ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕೈಗೊಂಡ ತೀರ್ಮಾನ ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಸಂಪೂರ್ಣವಾಗಿ ನಿರಾಕರಿಸುವ ಪ್ರಯತ್ನ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಕಾರ್ಕಳ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಮತ್ತು ಇತರೆ ಸರ್ಕಾರಿ ಆಸ್ತಿಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರ ವಿಧಿಸಿರುವ ಹೊಸ ನಿರ್ಬಂಧದ ವಿರುದ್ಧ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಸಂಬಂಧ ತೀರ್ಮಾನ ಕೈಗೊಂಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಸಂಪೂರ್ಣವಾಗಿ ನಿರಾಕರಿಸುವ ಪ್ರಯತ್ನ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.ಸರ್ಕಾರಿ ಶಾಲಾ ಆವರಣದಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆಗೆ ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಖಾಸಗಿ ವ್ಯಕ್ತಿಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಈ ಕ್ರಮದ ಹಿಂದೆ ಸರ್ಕಾರದ ಉದ್ದೇಶವೇನು ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ.ಗ್ರಾಮೀಣ ಸರ್ಕಾರಿ ಶಾಲೆಗಳು ಕೇವಲ ಪಾಠ ಮಾಡುವ ಸ್ಥಳವಲ್ಲ. ಅದು ಸಮಾಜದ ಹೃದಯ ಕೇಂದ್ರ. ಅಲ್ಲಿ ವಾರಾಂತ್ಯಗಳಲ್ಲಿ ಸಂಘ-ಸಂಸ್ಥೆಗಳ ಸಭೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾಕೂಟಗಳು ನಡೆಯುತ್ತವೆ. ಈ ಚಟುವಟಿಕೆಗಳನ್ನೇ ಸರ್ಕಾರ ನಿಷೇಧಿಸಲು ಹೊರಟಿದೆಯೇ? ಇದು ಸಾರ್ವಜನಿಕರನ್ನು ಸರ್ಕಾರಿ ಶಾಲೆಗಳಿಂದ ದೂರ ಇಡುವ, ಮತ್ತು ಅವುಗಳನ್ನು ಕ್ರಮೇಣ ಮುಚ್ಚುವ ನಿಗೂಢ ಹುನ್ನಾರವಾಗಿದೆ ಎಂದು ಅವರು ದೂರಿದ್ದಾರೆ.
ಸರ್ಕಾರದ ಈ ತೀರ್ಮಾನವನ್ನು ಅವರು ಬಾಲಿಶ ಹಾಗೂ ಜನವಿರೋಧಿ ಕ್ರಮವೆಂದು ತೀವ್ರವಾಗಿ ಖಂಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.