ಅಕ್ರಮ ಗಣಿಗಾರಿಕೆ ಬಗ್ಗೆ ದೂರು; ಅಧಿಕಾರಿಗಳಿಂದ ದಿಢೀರ್‌ ದಾಳಿ

KannadaprabhaNewsNetwork |  
Published : Dec 28, 2025, 03:00 AM IST
26ಕೆಎಂಎನ್ ಡಿ22  | Kannada Prabha

ಸಾರಾಂಶ

ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆ ವಿರುದ್ಧದ ದೂರಿನ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಗಣಿಗಾರಿಕೆಗೆ ಬಳಸುತ್ತಿದ್ದ ಹಿಟಾಚಿ ಹಾಗೂ ಇತರೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಮುಂಡುಗದೊರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆ ವಿರುದ್ಧದ ದೂರಿನ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಗಣಿಗಾರಿಕೆಗೆ ಬಳಸುತ್ತಿದ್ದ ಹಿಟಾಚಿ ಹಾಗೂ ಇತರೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಟಿ.ಎಂ.ಹೊಸೂರು, ಅಲ್ಲಾಪಟ್ಟಣ, ಮುಂಡುಗದೊರೆ, ಕಾಳೇನಹಳ್ಳಿ, ಶ್ರೀರಾಂಪುರ ಸೇರಿದಂತೆ ಇತರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಪರವಾನಗಿ ಇಲ್ಲದೆ ಸಿಡಿಮದ್ದು ಸಿಡಿಸುವುದರಿಂದ ಗ್ರಾಮಗಳಲ್ಲಿನ ಮನೆಗಳ ಬಿರುಕು, ಜಮೀನಿನಲ್ಲಿ ಗಣಿ ಧೂಳಿಗೆ ಬೆಳೆಗಳ ಹಾನಿಯಾಗುತ್ತಿತ್ತು.

ಅಲ್ಲದೇ, ಗ್ರಾಮಗಳಲ್ಲಿನ ಜನರ ಆರೋಗ್ಯದ ಮೇಲೆ ಪರಿಣಾಮದಿಂದ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತಿರುವ ಬಗ್ಗೆ ಹಲವು ಸಂಘಟನೆಗಳು, ವಿವಿಧ ಗ್ರಾಮಗಳ ಮುಖಂಡರು ತಹಸೀಲ್ದಾರ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಈ ಹಿಂದೆ ಒತ್ತಾಯಿಸಿದ್ದರು.

ಮುಂಡುಗದೊರೆ ಬಳಿಯ ಸ.ನಂ.351ರ ಸರ್ಕಾರಿ ಗೋಮಾಳ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಾ ಟಿ.ವಿ. ಹಾಗೂ ಭೂ ವಿಜ್ಞಾನಿ ಸುಬ್ರಹ್ಮಣ್ಯ, ಪೊಲೀಸ್ ಇಲಾಖೆ ಡಿವೈಎಸ್ಪಿ ಶಾಂತಮಲ್ಲಪ್ಪ, ವಲಯ ಅರಣ್ಯಾಧಿಕಾರಿ ಶೈಲಜಾ, ಉಪ ವಲಯ ಅರಣ್ಯಾಧಿಕಾರಿ ನಾಗರಾಜ್ ಬಿ.ಎಂ ಹಾಗೂ ಕಂದಾಯ ಅಧಿಕಾರಿಗಳು ಸೇರಿದ ತಂಡ ರಚಿಸಿ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಈ ವೇಳೆ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ನಂತರ ಕಲ್ಲು ಗಣಿಗಾರಿಕೆ ನಡೆಸಲು ಬಳಸುತ್ತಿದ್ದ ಎರಡು ಹಿಟಾಚಿ ಯಂತ್ರಗಳನ್ನು ವಶಪಡಿಸಿಕೊಂಡು ಅರಕೆರೆ ಪೊಲೀಸ್ ಠಾಣೆ ವಶದಲ್ಲಿರಿಸಿದ್ದಾರೆ.

ಈ ಕುರಿತು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ