ಇಂದಿರಾ ಕ್ಯಾಂಟೀನ್‌ನಲ್ಲಿ ಹೆಚ್ಚಿನ ಹಣ ಪಡೆವ ದೂರು

KannadaprabhaNewsNetwork | Published : Jun 5, 2025 2:55 AM
ಚಿತ್ರದುರ್ಗ: ಇಂದಿರಾ ಕ್ಯಾಂಟೀನ್‍ನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಚಿತ್ರದುರ್ಗ: ಇಂದಿರಾ ಕ್ಯಾಂಟೀನ್‍ನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಇಂದಿರಾ ಕ್ಯಾಂಟೀನ್‍ಗೆ ಬುಧವಾರ ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಮೆನು ಪ್ರಕಾರ ಊಟ ಹಾಗೂ ಉಪಹಾರ ನೀಡುತ್ತಿಲ್ಲ. ಹೊಸ ಮೆನು ನಿಗದಿಪಡಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬುದಾಗಿ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಅಮಾನತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‍ನಲ್ಲಿ ಬೆಳಿಗಿನ ಉಪಹಾರಕ್ಕೆ ರು.5 ಹಾಗೂ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ರು.10 ದರ ನಿಗದಿಪಡಿಸಲಾಗಿದೆ. ಆದಾಗ್ಯೂ ಸಹ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನದಾಗಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳಿವೆ, ಹಾಗಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ರಹೀಂ ಖಾನ್ ಅವರು, ಕ್ಯಾಂಟೀನ್‍ನಲ್ಲಿ ರಾತ್ರಿ ಊಟಕ್ಕಾಗಿ ತಯಾರಾಗಿದ್ದ ಚಪಾತಿ, ಪಲ್ಯ, ಅನ್ನ ಸಾಂಬಾರ್ ಸವಿದು, ಊಟದ ಗುಣಮಟ್ಟ ಪರಿಶೀಲಿಸಿದರು. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಅಧಿಕಾರಿಗಳು ಇದ್ದರು.

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ

ದುರಂತ ದುಃಖದ ಸಂಗತಿ

ಬೆಂಗಳೂರಿನಲ್ಲಿ ಜರುಗಿದ ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಹಲವರು ಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸುತ್ತದೆ. ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಾವಿಗೀಡಾಗಿರುವುದು ತೀವ್ರ ದುಃಖದ ಸಂಗತಿಯಾಗಿದೆ. ಹೆಚ್ಚಿನ ಜನರ ದಟ್ಟಣೆ ಹಾಗೂ ನಿರೀಕ್ಷೆಗೂ ಮೀರಿ ಜನ ಸೇರಿದ್ದರಿಂದಾಗಿ ಈ ಘಟನೆ ಆಕಸ್ಮಿಕವಾಗಿ ನಡೆದಿದೆ. ಗುರುವಾರ ಸಚಿವ ಸಂಪುಟದ ಸಭೆ ನಡೆಯಲಿದ್ದು ಘಟನೆ ಬಗ್ಗೆ ಪ್ರಮುಖ ತೀರ್ಮಾನಗಳಾಗಲಿವೆ ಎಂದು ತಿಳಿಸಿದರು.