ದೊಡ್ಡಬಳ್ಳಾಪುರ/ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ, ಜಿಪಂ, ತಾಪಂ ಹಾಗೂ ಸ್ಥಳೀಯ ಆಡಳಿತದ ಸಹಯೋಗದಲ್ಲಿ ವಿಜಯಪುರ ಟೌನ್ ಹಾಗೂ ಬೂದಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಮಾಹಿತಿ ನೀಡುವ ಸಮಾವೇಶದಲ್ಲಿ ಅವರು ಮಾತನಾಡಿದರು.ಸರ್ಕಾರ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ, ಸದೃಢರನ್ನಾಗಿ ಮಾಡಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಐದು ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಜೀವನ ಸುಧಾರಣೆ ಆಗಿದೆ. ಆರ್ಥಿಕವಾಗಿ ಸಬಲರಾಗಿದ್ದಾರೆ, ಆಗುತ್ತಿದ್ದಾರೆ ಎಂದು ಸಚಿವರು ಹೇಳಿದರು.
ಉಚಿತ ಬೆಳಕು-ಸುಸ್ಥಿರ ಬದುಕು:ಉಚಿತ ಬೆಳಕು ಸುಸ್ಥಿರ ಬದುಕು ಗೃಹಜ್ಯೋತಿಯ ಉದ್ದೇಶವಾಗಿದ್ದು ಜಿಲ್ಲೆಯಲ್ಲಿ 3,54,304 ಗ್ರಾಹಕರು ನೋಂದಾಯಿಸಿಕೊಂಡಿದ್ದ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹಸಿವು ಮುಕ್ತ ಕರ್ನಾಟಕ ಮಾಡುವ ಹಿತದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,99, 979 ಅರ್ಹ ಫಲಾನುಭವಿಗಳಿಗೆ 11, 67,01,940 ರೂ ಗಳ ಹಣವನ್ನು ಡಿ.ಬಿ.ಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.
ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದ ದೇವನಹಳ್ಳಿ ತಾಲೂಕಿನಲ್ಲಿ ಬಿ.ಎಂ.ಟಿ.ಸಿ ಯಲ್ಲಿ ಯೋಜನೆ ಪ್ರಾರಂಭದಿಂದ ಇಲ್ಲಿಯ ತನಕ ಸುಮಾರು 6,91,292 ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆಯ ಲಾಭವನ್ನು ಪಡೆದುಕೊಂಡು ಇರುತ್ತಾರೆ.ಗೃಹಲಕ್ಷ್ಮಿಯಡಿ 2.01 ಲಕ್ಷ ಫಲಾನುಭವಿಗಳು:
ಗೃಹಲಕ್ಷ್ಮಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,01,781 ಫಲಾನುಭವಿಗಳು ನೋಂದಣಿಯಾಗಿದ್ದು ಫಲಾನುಭವಿಗಳ ಕುಟುಂಬಕ್ಕೆ ಮಾಸಿಕವಾಗಿ 2000 ರೂಗಳು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿರುತ್ತದೆ. ಯುವನಿಧಿ ಯೋಜನೆಯು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಪದವಿ ಮುಗಿಸಿ 180 ದಿನಗಳು ಆದರೂ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಮಾಸಿಕರು 3000 ಮತ್ತು ಡಿಪ್ಲೋಮಾ ಪದವೀಧರರಿಗೆ ಮಾಸಿಕ ರು.1500 ಗಳನ್ನು 24 ತಿಂಗಳ ಅವರಿಗೆ ನೀಡುವ ಯೋಜನೆಯಾಗಿದೆ ಈ ಯೋಜನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1591 ನಿರುದ್ಯೋಗಿಗಳು ನೋಂದಣಿಯಾಗಿದ್ದು ಇವರ ಬ್ಯಾಂಕ್ ಖಾತೆಗಳಿಗೆ ಅನುದಾನ ವರ್ಗಾಯಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.ಜಿಲ್ಲೆಯಲ್ಲಿ 17.57 ಲಕ್ಷ ಫಲಾನುಭವಿಗಳು:
ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳಡಿ ಜಿಲ್ಲೆಯಲ್ಲಿ 17.57 ಲಕ್ಷ ಫಲಾನುಭವಿಗಳು ಇದರ ಲಾಭ ಪಡೆದಿದ್ದು , 663.36 ಕೋಟಿ ರೂ ಗಳನ್ನು ವೆಚ್ಚ ಮಾಡಲಾಗಿದೆ ಎಂದು ಸಚಿವರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು:
ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಹಾಗೂ ಜನರಿಗೆ ಸೌಲಭ್ಯ ಮಾಹಿತಿ ನೀಡಲು ಪ್ರತಿ ಹೋಬಳಿ, ತಾಲೂಕು ಮಟ್ಟದಲ್ಲಿ ಸಮಾವೇಶ ಮಾಡಲಾಗುವುದು. ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಗಳನ್ನು ಕಡ್ಡಾಯವಾಗಿ ಜನತೆಗೆ ತಲುಪಿಸಬೇಕು. ಪಂಚ ಯೋಜನೆಗಳಿಂದ ಜನ ವಂಚಿತರಾದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯೇ ಹೊಣೆ. ಯೋಜನೆ ತಲುಪದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸಮಾವೇಶದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್, ದೇವನಹಳ್ಳಿ ತಾಪಂ ಇಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
5ಕೆಡಿಬಿಪಿ1-ಬೆಂ.ಗ್ರಾ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮಾಹಿತಿ ವಿನಿಮಯ ಕಾರ್ಯಕ್ರಮಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.