ಹೊಸಪೇಟೆ: ಸಾಕ್ಷರತೆಯಲ್ಲಿ ಕೇರಳ ರಾಜ್ಯವನ್ನು ಹಿಂದಿಕ್ಕುವಷ್ಟು ಶೈಕ್ಷಣಿಕ ಪ್ರಗತಿ ಕಾರ್ಯಗಳು ವಿವಿಧ ರಾಜ್ಯಗಳು ಸಾಧಿಸಬೇಕಿದೆ. ಕಡ್ಡಾಯ ಮತ್ತು ಉಚಿತ ಶಿಕ್ಷಣ ಕಾಯಿದೆಯಡಿ ಯಾವ ಮಗು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಹೇಳಿದರು.ನಗರದ ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಶಾಲೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಆವರಣದಿಂದ 200 ಮೀಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು, ಮದ್ಯ ಮಾರಾಟ ಮತ್ತು ಮಾದಕ ವಸ್ತುಗಳನ್ನು ನಿಷೇಧಿಸಲಾಗಿದೆ. ಆದರೂ ಬಹುತೇಕ ಶಾಲೆಗಳ ಮುಂದೆಯೇ ತಂಬಾಕು ಉತ್ಪನ್ನ ಸೇರಿ ಮಾದಕ ವಸ್ತುಗಳ ಮಾರಾಟ ನಡೆಸಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಬೇಕು. ಹೆಣ್ಣುಮಕ್ಕಳಿಗೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳಿಗೆ ವಿದ್ಯಾರ್ಥಿ ದೆಸೆಯಿಂದಲೇ ಗುಡ್ ಟಚ್, ಬ್ಯಾಡ್ ಟಚ್ಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಮಕ್ಕಳ ರಕ್ಷಣಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್ ಮಾತನಾಡಿ, ಪ್ರತಿ ಮಕ್ಕಳಲ್ಲಿರುವ ಮುಗ್ಧತೆ, ಸಂತೋಷವನ್ನು ಸಂಭ್ರಮಿಸುವ ಆಚರಣೆಯೇ ಮಕ್ಕಳ ದಿನಾಚರಣೆಯಾಗಿದೆ. ಪಂಡಿತ್ ಜವಾಹರ್ ಲಾಲ್ ನೆಹರು ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ಎಂದು ಕರೆಯುತ್ತಿದ್ದರು. ನೆಹರು ಅವರಿಗೆ ಮಕ್ಕಳೆಂದರೇ ಅಪಾರ ಪ್ರೀತಿ, ಹಾಗಾಗಿ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಆಗಿ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರ ಜೀವನದಲ್ಲಿ ಖುಷಿ ತುಂಬುವ ಚಿಕ್ಕ ಮಕ್ಕಳಿಗೆ ಪ್ರೀತಿ, ಪ್ರೋತ್ಸಾಹ ಮತ್ತು ಸಕಾರಾತ್ಮಕತೆಯನ್ನು ವ್ಯಕ್ತಪಡಿಸಲು ಈ ದಿನ ಮೀಸಲಾಗಿದೆ. ಇಂದಿನ ಮಕ್ಕಳು ರಾಷ್ಟ್ರದ ಮುಂದಿನ ಸತ್ಪ್ರಜೆಗಳು ಎಂಬುದನ್ನು ನೆಹರು ಅವರು ನಂಬಿದ್ದರು ಎಂದರು.ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣ ತಮ್ಮ ಜನ್ಮದಿವನ್ನು ಶಿಕ್ಷಕರಿಗೆ ಸಮರ್ಪಿಸಿದರೆ, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಜನ್ಮದಿನವನ್ನು ಮಕ್ಕಳಿಗೆ ಮೀಸಲಿರಿಸಿ ಮಕ್ಕಳ ದಿನಾಚರಣೆ ನಿಗದಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ. ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಪೋಷಕರು ಮತ್ತು ಶಿಕ್ಷಕರು ಸದವಕಾಶ ನೀಡಬೇಕು. ನಮ್ಮ ದೇಶ ಅಭಿವೃದ್ಧಿಗೆ ಮುಂದಿನ ಸತ್ಪ್ರಜೆಗಳ ಕೊಡುಗೆ ಹೆಚ್ಚಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಕ್ಕಳಿಗೆ ಪ್ರಮುಖವಾಗಿದೆ ಎಂದರು.