ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೊಳಿಸಿ: ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕರೆ

KannadaprabhaNewsNetwork |  
Published : Jun 07, 2025, 12:35 AM ISTUpdated : Jun 07, 2025, 12:36 AM IST
5ಬಾಲ | Kannada Prabha

ಸಾರಾಂಶ

ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬಾಲಕಾರ್ಮಿಕ ಪದ್ಧತಿ ಸಮಾಜದಲ್ಲಿ ಅನಿಷ್ಠ ಪಿಡುಗಾಗಿದೆ. ಜಿಲ್ಲೆಯಲ್ಲಿ ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರೊಂದಿಗೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಮಲ್ಪೆ ಮೀನುಗಾರಿಕೆಯ ಹರಾಜು ಸ್ಥಳಗಳಲ್ಲಿ, ಕೆಲವು ವಾಣಿಜ್ಯ ಸ್ಥಳಗಳಲ್ಲಿ, ಕಲ್ಲುಕ್ವಾರಿಗಳಲ್ಲಿ ಮರಳು ತೆಗೆಯುವ ಪ್ರದೇಶಗಳಿಗೆ ಹಠಾತ್ ದಾಳಿ ನಡೆಸಿ, ಮಕ್ಕಳು ನಿಯೋಜನೆಗೊಂಡಿರುವುದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಕೆಲವು ವರ್ಷಗಳ ಹಿಂದೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಾಗಿ ಕಂಡು ಬಂದ ಮಕ್ಕಳಿಗೆ ಬಾಲ ಕಾರ್ಮಿಕ ಪುನರ್ವಸತಿ ನಿದಿ ಹಾಗೂ ಕಾರ್ಪಸ್ ನಿಧಿ ಒಳಗೊಂಡ ಒಟ್ಟು 35000 ರು.ಗಳನ್ನು ಅವರಿಗೆ ವಿದ್ಯಾಭ್ಯಾಸಕ್ಕಾಗಿ 18 ವರ್ಷ ತುಂಬಿದ ಮೂರು ತಿಂಗಳ ಒಳಗಾಗಿ ಕಾಯಿದೆ ಅನ್ವಯ ನೀಡಬೇಕು. ಆದರೆ ಅನೇಕ ಪ್ರಕರಣಗಳಲ್ಲಿ ನೀಡದೇ ಇರುವುದು ಕಂಡು ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೂಡಲೇ ಮಕ್ಕಳಿಗೆ ಅನುದಾನವನ್ನು ನೀಡಬೇಕು ಎಂದು ಸೂಚನೆ ನೀಡಿದರು.ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಸಂಸ್ಥೆಯ ವಿರುದ್ಧ ಹಾಕಿರುವ ಮೊಕದ್ದಮೆಗಳನ್ನು ನಿರಂತರವಾಗಿ ಅನುಕರಣೆ ಮಾಡುವುದರೊಂದಿಗೆ ತಪ್ಪಿತಸ್ಥರಿಗೆ ದಂಡ ಹಾಗೂ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು ಎಂದ ಅವರು, ಪುನರಾವರ್ತಿತವಾಗಿ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಂಡ ಸಂಸ್ಥೆ ಅಥವಾ ವಾಣಿಜ್ಯ ಉದ್ಯಮಿಗಳಿದ್ದಲ್ಲಿ ಅಂತಹ ಸಂಸ್ಥೆಯ ಪರವಾನಿಗೆಯನ್ನು ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸುವಂತೆ ವೃತ್ತ ನಿರೀಕ್ಷಕರು ನೋಡಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಭಿಕ್ಷಾಟನೆಯನ್ನು ಸಣ್ಣ ಮಗುವಿನೊಂದಿಗೆ ತಾಯಂದಿರು ಮಾಡುತ್ತಿರುವ ಪ್ರಕರಣಗಳು ಆಗಿವೆ. ಅವರನ್ನು ನಿರಾಶ್ರಿತರ ಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲು ನೆರೆಯ ದಕ್ಷಿಣ ಕನ್ನಡ ಜಿಲ್ಲೆಗೆ ಕಳುಹಿಸಿಕೊಟ್ಟಾಗ ಸಣ್ಣ ಮಕ್ಕಳನ್ನು ನಿರಾಶ್ರಿತ ಕೇಂದ್ರದಲ್ಲಿ ನಿಯೋಜಿಸಲು ಅವಕಾಶವಿಲ್ಲ ಎಂಬ ಕಾರಣ ಹೇಳುತ್ತಾರೆ. ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಒಟ್ಟು 1032 ತಪಾಸಣೆ ನಡೆಸಿದಾಗ, 2 ಅಪಾಯಕಾರಿ ಹಾಗೂ 3 ಅಪಾಯಕಾರಿಯಲ್ಲದ ಸಂಸ್ಥೆಗಳಲ್ಲಿ ಕಿಶೋರ ಕಾರ್ಮಿಕರು ಕಾರ್ಯನಿರ್ವಹಿಸಿತ್ತಿರುವ ಬಗ್ಗೆ ಒಟ್ಟು 5 ಪ್ರಕರಣಗಳು ಪತ್ತೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕಿ ಅಮೃತಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ