3 ತಿಂಗಳಲ್ಲಿ ಶಾಲಾ ಕೊಠಡಿ ದುರಸ್ತಿ ಪೂರ್ಣಗೊಳಿಸಿ

KannadaprabhaNewsNetwork |  
Published : Feb 26, 2025, 01:04 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್ | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾ ಪಂಚಾಯಿತ ಸಭಾಂಗಣದಲ್ಲಿ ಮಂಗಳವಾರ ನಡದೆ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು.

ದಿಶಾ ಸಭೆಯಲ್ಲಿ ಡಿಡಿಪಿಐ ವಿರುದ್ಧ ಸಂಸದ ಕಾರಜೋಳ ತೀವ್ರ ಅಸಮಧಾನ । ಶಾಲಾ ಕಟ್ಟಡಗಳ ಅಭಿವೃದ್ಧಿ ಹಿನ್ನಡೆಗೆ ಕೆಂಡಾಮಂಡಲ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಾಲಾ ಕೊಠಡಿಗಳ ದುರಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಅಭಿವೃದ್ಧಿ ಪಾಠ ಮಾಡಿದರು. ವೈಫಲ್ಯಕ್ಕೆ ನೀವೇ ಕಾರಣವೆಂದು ನೇರ ಆಪಾದಿಸಿದರು. ಕೊಠಡಿಗಳ ದುರಸ್ತಿ ಕಾರ್ಯವನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಸಭೆಯ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದ ಗೋವಿಂದ ಕಾರಜೋಳ, ಜಿಲ್ಲೆಯ ವಿವಿಧೆಡೆ ಬಹುತೇಕ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲಾವ್ಯಸ್ಥೆಯಲ್ಲಿರುವುದನ್ನು ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳಿಗೆ ಕಡು ಬಡುವರ ಮಕ್ಕಳು ಬರುತ್ತಾರೆ. ಶಾಲಾ ಕೊಠಡಿಗಳ ದುರಸ್ತಿಗಾಗಿ ಕೆಎಂಇಆರ್‌ಸಿ, ಡಿಎಂಎಫ್ ಅನುದಾನ ಸೇರಿದಂತೆ ಜಿಲ್ಲೆಗೆ 3,700 ಕೋಟಿ ಅನುದಾನ ದೊರೆತಿದೆ. ಆದಾಗ್ಯೂ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿಲ್ಲ. ನಿಮ್ಮ ವೈಫಲ್ಯವೇ ಕಾರಣ ಎಂದರು.

ಜಿಲ್ಲೆಯ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯ, ಆಸ್ಪತ್ರೆ ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗಳನ್ನು ಸುಸಜ್ಜಿತವಾಗಿ ಹಾಗೂ ಅತ್ಯಾಧುನಿಕವಾಗಿ ನಿರ್ಮಿಸಬೇಕು.

ಈ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ತ್ವರಿತವಾಗಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಒಟ್ಟು 609 ಸರ್ಕಾರಿ ಪ್ರಾಥಮಿಕ ಶಾಲೆಗಳು ಇದ್ದು, ಈ ಪೈಕಿ ಆರ್‌ಸಿಸಿ ಮೇಲ್ಛಾವಣಿ, ಶೀಟ್ ಹಾಗೂ ಹೆಂಚಿನ ಮೇಲ್ಛಾವಣಿ ಹೊಂದಿರುವ ಶಾಲೆಗಳು ಎಷ್ಟು ಎಂಬುದರ ಬಗ್ಗೆ ತಾಲೂಕುವಾರು ವಿವರ ನೀಡಬೇಕು. ಶಾಲೆಗಳ ದುರಸ್ತಿಗಾಗಿ ಒದಗಿಸಲಾಗಿರುವ ಅನುದಾನದ ಖರ್ಚು ವೆಚ್ಚದ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ರಸ್ಟ್ ಮೂಲಕ ಶಾಲಾ ಬ್ಯಾಗ್, ಪುಸ್ತಕ, ಅತ್ಯುತ್ತಮವಾದ ಬಟ್ಟೆಗಳನ್ನು ವಿತರಣೆ ಮಾಡಿಸಲು ಕ್ರಮ ವಹಿಸಲಾಗುವುದು. ಮುಂಬರುವ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ತಾಲ್ಲೂಕುವಾರು ಪ್ರಾಥಮಿಕ ಶಾಲೆಗಳ ಸಂಪೂರ್ಣ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಬೇಕು ಸೂಚಿಸಿದರು.

ಜಿಲ್ಲೆಯಲ್ಲಿ 29 ತಜ್ಞ ವೈದ್ಯರ ಕೊರತೆ ಇದೆ. ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಮೂರು ಬಾರಿ ಪತ್ರಿಕೆ ಪ್ರಕಟಣೆ ನೀಡಿದ್ದು, ಇಬ್ಬರು ಸ್ತ್ರೀರೋಗ ತಜ್ಞರು ಮಾತ್ರ ಹಾಜರಾಗಿದ್ದು, ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆ-1 ಹಾಗೂ ಬೆಲಗೂರು-1 ಹುದ್ದೆಗೆ ನೇಮಕ ಮಾಡಲಾಗಿದೆ. ಉಳಿದಂತೆ ಯಾವ ತಜ್ಞ ವೈದ್ಯರು ಹಾಜರಾಗಿರುವುದಿಲ್ಲ. ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಮೊತ್ತೊಮ್ಮೆ ಪತ್ರಿಕಾ ಪ್ರಕಟಣೆ ನೀಡಿ ನೇರ ಸಂದರ್ಶನ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕೋಲ್ಡ್ ಸ್ಟೋರೇಜ್ ತೀರಾ ಅವಶ್ಯಕವಾಗಿದ್ದು, ಕೋಲ್ಡ್ ಸ್ಟೋರೇಜ್‍ಗೆ 10 ಲಕ್ಷ ರು.ಅನುದಾನವನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಈ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕರು ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಕಾರಣಕ್ಕೂ ಕಾಟಾಚಾರದ ಕೆಲಸ ಆಗಬಾರದು ಎಂದು ಸಂಸದ ಗೋವಿಂದ ಕಾರಜೋಳ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್‍ಗೆ ಸೂಚಿಸಿದರು.

ಎರಡು ವರ್ಷ ಪೂರ್ಣಗೊಂಡರೂ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಮುಕ್ತಾಯಗೊಂಡಿಲ್ಲ. ಗ್ರಾಮಗಳಲ್ಲಿ ರಸ್ತೆ ಅಗೆದಿರುವುದರಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನೀವು ಕಾಮಗಾರಿಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡುತ್ತಿಲ್ಲ ಎಂದು ತಿಳಿಸಿದ ಸಂಸದರು, ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ನಿಗಧಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ಒಂದು ವೇಳೆ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ವಜಾಗೊಳಿಸಬೇಕು ಎಂದು ತಾಕೀತು ಮಾಡಿದರು.

ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಅಭಿಯಂತರರು ಚಿತ್ರದುರ್ಗದಲ್ಲಿ ವಾರದಲ್ಲಿ ಎರಡು ದಿನ ಅಂದರೆ ಗುರುವಾರ ಮತ್ತು ಶುಕ್ರವಾರ ಕರ್ತವ್ಯ ನಿರ್ವಹಿಸಬೇಕು. ಈ ಕುರಿತು ಆದೇಶ ಪತ್ರ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ.ಸಂತೋಷ್ ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ