-ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅಮರೇಶ ನಾಯಕ ದೂರು
ಕನ್ನಡಪ್ರಭ ವಾರ್ತೆ ದೇವದುರ್ಗ
ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತರ ಅಮರೇಶ ನಾಯಕ ಅವರು ದೂರು ಸಲ್ಲಿಸಿದ್ದಾರೆ.ಕಳೆದ 2024ರ ಏಪ್ರಿಲ್ 4ರಂದು ನರೇಗಾ ಯೋಜನೆಯಡಿ ಮಕ್ಕಳನ್ನು ಬಳಸಿಕೊಂಡು ಕಾಮಗಾರಿ ಮಾಡಲಾಗಿದೆ.
ಈ ಬಗ್ಗೆ ದಾಖಲೆ ಸಮೇತ ದೂರು ನೀಡಿದ ಹಿನ್ನೆಲೆಯಲ್ಲಿ 2024 ಅಗಸ್ಟ್ 18ರಂದು ರಾಯಚೂರು ನಗರದಲ್ಲಿ ಜಿಲ್ಲಾ ಬಾಲ ನ್ಯಾಯ ಮಂಡಳಿಯಲ್ಲಿ ವಿಚಾರಣೆ ನಡೆಸಲಾಗಿದೆ.ವಿಚಾರಣೆ ವೇಳೆ ಅಗತ್ಯ ದಾಖಲೆ ಕೂಡ ಸಲ್ಲಿಸಲಾಗಿತ್ತು. ದಾಖಲೆ ಪರಿಶೀಲಿಸಿದ ನ್ಯಾಯಾಧೀಶರು, ಕಾರ್ಮಿಕ ಇಲಾಖೆ ಕಡೆಯಿಂದ ಪ್ರಕಣ ದಾಖಲಿಸುವುದಾಗಿ ಭರವಸೆ ನೀಡಿದ್ದರು.
ಅದರೆ, ಇದುವರೆಗೂ ದೂರುದಾರರಿಗೆ ಮಾಹಿತಿ ನೀಡಿಲ್ಲ. ಪ್ರಕಣದ ವಿಷಯ ಎಲ್ಲಿಗೆ ಬಂದಿದೆ ಎನ್ನುವ ಬಗ್ಗೆ ತಿಳಿಸಿಲ್ಲ ಎಂದು ಆರೋಪಿಸಿದ್ದಾರೆ.ಕೂಡಲೇ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.-----------------
ಚಿತ್ರ: ಅಮರೇಶ ನಾಯಕ