊಳ್ಳಲು ನಾನು ತಯಾರಿಲ್ಲ ಎಂದು ಉತ್ತರಿಸಿದರು.(ಬಾಕ್ಸ್)ರಂಭಾಪುರಿ ಶ್ರೀ ಭೇಟಿ: ಆಶೀರ್ವಾದ

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶ್ರೀಪೀಠದ ಕ್ಷೇತ್ರನಾಥ ವೀರಭದ್ರಸ್ವಾಮಿ ದೇವಾಲಯ, ಜಗದ್ಗುರು ರೇಣುಕಾಚಾರ್ಯ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ನಂತರ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.

ರಂಭಾಪುರಿ ಜಗದ್ಗುರು ಈಶ್ವರಪ್ಪನವರಿಗೆ ಶಾಲು, ಹಾರ ಹಾಕಿ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಬಳಿಕ ಶ್ರೀಗಳೊಂದಿಗೆ ಈಶ್ವರಪ್ಪ ಕೆಲಕಾಲ ವೈಯುಕ್ತಿಕ ಮಾತುಕತೆ ನಡೆಸಿದರು.

ರಂಭಾಪುರಿ ಜಗದ್ಗುರುಗಳು ಈ ಕುರಿತು ಪ್ರತಿಕ್ರಿಯಿಸಿ ಈಶ್ವರಪ್ಪನವರು ಎಂದಿನಂತೆ ಶ್ರೀಪೀಠದ ದರ್ಶನಕ್ಕೆ ಆಗಮಿಸಿದ್ದಾರೆ. ಅವರಿಗೆ ಆಶೀರ್ವಾದ ಮಾಡಲಾಗಿದೆ. ಬೇರೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ ಎಂದರು.೨೫ಬಿಹೆಚ್‌ಆರ್ ೪:

ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ