ಹೊಸಪೇಟೆ: ಜಿಲ್ಲೆಯಲ್ಲಿ ಪ್ರಗತಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ನೀರಿನಾಸರೆ ಗಣತಿಯನ್ನು ಸರ್ಕಾರದ ನಿರ್ದೇಶನದಂತೆ ಜೂ.15ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚಿಸಿದರು.
ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಹಸಿಲ್ದಾರರೊಂದಿಗೆ ಸೂಕ್ತ ಸಮನ್ವಯ ಸಾಧಿಸಿ, ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಪ್ರಕೃತಿ ವಿಕೋಪ, ಬರಗಾಲ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ಸೌಲಭ್ಯ ಮತ್ತು ಪರಿಹಾರ ಸಿಗಬೇಕಾದರೆ ಬೆಳೆ ಕಟಾವು ಪ್ರಯೋಗ ಅಂಕಿ-ಅಂಶಗಳು ನಿಖರವಾಗಿರಬೇಕು. ತಪ್ಪು ಲೆಕ್ಕಾಚಾರಗಳಿಂದಾಗಿ ಯಾವೊಬ್ಬ ರೈತನಿಗೂ ಅನ್ಯಾಯವಾಗಬಾರದು ಎಂದು ಅವರು ಎಚ್ಚರಿಸಿದರು.
ಜಿಲ್ಲೆಯಾದ್ಯಂತ ಬೆಳೆ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಹಾಯಕ ಕೃಷಿ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಗಳು ತಮಗೆ ಸಂಬಂಧಿಸಿದ ವಿಮಾ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಜಂಟಿಯಾಗಿ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಬೆಳೆ ಕಟಾವಿನ ಪ್ರಕ್ರಿಯೆಗಾಗಿ ನಿಗದಿಪಡಿಸಲಾಗಿರುವ ತಾಂತ್ರಿಕ ಆ್ಯಪ್ನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.ಬೆಳೆ ಕಟಾವು ನಡೆಯುವ ಸಮಯದಲ್ಲಿ ಸಂಬಂಧಪಟ್ಟ ವಿಮಾ ಕಂಪನಿಯ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಇದರೊಂದಿಗೆ, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನಮೂನೆ 1 ಮತ್ತು 2ರ ದಾಖಲೀಕರಣ ಕೂಡಲೇ ಪೂರ್ಣಗೊಳಿಸಬೇಕು. ರೈತರ ಬೆಳೆ ವಿಮೆ ಪ್ರಕ್ರಿಯೆಗೆ ಪೂರಕವಾಗಿರುವುದರಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.