ಸಮತಾ ಸೈನಿಕ ದಳ ಆಕ್ರೋಶ । ಮಂಡ್ಯ ವೇದಮೂರ್ತಿ ಎಂಬಾತನ ವಿರುದ್ಧ ಪ್ರಕರಣ
ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಯಾಚೆನಹಳ್ಳಿ ಗ್ರಾಮದ ವೇದಮೂರ್ತಿ ಎಂಬಾತ ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಜಾತಿ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎನ್ನಲಾದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಬಗ್ಗೆಯೂ ಆಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿರುವುದು ಕಂಡುಬಂದಿದೆ. ಇಂತಹ ಹೇಳಿಕೆಗಳು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಮಾಜದಲ್ಲಿ ಅಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಯಾಗುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಂತಹ ಹೇಳಿಕೆಗಳಿಂದ ಸಾರ್ವಜನಿಕ ಶಾಂತಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆರೋಪಿತ ವ್ಯಕ್ತಿಯನ್ನು ಭಾರತದಿಂದ ಗಡಿಪಾರು ಮಾಡುವ ಕುರಿತು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಮುಂದೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸಿಕೆಬಿ-2 ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ವಿರುದ್ಧ ಕ್ರಮಕ್ಕೆ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.