ಹುಬ್ಬಳ್ಳಿ: ಕಾನೂನು ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆ ಹೊರ ಹಾಕಲು ಸ್ಪರ್ಧೆಗಳು ಸಹಕಾರಿಯಾಗಲಿವೆ ಎಂದು ಕರ್ನಾಟಕ ಕಾನೂನು ಆಯೋಗದ ಸದಸ್ಯ, ವಿಶ್ರಾಂತ ನ್ಯಾಯಮೂರ್ತಿ ಅಶೋಕ ನಿಜಗಣ್ಣವರ ಹೇಳಿದರು.
ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜತೆಗೆ ಸ್ಪರ್ಧೆಗಳಿಂದ ಸಾಕಷ್ಟು ವಿಷಯಗಳನ್ನು ಅರಿತುಕೊಳ್ಳಬಹುದು. ಭಾಷಾ ಕೌಶಲ್ಯ, ಸಂವಹನ ಕಲೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು. ಪಾಲಕರು, ಶಿಕ್ಷಕರಿಗೆ ಗೌರವ ತರುವ ರೀತಿಯಲ್ಲಿ ಸಮಾಜದಲ್ಲಿ ಬೆಳೆಯಬೇಕಿದೆ ಎಂದರು.
ಕಾನೂನು ಶಿಕ್ಷಣ ಇಂದು ಬಹಳ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಪ್ರತಿಯೊಂದು ಕಾನೂನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಸದೃಢ ದೇಶ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದ್ದಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳಾಗಿವೆ. ವಕೀಲರು ನ್ಯಾಯಕ್ಕಾಗಿ ಹೋರಾಡಬೇಕು. ಇಂದು ತಂತ್ರಜ್ಞಾನ ಸಹ ಅಭಿವೃದ್ಧಿಯಾಗಿದೆ. ಕೃತಕ ಬುದ್ಧಿಮತ್ತೆಯನ್ನು ತಪ್ಪು ಕೆಲಸಗಳಿಗೆ ಉಪಯೋಗಿಸಲಾಗುತ್ತಿದೆ. ಈ ಕುರಿತು ಜಾಗೃತಿ ಅವಶ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸಿ. ಬಸವರಾಜು ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು. ವಕೀಲರು ಸಾಮಾಜಿಕ ಜವಾಬ್ದಾರಿ ಅರಿತು ತಮ್ಮ ವೃತ್ತಿಯಲ್ಲಿ ನಿರತರಾಗಬೇಕು. ಸಾಮಾಜಿಕ ಅನಿಷ್ಟ ಪದ್ಧತಿಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ಹೋಗಲಾಡಿಸಬೇಕಿದೆ. ಕಕ್ಷಿದಾರರಿಗೆ ಅರ್ಥವಾಗುವ ರೀತಿಯಲ್ಲಿ ನ್ಯಾಯ ಮಂಡನೆ ಮಾಡಬೇಕು. ಜನತೆ ಇಂದಿಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದಕ್ಕೆ ಚ್ಯುತಿಯಾಗದಂತೆ ಯುವ ವಕೀಲರು ಕಾರ್ಯನಿರ್ವಹಿಸಬೇಕು ಎಂದರು.