ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮಾತನಾಡಿದ ರೋಮನ್ ಕೆಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೈಸ್ತ ಸಮುದಾಯದ ಭಾವನೆಗೆ ಧಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.
ಸಾವಿರಾರು ವರ್ಷಗಳಿಂದ ಶಾಂತಿಧೂತ ಯೇಸುಕ್ರಿಸ್ತರ ಜನ್ಮದಿನದಂದು ಕ್ರಿಸ್ಮಸ್ ಹಬ್ಬವನ್ನು ವಿಶ್ವದೆಲ್ಲೆಡೆ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಕಿಡಿಗೇಡಿಯೊಬ್ಬ ಕ್ರಿಸ್ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಈತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕಿಡಿಗೇಡಿಗಳ ಬಂಧನವಾಗದಿದ್ದಲ್ಲಿ ಕ್ರೈಸ್ತರು ಒಗ್ಗೂಡಿ ಜಿಲ್ಲಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಅಸೋಸಿಯೇಷನ್ನ ಮಡಿಕೇರಿ, ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಘಟಕಗಳು ಆಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿವೆ.