ಆರೋಪ ಮರೆಮಾಚಲು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಯತ್ನ, ಖಂಡನೆ ಕನ್ನಡಪ್ರಭ ವಾರ್ತೆ ಹಾಸನ
ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ವಿಚಾರವಾಗಿ ಸಮಗ್ರ ತನಿಖೆ ಆಗಬೇಕು. ಹಾಗೆಯೇ ಜೆಡಿಎಸ್ ಮುಖಂಡರಾದ ರೇವಣ್ಣ ಅವರು ತಮ್ಮ ಪುತ್ರನ ಮೇಲಿನ ಆರೋಪವನ್ನು ಮರೆ ಮಾಚಲು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಹಾಸನದಲ್ಲಿ ಶುಕ್ರವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ‘ಕಳೆದ ಒಂದು ತಿಂಗಳಿನಿಂದ ಕಾರ್ತಿಕ್ ವಿಚಾರ ಎಲ್ಲಾ ಮಧ್ಯಮಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಪಕ್ಷದವರೆ ಮಾಡಿಸಿರುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರು ಆರೋಪಿಸಿರುವುದನ್ನು ಟಿವಿಯಲ್ಲಿ ವೀಕ್ಷಣೆ ಮಾಡಿದ್ದೇನೆ. ಈ ಮಾತುಗಳು ಸತ್ಯಕ್ಕೆ ದೂರವಾಗಿದೆ. ವಾಹನ ಚಾಲಕ ಕಾರ್ತಿಕ್ ವಿಚಾರವಾಗಿ ಕೆಲ ದಿನಗಳ ಹಿಂದೆ ಪ್ರತಿಭಟನೆ ಕೂಡ ಮಾಡಲಾಗಿರುವುದನ್ನು ಹಾಗೂ ಮಾಡಿರುವ ತಪ್ಪನ್ನು ಮರೆಮಾಚಲು ಕಾಂಗ್ರೆಸ್ ಗೆ ದೂರುತ್ತಿರುವುದನ್ನು ನಾನು ಖಂಡಿಸುತ್ತೇನೆ. ನ್ಯಾಯಾಂಗದಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆ ನಡೆಯಲಿ ಎಂದು ನಾನು ಕೂಡ ಆಗ್ರಹಿಸುತ್ತೇನೆ. ಸರ್ಕಾರದ ಮಟ್ಟದಲ್ಲೂ ಕೂಡ ನ್ಯಾಯಬದ್ಧವಾಗಿ ಸತ್ಯಾಸತ್ಯತೆ ಕುರಿತು ತನಿಖೆ ಮಾಡಲು ನಾವು ಕೂಡ ಮನವಿ ಮಾಡಿದ್ದೇವೆ’ ಎಂದು ಹೇಳಿದರು.ಅವರು ಮಾಡಿರುವ ತಪ್ಪನ್ನು ಮರೆ ಮಾಚಲು ಇಂತಹ ಕೆಲಸಕ್ಕೆ ಕೈಹಾಕಿದ್ದಾರೆ. ಈಗಾಗಲೇ ಡ್ರೈವರ್ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಸಮಗ್ರ ತನಿಖೆ ನಡೆಯುತ್ತಿದೆ. ಜೊತೆಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದರು. ಪ್ರಸ್ತುತ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ನಡೆಸಿದ ಪ್ರತಿಭಟನೆಗೆ ಕೂಡ ಕಾಂಗ್ರೆಸ್ ಪ್ರಾಯೋಜಿತ ಎಂದು ಹೇಳಿದ್ದಾರೆ. ಆದರೆ ಇದೆಲ್ಲ ಸುಳ್ಳು ವಿನಾಕಾರಣ ಕಾಂಗ್ರೆಸ್ ಪಕ್ಷದ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಲಕ್ಷ್ಮಣ್ ಉಪಸ್ಥಿತರಿದ್ದರು.ಫೋಟೋ: ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.