- ಸೋಷಿಯಲ್ ಮೀಡಿಯಾದಲ್ಲಿ ಧರ್ಮದ್ವೇಷದ ಪೋಸ್ಟ್
- ಕೆಪಿಸಿಸಿಯಿಂದ ಬೆಂಗಳೂರು ಠಾಣೆಗೆ ದೂರು ಸಲ್ಲಿಕೆಕನ್ನಡಪ್ರಭ ವಾರ್ತೆ ಬೆಂಗಳೂರುಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮೂವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ಬಾಬು ನೀಡಿದ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಐಟಿ ಸೆಲ್ನ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದೂರಿನಲ್ಲಿ ಏನಿದೆ?:ಮೇ 4ರಂದು ಸಂಜೆ 5.24ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ, ಬಿಜೆಪಿ ರಾಜ್ಯ ಐಟಿ ಸೆಲ್ನ ಮುಖ್ಯಸ್ಥ ಅಮಿತ್ ಮಾಳವೀಯ ಅವರು ರಾಜ್ಯ ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣದ ‘ಎಕ್ಸ್’ ಖಾತೆಯಲ್ಲಿ ಎಚ್ಚರ ಎಚ್ಚರ ಎಚ್ಚರ ಎಂದು ಒಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.
ಆ ವಿಡಿಯೊದಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಮೊಟ್ಟೆಗಳಂತೆ ಬಿಂಬಿಸಿದ್ದಾರೆ. ಆ ಮೊಟ್ಟೆಗಳಿರುವ ಬಾಸ್ಕೆಟ್ಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಮುಸ್ಲಿಂ ಮೊಟ್ಟೆಯನ್ನು ತಂದಿಡುತ್ತಾರೆ. ಬಳಿಕ ಮೊಟ್ಟೆ ಮರಿಯಾದ ಬಳಿಕ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳ ಮೊಟ್ಟೆಯಿಂದ ಬಂದ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಎಂಬ ಮೊಟ್ಟೆಯಿಂದ ಬರುವ ಮರಿಯ ಬಾಯಿಗೆ ತನ್ನಿಸುವ ಹಾಗೆ ಅನಿಮೇಶನ್ ಮಾಡಿದ್ದಾರೆ.ಬಳಿಕ ಮುಸ್ಲಿಂ ಸಮುದಾಯ ಹೋಲುವ ಪಕ್ಷಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳ ಗೂಡಿನಿಂದ ಒದ್ದು ಓಡಿಸುವಂತೆ ವಿಡಿಯೋದಲ್ಲಿ ತೋರಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿ, ಸಮಯದಾಯಗಳ ಮಧ್ಯೆ ದ್ವೇಷ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.