ಕಾಡಾನೆಗಳ ದಾಳಿ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ: ಈಶ್ವರ್ ಖಂಡ್ರೆ

KannadaprabhaNewsNetwork |  
Published : Jul 07, 2024, 01:15 AM IST
6ಎಚ್ಎಸ್ಎನ್18 : ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಅರ್ಜುನನ ಸ್ಮಾರಕಕ್ಕೆ ಸಚಿವ ಖಂಡ್ರೆ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಕಾಡಾನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.೪ ರಂದು ದುರಾದೃಷ್ಟವಶಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ.

ಕನ್ನಡಪ್ರಭ ವಾರ್ತೆ ಹಾಸನ

ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.೪ ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದಿಗೆ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು ನೀಡಲಾಗುವುದು ಎಂದರು.

ಆನೆ ಹಾವಳಿ ತಪ್ಪಿಸಲು ಆಗಸ್ಟ್ ೧೨ ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶಗಳಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬುದಾಗಿ ಬಗ್ಗೆ ಚಿಂತನ- ಮಂಥನ ನಡೆಸಲಾಗುವುದು ಎಂದು ತಿಳಿಸಿದರು.

ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಕಾಡಾನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.೪ ರಂದು ದುರಾದೃಷ್ಟವಶಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ ಎಂದು ತಿಳಿಸಿದರು.

ಕಾಕನಕೋಟೆಯಲ್ಲಿ ೧೯೬೮ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನನು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ. ಹೀಗಾಗಿ ಸಮಾಧಿ ಸ್ಥಳ ಯಸಳೂರಿನ ಜೊತೆಗೆ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಅರ್ಜುನನ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ವಿದ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿ, ಶಿಲಾನ್ಯಾಸ ಮಾಡಲಾಯಿತು.

PREV