ಕೊಲೆಯಾದ ಗವಿಸಿದ್ದಪ್ಪ ನಾಯಕ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವರೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದಾರೆ ಎಂದು ಅಬ್ದುಲ್ ರಜಾಕ್ ಹೇಳಿದರು.
ಕೊಪ್ಪಳ:
ಮುಸ್ಲಿಂ ಯುವತಿ ಮದುವೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪೊಲೀಸರೇಕೆ ದೂರು ದಾಖಲಿಸಿಲ್ಲ ಎಂದು ಪ್ರಶ್ನಿಸಿರುವ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್, ಬುಧವಾರ ಕೊಪ್ಪಳ ನಗರ ಠಾಣೆಯಲ್ಲಿ ಯತ್ನಾಳ ವಿರುದ್ಧ ದೂರು ದಾಖಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಯಾದ ಗವಿಸಿದ್ದಪ್ಪ ನಾಯಕ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಯತ್ನಾಳ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವರೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದಾರೆ. ಆದರೆ, ಪೊಲೀಸರು ಈ ವರೆಗೂ ಅವರ ವಿರುದ್ಧ ಸ್ವಯಂಪ್ರೇರಿಯ ದೂರು ದಾಖಲಿಸಿಕೊಂಡಿಲ್ಲ ಎಂದು ಕಿಡಿಕಾರಿದರು.
ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದರಿಂದ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಇದು ಹೇಗೆ ಲವ್ ಜಿಹಾದ್ ಆಗುತ್ತದೆ ಎಂದು ಪ್ರಶ್ನಿಸಿದ ಅಬ್ದುಲ್ ರಜಾಕ್, ಬಿಜೆಪಿಯಿಂದ ಯತ್ನಾಳ ಅವರನ್ನು ಉಚ್ಛಾಟಿಸಿದ್ದು, ಏನಾದರೂ ಮಾಡಿ ಸುದ್ದಿಯಲ್ಲಿ ಇರಬೇಕೆನ್ನುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಪ್ರವಾದಿ ವಿರುದ್ಧ ಹೇಳಿಕೆ ನೀಡಿರುವ ಯತ್ನಾಳ, ಇದೀಗ ₹ 5 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. ಇಷ್ಟಾದರೂ ಪೊಲೀಸರೇಕೆ ಅವರ ವಿರುದ್ಧ ಕ್ರಮವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆಯಾದ ಗವಿಸಿದ್ದಪ್ಪ ಕುಟುಂಬಕ್ಕೆ ₹ 5 ನೀಡದೆ ಈ ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ಹಿಂದೂ ಯುವಕರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು, ರಾಜಕಾರಣ ಮಾಡುವುದಾದರೆ ಮಾಡಿ. ಆದರೆ, ಪ್ರವಾದಿ, ಮುಸ್ಲಿಂರು ಎಂದು ಹೇಳಿಕೆ ನೀಡಿದರೆ ಸಹಿಸಿಕೊಳ್ಳುವುದಿಲ್ಲವೆಂದು ಎಚ್ಚರಿಕೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.