ಬಳ್ಪ: ಗ್ರಾಮೋತ್ಸವ, ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ

KannadaprabhaNewsNetwork | Published : Jan 11, 2024 1:31 AM

ಸಾರಾಂಶ

ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ - ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಗ್ರಾಮೋತ್ಸವ ನಡೆಯಿತು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯಸಂಸದರ ಆದರ್ಶ ಗ್ರಾಮ ಯೋಜನೆಯಡಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಳ್ಪ ಗ್ರಾ.ಪಂ‌.ನ್ನು ಆಯ್ಕೆ ಮಾಡಿಕೊಂಡು ವಿವಿಧ ಅನುದಾನಗಳನ್ನು ಬಳಸಿ ಗ್ರಾ.ಪಂ. ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಕೆಲಸ ಮಾಡಿ ದೊಡ್ಡ ಮಟ್ಟದ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವ ಭಗವಂತ್ ಖೂಬ ಹೇಳಿದ್ದಾರೆ.ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ - ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಬಳ್ಪ ಶಾಲಾ ಆವರಣದಲ್ಲಿ ಬುಧವಾರ ನಡೆದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಂಸದರ ಆದರ್ಶ ಗ್ರಾಮ ಬಳ್ಪದ ಗ್ರಾಮೋತ್ಸವ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಹಾಗೂ ಎಂಟು ಕೋಟಿ ವೆಚ್ಚದ ಆರು ಕಾಮಗಾರಿಗಳ ಲೋಕಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರದ ಅನುದಾನ, ಜನಪ್ರತಿನಿಧಿ, ಸ್ಥಳೀಯಾಡಳಿತ, ಕಂಪನಿಗಳ ಸಿ.ಎಸ್.ಆರ್. ಅನುದಾನ ತಂದು ನಳಿನ್ ಕುಮಾರ್ ಕಟೀಲ್ ಗ್ರಾಮಸ್ಥರ ಕಲ್ಪನೆಯಂತೆ ಕೆಲಸ ಮಾಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸ ಇಲ್ಲಿಗೆ ಮಾತ್ರ ಸೀಮಿತವಾಗದೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದು ದೇಶದ ಗ್ರಾ.ಪಂ. ಸದಸ್ಯರು ಇಲ್ಲಿಗೆ ಭೇಟಿ ನೀಡುವಂತಾಗಬೇಕು ಎಂದರು.

ಮೋದಿಯಿಂದ ಅಭಿವೃದ್ಧಿ: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸರ್ಕಾರದ ಯೋಜನೆಗಳ ಸಮಗ್ರ ಅನುಷ್ಠಾನ ಆಗುತ್ತಿದೆ. ಮೋದಿ ಸರ್ಕಾರದ ಯೋಜನೆಗಳಿಗೆ ನಾವೆಲ್ಲ ಕೈಜೋಡಿಸಿ, ನಮ್ಮ ಸಹಕಾರ, ಕೊಡುಗೆಯನ್ನು ದೇಶಕ್ಕೆ ನೀಡುವುದು ದೇಶದ ಅಭಿವೃದ್ಧಿಗೆ ನಾವು ನೀಡುವ ಕೊಡುಗೆ ಎಂದು ಹೇಳಿದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ 13 ಕೋಟಿ ಬಡವರು ಬಡತನ ರೇಖೆಗಿಂತ ಹೊರಬಂದಿದ್ದಾರೆ ಎಂದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ ಸಿಂಹ ನಾಯಕ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಬಳ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್ ಕಾರ್ಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ರೋನಿ ರೋಡ್ರಿಗಸ್ ಬಂಟ್ವಾಳ, ಎಂ.ಆರ್.ಪಿ.ಎಲ್.ನ ಶ್ರೀಕೃಷ್ಣ ರಾಜ್, ಗ್ರಾಮ ವಿಕಾಸ ಪ್ರತಿಷ್ಠಾನ ಅಧ್ಯಕ್ಷ ವಿನೋದ್ ಬೊಳ್ಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್ ಬುಡೆಂಗಿ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಬಿರ್ಕಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಳ್ಪ ಗ್ರಾಮ ಪಂಚಾಯಿತಿ ಸದಸ್ಯರು ಮತ್ತಿತರರು ಇದ್ದರು. ಗ್ರಾಮ ವಿಕಾಸ ಪ್ರತಿಷ್ಠಾನ ಅಧ್ಯಕ್ಷ ವಿನೋದ್ ಬೊಳ್ಮಲೆ ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಸದಸ್ಯ ಸುಬ್ರಹ್ಮಣ್ಯ ಕುಳ ಸ್ವಾಗತಿಸಿದರು. ದೇವದಾಸ ರೈ ಬಂಟ್ವಾಳ ನಿರೂಪಿಸಿದರು.

Share this article