ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ರವರ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ವಿತರಣೆ ಮಾಡುವಂತೆ ಹಾಗೂ ಪ್ರಚಾರಕ್ಕಾಗಿ ನಗರದ ಮುಖ್ಯ ಭಾಗಗಳಲ್ಲಿ ಫೆಕ್ಸ್ಗಳನ್ನು ಅಳವಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೂವಿನ ಅಲಂಕಾರ, ವೇದಿಕೆ, ವಿದ್ಯುತ್, ಕುಡಿಯುವ ನೀರು, ಲಘು ಉಪಹಾರ, ಪೊಲೀಸ್ ಬಂದೋಬಸ್ತ್, ಕಲಾತಂಡಗಳು, ಕಿರುಹೊತ್ತಿಗೆ ವಿತರಣೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮೆರವಣಿಗೆ: ಡಾ.ಬಾಬು ಜಗಜೀವನರಾಂ ಜಯಂತಿಯಂದು ಸೈನ್ಸ್ ಮೈದಾನದಿಂದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಪಾಲಿಕೆಯಿಂದ ಈ ಮಹಾತ್ಮರ ಭಾವಚಿತ್ರಗಳನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬಂದು ಸೇರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಇಬ್ಬರು ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮಗಳು ಬೆಳಗ್ಗೆ 11ಕ್ಕೆ ನಡೆಸಲಾಗುವುದು. ಮುಖಂಡರ ಸಲಹೆಯಂತೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ನಗರದಲ್ಲಿರುವ ಅಂಬೇಡ್ಕರ್ ನಗರಕ್ಕೆ ದೀಪಾಲಂಕಾರ ಹಾಗೂ ಪಾಲಿಕೆ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕಲು ಮೆಟ್ಟಿಲು ಅಥವಾ ಪೂರಕ ವ್ಯವಸ್ಥೆ ಮಾಡುವಂತೆ ಸಲಹೆಗಳನ್ನು ನೀಡಿದರು.ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಂಬೇಡ್ಕರ್ ನಗರದಲ್ಲಿ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಲು ಹಾಗೂ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಯನ್ನು ಪಾಲಿಷ್ ಮಾಡಿಸಿ, ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು ಹಾಗೂ ಮಾಲಾರ್ಪಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿ. ಅಭಿಷೇಕ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಎಎಸ್ಪಿ ಕಾರಿಯಪ್ಪ, ಜಿ.ಪಂ.ಉಪಕಾರ್ಯದರ್ಶಿ ಸುಜಾತ, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.---
ಡಾ.ಬಾಬು ಜಗಜೀವನರಾಂ ಭವನದ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಂಡಿಲ್ಲ. ಬಾಕಿ ಇರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಈಗ ಯಾವುದೇ ತೊಡಕು ಇಲ್ಲವಾಗಿದ್ದು, ಇನ್ನು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಂಡು ಮೇ ತಿಂಗಳಲ್ಲಿ ಉದ್ಘಾಟನೆಯಾಗಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು.- ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ.