ಕುಡಿಯುವ ನೀರಿನ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಆರ್. ವಿಶಾಲ್ ಸೂಚನೆ

KannadaprabhaNewsNetwork | Published : Jan 18, 2024 2:02 AM

ಸಾರಾಂಶ

ಪ್ರಗತಿಯಲ್ಲಿರುವ ಬಹುಗ್ರಾಮ ಹಾಗೂ ಜಲ ಜೀವನ್ ಮಿಷನ್ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಹಾವೇರಿ

ಬೇಸಿಗೆ ನಗರ ಮತ್ತು ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಾರ್ಯಾಚರಣೆ ಪರಿಶೀಲನೆ ನಡೆಸಿ, ಪ್ರಗತಿಯಲ್ಲಿರುವ ಬಹುಗ್ರಾಮ ಹಾಗೂ ಜಲ ಜೀವನ್ ಮಿಷನ್ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯಕ್ರಮಗಳು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವಸ್ತುಸ್ಥಿತಿ ಕುರಿತಂತೆ ಪರಿಶೀಲನೆ ನಡೆಸಿದರು.

ಭದ್ರಾದಿಂದ ನೀರು: ಬೇಸಿಗೆ ಅವಧಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ೦.೬೩೧ ಟಿಎಂಸಿ ನೀರು ಬಿಡುಗಡೆಗೆ ಈಗಾಗಲೇ ಪ್ರಾದೇಶಿಕ ಆಯುಕ್ತರ ಮೂಲಕ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ತ್ವರಿತವಾಗಿ ಜಲಾಶಯಕ್ಕೆ ನೀರು ಬಿಡುಗಡೆಗೊಳಿಸಲು ಜಲಸಂಪನ್ಮೂಲ ಕಾರ್ಯದರ್ಶಿಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಫೋನ್ ಮೂಲಕ ಮನವಿ ಮಾಡಿಕೊಂಡರು.

೧೪ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿ ಬಳಕೆ: ಜಿಲ್ಲೆಯ ನಗರ ಪ್ರದೇಶದಲ್ಲಿ ಸದ್ಯಕ್ಕೆ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ೧೪೦ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೭೨ ಹಳ್ಳಿಗಳನ್ನು ಸಮಸ್ಯಾತ್ಮಕ ಹಳ್ಳಿಗಳೆಂದು ಗುರುತಿಸಲಾಗಿದೆ. ಈ ಪೈಕಿ ೨೧೪ ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ ಅವಶ್ಯವಿರುವ ೧೪ ಗ್ರಾಮಗಳಿಗೆ ೨೧ ಖಾಸಗಿ ಕೊಳವೆಬಾವಿಗಳನ್ನು ಒಪ್ಪಂದದ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುತ್ತಿದೆ. ಮುಂದಿನ ೫೧ ವಾರಗಳ ಕಾಲ ಜಾನುವಾರುಗಳಿಗೆ ಯಾವುದೇ ಮೇವಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಗೆ ಸರಬರಾಜಾದ ೧೦,೫೨೮ ಮೇವಿನ ಕಿಟ್‌ಗಳ ವಿತರಣೆ ಕುರಿತಂತೆ ಅಧಿಕಾರಿಗಳು ಉಸ್ತುವಾರಿ ಕಾರ್ಯದರ್ಶಿಗಳಿಗೆ ವಿವರಿಸಿದರು.

ತೋಟಗಾರಿಕೆ ಹಾಗೂ ಕೃಷಿ ಹಿಂಗಾರು ಬಿತ್ತನೆ, ಬೆಳೆಯ ವಸ್ತುಸ್ಥಿತಿ, ಬೆಳೆವಿಮೆ ವಿವರ, ಮಧ್ಯಂತರ ಪರಿಹಾರ, ಪಿ.ಎಂ. ಕಿಸಾನ್ ಹಾಗೂ ಇ-ಕೆವೈಸಿ ಪ್ರಗತಿ, ಫ್ರೂಟ್ ಐಡಿ ನೋಂದಣಿ ಮಾಹಿತಿ ಪಡೆದುಕೊಂಡ ಅವರು, ಜಿಲ್ಲೆಗೆ ಬರ ಪರಿಹಾರ ಅನುದಾನ ಬಿಡುಗಡೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೃಷಿ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಮನವಿ ಮಾಡಿದರು.

ಮೂರರಿಂದ ಆರು ತಿಂಗಳ ಅವಧಿಯ ಕೋರ್ಟ್ ಕೇಸ್‌ಗಳನ್ನು ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಶೂನ್ಯಕ್ಕೆ ಇಳಿಸಬೇಕು. ಆರ್‌ಟಿಸಿ ಮ್ಯೂಟೇಷನ್ ಹಾಗೂ ಆರ್‌ಟಿಸಿ ಕರೆಕ್ಸನ್ ತ್ವರಿತವಾಗಿ ಕಾಲಮಿತಿಯೊಳಗೆ ವಿಲೇಗೊಳಿಸಬೇಕು. ಭೂಮಾಪನ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇಗೊಳಿಸುವಂತೆ ಸೂಚನೆ ನೀಡಿದರು.

ನೀರಿನ ಕಾಮಗಾರಿ ತ್ವರಿತ: ಮೊದಲ ಹಂತದ ಜಲಜೀವನ್ ಮಿಷನ್ ಯೋಜನೆ ೩೫೧ ಕಾಮಗಾರಿ, ಎರಡನೇ ಹಂತದಲ್ಲಿ ೨೩೭ ಹಾಗೂ ಮೂರನೇ ಹಂತದಲ್ಲಿ ೧೨೮ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಈ ಪೈಕಿ ಒಟ್ಟಾರೆ ೪೯೩ ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಬಹುಗ್ರಾಮ ಯೋಜನೆಯಡಿ ಜಿಲ್ಲೆಯ ೫೪೪ ಹಳ್ಳಿಗಳಿಗೆ ನೀರು ಪೂರೈಸುವ ಮೂರು ಯೋಜನೆಗಳು ಶೇ.೪೫ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಅಭಿಯಂತರರು ಮಾಹಿತಿ ನೀಡಿದರು.

ವಾರದಲ್ಲಿ ಜನ್‌ದನ್ ವರದಿ: ಒಂದು ವಾರದೊಳಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಶಾಖಾವಾರು ಜನ್‌ದನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಿ ಸಲ್ಲಿಸಬೇಕು. ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ್‌ದನ್ ಖಾತೆ ತೆರೆಯಲು ಕ್ರಮವಹಿಸಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಎಲ್ಲ ಸರ್ಕಾರಿ ಅಧಿಕಾರಿ ನೌಕರರು ಕಡ್ಡಾಯವಾಗಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗೆ ನೋಂದಾಯಿಸಿಕೊಳ್ಳಬೇಕು. ಪ್ರತಿ ಸಿಬ್ಬಂದಿಗಳ ವಿಮಾ ವಿವರವನ್ನು ಎಚ್‌ಆರ್‌ಎಂಎಸ್‌ನ ಇಎಸ್‌ಎಸ್ ಪೋರ್ಟ್‌ನಲ್ಲಿ ಲಾಗಿನ್‌ನಲ್ಲಿ ದಾಖಲಿಸಬೇಕು. ಮುಂದಿನ ಸಭೆಗೆ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಪರಿಶೀಲನೆ ನಡೆಸಿದರು. ಲಿಂಗಾನುಪಾತ, ವಿಕಲಚೇತನ, ಸೇವಾ ಮತದಾರರ ನೋಂದಣಿ, ಯುವ ಮತದಾರರ ನೋಂದಣಿ, ಸೇರ್ಪಡೆ, ಮಾರ್ಪಾಡು, ತಿದ್ದುಪಡಿ, ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ವಿವರಗಳನ್ನು ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಉಪವಿಭಾಗಾಧಿಕಾರಿಗಳಾದ ಚೆನ್ನಪ್ಪ ಹಾಗೂ ಮಹ್ಮದ್ ಖಿಜರ್, ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Share this article