ನಿಗದಿತ ಅವಧಿಯಲ್ಲಿ ಜನರ ಕೆಲಸ ಮುಗಿಸಿ: ಶಾಸಕ ಪಾಟೀಲ

KannadaprabhaNewsNetwork |  
Published : Aug 25, 2026, 03:00 AM IST
ಪ್ರಜಾಸೇವಾ ಆಂದೋಲನದಲ್ಲಿ ಶಾಸಕ ಎಂ.ಆರ್. ಪಾಟೀಲ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. | Kannada Prabha

ಸಾರಾಂಶ

ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಥವಾ ಸಮಸ್ಯೆ ನಿರ್ಲಕ್ಷಿಸುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧ ಕ್ರಮ.

ಕುಂದಗೋಳ:

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಜನರಿಂದ ಸ್ವೀಕರಿಸುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ನಿಗದಿತ ಕಾಲಮಿತಿಯೊಳಗೆ ಪರಿಹರಿಸಬೇಕು ಎಂದು ಶಾಸಕ ಎಂ.ಆರ್. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಥವಾ ಸಮಸ್ಯೆ ನಿರ್ಲಕ್ಷಿಸುವುದು ಕಂಡುಬಂದರೆ ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಸಿದರು.

ಆಂದೋಲನದಲ್ಲಿ ಒಟ್ಟು 35 ಅರ್ಜಿ ಸ್ವೀಕರಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪ್ರತಿಯೊಂದು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಇತ್ಯರ್ಥಪಡಿಸಬೇಕು. ಅಗತ್ಯವಿದ್ದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದರು.

ಕುಂದಗೋಳದ ಕೆರೆಯಲ್ಲಿ ಜಾನುವಾರುಗಳ ಮೈತೊಳೆಯುತ್ತಿರುವುದರಿಂದ ನೀರು ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರಾದ ಸಂಭಾಜಿ ತಡಸದ ಹಾಗೂ ಮಂಜು ಹಿರೇಮಠ ದೂರು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಕೆರೆಯ ಅಭಿವೃದ್ಧಿಗೆ ಈಗಾಗಲೇ ಅನುದಾನ ನೀಡಲಾಗಿದ್ದು, ಕುಡಿಯುವ ನೀರು ಕಲುಷಿತಗೊಳ್ಳದಂತೆ ಆದ್ಯತೆ ಮೇರೆಗೆ ನೀರಿನ ತೊಟ್ಟಿಗಳನ್ನು ನಿರ್ಮಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಅಗತ್ಯ ಮೂಲಸೌಕರ್ಯ ಕಲ್ಪಿಸದೆ ಅನಧಿಕೃತ ಲೇಔಟ್ ನಿರ್ಮಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು. ತಾಲೂಕಿನಾದ್ಯಂತ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ನಿರ್ದೇಶನ ನೀಡಿದರು.

ಸಂಶಿ ಗ್ರಾಮದ ರಸ್ತೆ ಬದಿಯ ಅನಧಿಕೃತ ಅಂಗಡಿಗಳ ತೆರವಿಗೂ ಸೂಚಿಸಲಾಯಿತು. ಸಂಶಿ-ಅತ್ತಿಗೇರಿ ಸೇತುವೆ ಕಾಮಗಾರಿ ಕಳಪೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಬಿಲ್ ತಡೆಹಿಡಿಯಲಾಗಿದೆ. ಗುಣಮಟ್ಟದ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದರು.

ಈ ವೇಳೆ ತಹಸೀಲ್ದಾರ್ ರಾಜು ಮಾವರಕರ, ತಾಪಂ ಇಒ ರೇಖಾ ಗಡ್ಡದವರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನವೋದಯ ಸಹಕಾರ ಸಂಘ: ಶೇ.9 ಡಿವಿಡೆಂಡ್ ಘೋಷಣೆ
ಭಾಗಮಂಡಲ ವಲಯ ಪ್ರೌಢಶಾಲೆ ವಿಭಾಗ ಕ್ರೀಡಾಕೂಟ