ನಾಲೆ ಸೀಳಿ ನೀರು ಪೂರೈಕೆ ಕಾಮಗಾರಿಗೆ ಖಂಡನೆ

KannadaprabhaNewsNetwork |  
Published : Jun 19, 2025, 11:51 PM IST
ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ರೈತ ಮುಖಂಡ ಕೆ.ಟಿ ಗಂಗಾಧರ್ ಮಾತನಾಡಿದರು. | Kannada Prabha

ಸಾರಾಂಶ

ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ.

ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ. ತಕ್ಷಣ ಈ ಅವೈಜ್ಞಾನಿಕ ಕಾಮಗಾರಿ ಕೈಬಿಡಬೇಕೆಂದು ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು.

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಮಾತನಾಡಿದರು. ವಿದ್ಯಾವಂತ ಸಮಾಜದಲ್ಲಿ ಇಂತಹ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ. ಭದ್ರಾ ಜಲಾಶಯದ ನೀರನ್ನು ನೆಚ್ಚಿಕೊಂಡು ರೈತರು ಭತ್ತ, ಕಬ್ಬು, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಬೆಳೆದು ಬದುಕು ಕಟ್ಟಿಕೊಂಡಿರುತ್ತಾರೆ. ಮಧ್ಯ ಕರ್ನಾಟಕದ ಇಂತಹ ಬೃಹತ್ ಜಲಾಶಯದ ಸುರಕ್ಷತೆಯನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ೧೬೬೦ ಹಳ್ಳಿಗಳಿಗೆ ಕುಡಿಯಲು ನೀರನ್ನು ಒದಗಿಸುವ ಬೃಹತ್ ಕಾಮಗಾರಿಯನ್ನು ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ ಜೋನ್‌ನಲ್ಲಿ) ಕೈಗೊಂಡಿದೆ. ಈ ಕಾಮಗಾರಿ ಕೈಗೊಂಡಿರುವ ಪ್ರದೇಶವು ಅತೀ ಸೂಕ್ಷ್ಮ ಪ್ರದೇಶವಾಗಿರುತ್ತದೆ, ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದೆಂಬ ನಿಯಮಾವಳಿಗಳಿದ್ದರೂ ಬಹುಗ್ರಾಮ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡಲು ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ಮಾಡುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದರು.

ಸರ್ಕಾರವು ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಲು ರೈತರು ಯಾವುದೇ ತಕರಾರು ಮಾಡುತ್ತಿಲ್ಲ. ಆದರೆ ಭದ್ರಾ ಜಲಾಶಯದ ನಿರ್ಬಂಧಿತ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿಯಿಂದ ಜಲಾಶಯ ತುಂಬಿದಾಗ ನೀರಿನ ಒತ್ತಡದಿಂದಾಗಿ ಯಾವುದೇ ರೀತಿಯ ಅಪಾಯಗಳು ಸಂಭವಿಸಬಹುದಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಮಳೆಬಿದ್ದು ಗುಡ್ಡಗಳು ಕುಸಿಯುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇವೆಲ್ಲವನ್ನೂ ಸರ್ಕಾರ ಮನಗಂಡಿದ್ದರೂ ಜಲಾಶಯದ ಸುರಕ್ಷತೆ ಮತ್ತು ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಈ ಕಾಮಗಾರಿ ಕೈಗೊಂಡಿರುವುದನ್ನು ಖಂಡಿಸುತ್ತೇವೆ. ಸರ್ಕಾರ ಕೂಡಲೇ ಆಪತ್ತು ತಂದೊಡ್ಡುವ ಕಾಮಗಾರಿಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಶಿಮುಲ್ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್, ಮುಖಂಡರಾದ ಮಂಜಪ್ಪಗೌಡ, ಲವ, ರಾಮಚಂದ್ರರಾವ್ ಸೇರಿದಂತೆ ಇನ್ನಿತರರು ಮಾತನಾಡಿ, ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿದರು.

ರೈತ ಮುಖಂಡರಾದ ಈರಣ್ಣ, ಹಾಲೇಶಪ್ಪಗೌಡ್ರು, ಡಿ.ವಿ ವೀರೇಶ್, ಓಟೂರು ಶಿವಪ್ಪ, ಪುಟ್ಟನಗೌಡ್ರು, ಮಲ್ಲಾಪುರ ರಂಗಪ್ಪ, ಎಂ.ಚಂದ್ರಶೇಖರ್, ತಮ್ಮಯ್ಯ, ಮೋಹನ್ ಕುಮಾರ್, ಕೃಷ್ಣಪ್ಪ, ನರಸಿಂಹಣ್ಣ, ಧರ್ಮೋಜಿರಾವ್, ಮಾಲತೇಶ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ