ಖರ್ಗೆ ಹೇಳಿಕೆಗೆ ಖಂಡನೆ: ಸೂಕ್ತ ಕ್ರಮಕ್ಕೆ ಒತ್ತಾಯ

KannadaprabhaNewsNetwork |  
Published : Apr 11, 2026, 01:30 AM IST
ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಡಿರುವ ಪ್ರಚೋದನಕಾರಿ ಭಾಷಣದ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ನಗರ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಸಾಗರ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಡಿರುವ ಪ್ರಚೋದನಕಾರಿ ಭಾಷಣದ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ನಗರ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಮಾತನಾಡಿ, ಕಾಂಗ್ರೆಸ್‌ನವರಿಗೆ ಪ್ರಚೋದನಕಾರಿ ಭಾಷಣ ಮಾಡುವುದು ಅಭ್ಯಾಸವಾಗಿ ಬಿಟ್ಟಿದೆ. ಸಂವಿಧಾನ ಮತ್ತು ಅಂಬೇಡ್ಕರ್ ಉಲ್ಲೇಖಿಸಿ ಭಾಷಣ ಮಾಡುವ ಕಾಂಗ್ರೆಸ್ಸಿಗರು ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್. ವಿರುದ್ದ ಬೆಂಕಿ ಉಗುಳಿ ತಮ್ಮ ಭಾಷಣ ಕೊನೆಗೊಳಿಸುತ್ತಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ, ಖರ್ಗೆ ಮಾತ್ರವಲ್ಲದೆ, ಸ್ಥಳೀಯ ಶಾಸಕರು ಮೋದಿಯವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳಿದ್ದನ್ನು ನಾವು ಕೇಳಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರಾಗಿ ಸೋನಿಯಾ, ರಾಹುಲ್ ಗಾಂಧಿ ಅವರನ್ನು ಹೊಗಳಿ ಸಂಸತ್‌ನಲ್ಲಿ ಭಾಷಣ ಮಾಡುತ್ತಿರುವುದು ಅತ್ಯಂತ ದಯಾನೀಯ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಎಂದರು.

ಅಸ್ಸಾಂ ಚುನಾವಣೆ ಪ್ರಚಾರ ಸಭೆಯಲ್ಲಿ ಮುಸ್ಲಿಂ ಬಾಂಧವರಿಗೆ ನೀಡಿರುವ ಕರೆ ಅವರ ಹತಾಶ ಭಾವನೆಗೆ ಸಾಕ್ಷಿಯಾಗಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿರುವುದು, ತಮ್ಮ ಎಐಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುತ್ತದೆ ಎನ್ನುವ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗೂ ಧಕ್ಕೆ ತರುವಂತದ್ದಾಗಿದೆ. ಅವರ ವಿರುದ್ದ ಮುಸ್ಲಿಂ ಸಮುದಾಯದವರು ಕೂಡ ಪ್ರತಿಭಟನೆ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಧುರಾ ಶಿವಾನಂದ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಹಿರಿತನದ ಬಗ್ಗೆ ಇದ್ದ ಗೌರವ ಅವರ ಹೇಳಿಕೆಯಿಂದ ಹೊರಟು ಹೋಗಿದೆ. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಜನಪರವಾದ ಆಡಳಿತದಿಂದ ಹೆದರಿರುವ ಕಾಂಗ್ರೆಸ್ ಇಂತಹ ಹೇಳಿಕೆ ನೀಡುವ ಮೂಲಕ ಹತಾಶ ಮನಸ್ಥಿತಿ ಪ್ರದರ್ಶನ ಮಾಡುತ್ತಿದೆ. ಖರ್ಗೆಯವರು ತಮ್ಮ ಮಾತಿನ ಮೇಲೆ ಹಿಡಿತ ಇರಿಸಿಕೊಳ್ಳಬೇಕು ಎಂದು ಹೇಳಿದರು.

ಯುವ ಮೋರ್ಚಾ ಅಧ್ಯಕ್ಷ ಪರಶುರಾಮ್ ಮಾತನಾಡಿ, ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಪದೇಪದೇ ಬಿಜೆಪಿ, ಆರ್.ಎಸ್.ಎಸ್. ಟೀಕಿಸುವ ಮೂಲಕ ಸುದ್ದಿಯಲ್ಲಿ ಇರುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾಂಕ ಖರ್ಗೆ ಪ್ರತಿನಿಧಿಸುವ ಯಾದಗಿರಿ ಜಿಲ್ಲೆ ದ್ವಿತೀಯ ಪಿಯುಸಿಯಲ್ಲಿ ಕೊನೆ ಸ್ಥಾನದಲ್ಲಿದೆ. ಜಿಲ್ಲೆಯನ್ನು ಶೈಕ್ಷಣಿಕವಾಗಿ, ಅಭಿವೃದ್ಧಿಪಥದತ್ತ ಕೊಂಡೊಯ್ಯಲು ವಿಫಲವಾಗಿರುವ ಅಪ್ಪ ಮಗ ಬಿಜೆಪಿಯನ್ನು, ಆರ್.ಎಸ್.ಎಸ್. ಅನ್ನು ಬೈಯುವಲ್ಲಿಯೆ ತೃಪ್ತಿಪಡುತ್ತಿದ್ದಾರೆ. ಇನ್ನೊಮ್ಮೆ ಆರ್.ಎಸ್.ಎಸ್. ಮತ್ತು ಬಿಜೆಪಿ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಬಾಬು ಮಾತನಾಡಿದರು. ನಗರಸಭೆ ಮಾಜಿ ಉಪಾಧ್ಯಕ್ಷೆ ಸವಿತಾ ವಾಸು, ಪ್ರಮುಖರಾದ ಆರ್.ಶ್ರೀನಿವಾಸ್, ಬಿ.ಎಚ್.ಲಿಂಗರಾಜ್, ಗುರುಪ್ರಸಾದ್, ರತ್ನಾಕರ ಶೇಟ್ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಚ್ಚಮ್ಮ ದೇವಿಯ ವೈಭವದ ಮಹಾರಥೋತ್ಸವ
ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ವದ್ದು