ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು, ಸಚಿವ ಯತೀಂದ್ರ ವಿರುದ್ಧ ದೂರು ಸಲ್ಲಿಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಚಿವ ಯತೀಂದ್ರ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಕುರಿತು ಸಾರ್ವಜನಿಕವಾಗಿ ಸಾವಿರ ಹೆಡೆಯ ವಿಷ ಸರ್ಪ ಎಂಬ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಾಧ್ಯಮಗಳು/ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಬಂದಿದೆ ಎಂದರು.ಸಾರ್ವಜನಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಕುರಿತು ಇಂತಹ ಹೇಳಿಕೆ ನೀಡಿರುವುದು ಸಂಘಟನೆ ಗೌರವಕ್ಕೆ ಧಕ್ಕೆ ತರುವ ಜೊತೆಗೆ, ಅದರೊಂದಿಗೆ ಗುರುತಿಸಿಕೊಂಡಿರುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಆಕ್ರೋಶ ಉಂಟು ಮತ್ತು ಸಾರ್ವಜನಿಕ ಶಾಂತಿಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ದೂರಿದರು.
ವಿಶೇಷವಾಗಿ ತನಿಖೆ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎಸ್ಎಸ್), 2023ರ ಸೆಕ್ಷನ್ 196, ಸೆಕ್ಷನ್ 353 ಅನ್ವಯವಾಗುವ ಇತರ ಸಂಬಂಧಿತ ಕಾನೂನುಗಳ ಅಡಿ ಅಪರಾಧದ ಅಂಶಗಳು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಎಸ್ಎಸ್ ಸೆಕ್ಷನ್ 196, 353 ಸೇರಿದಂತೆ ತನಿಖೆಯಲ್ಲಿ ಅನ್ವಯವಾಗುವ ಇತರೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ದೂರು ಕುರಿತು ಕೈಗೊಂಡ ಕ್ರಮದ ಮಾಹಿತಿಯನ್ನು ದೂರುದಾರರಿಗೆ ನೀಡಬೇಕು. ಈ ದೂರನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಕಾನೂನು ಪ್ರಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.