ಆಧುನಿಕತೆಯಡಿ ಮರೆಯಾಗುತ್ತಿರುವ ಜಾನಪದ ಕಲೆ ಉಳಿಸಲು ಸಮ್ಮೇಳನ ಸಹಕಾರಿ: ಎಚ್.ಡಿ.ತಮ್ಮಯ್ಯ

KannadaprabhaNewsNetwork |  
Published : Apr 16, 2026, 01:15 AM IST
ಸ | Kannada Prabha

ಸಾರಾಂಶ

ಚಿಕ್ಕಮಗಳೂರುಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಜಾನಪದ ಸಮ್ಮೇಳನ ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದಲ್ಲಿ ಏ 26ರಂದು 6 ನೇ ಜಿಲ್ಲಾ ಜಾನಪದ ಸಮ್ಮೇಳನ । ಆಹ್ವಾನ ಪತ್ರಿಕೆ ಬಿಡುಗಡೆ

- ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ

- ಮಾನವೀಯ ಮೌಲ್ಯಗಳು, ಸಂಬಂಧಗಳು, ಸಂವೇದನೆಗಳನ್ನು ಪುನರುಜ್ಜೀವನಕ್ಕೆ ಪೂರಕ

- ಜಿಲ್ಲೆಯ ಜಾನಪದ ಕಲಾವಿದರಿಗೆ ಕಲೆಗಳ ಪ್ರದರ್ಶನಕ್ಕೆ ಸಮ್ಮೇಳನದಲ್ಲಿ ವೇದಿಕೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಜಾನಪದ ಸಮ್ಮೇಳನ ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ನಗರದಲ್ಲಿ ಏ 26ರಂದು ಹಮ್ಮಿಕೊಂಡಿರುವ 6 ನೇ ಜಿಲ್ಲಾ ಜಾನಪದ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬುಧವಾರ ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಿ ಮಾತನಾಡಿ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಈ ನೆಲದ ಮೂಲ ಬೇರು. ಜಾನಪದ ಅನಕ್ಷರಸ್ಥರಿಂದ ಹುಟ್ಟಿ, ಬಾಯಿಂದ ಬಾಯಿಗೆ ಹರಿದು ಬರುವ ಮೂಲಕ ಇದುವರೆಗೆ ಉಳಿದು ಬೆಳೆದು ಬಂದಿದೆ. ನಮ್ಮ ಹಿರಿಯರು ತಮ್ಮ ಶ್ರಮದ ಬದುಕಿನ ನಡುವೆ ಜಾನಪದವನ್ನು ಕಟ್ಟಿ ಬೆಳೆಸಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ಉಳಿಸಲೇಬೇಕಾದ ಅನಿವಾರ್ಯತೆ ಮತ್ತು ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದರು.

ಜಾನಪದ ಸಮ್ಮೇಳನಗಳನ್ನು, ಜಾನಪದ ಕಾರ್ಯಕ್ರಮಗಳನ್ನು ನಡೆಸುವುದರಿಂದ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ, ಆ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ ಎಂದು ಹೇಳಿದರು.

ಸಮ್ಮೇಳನದ ಯಶಸ್ಸಿಗೆ ಎಲ್ಲರೂ ದುಡಿಯಬೇಕು. ಗ್ರಾಮೀಣರು ಮತ್ತು ಯುವ ಜನತೆ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಸಲಹೆ ಮಾಡಿದರು.

ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ಆಧುನಿಕತೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಅತಿಯಾದ ಗೀಳಿನಿಂದ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವು ಮರೆತಿದ್ದೇವೆ. ಅದರ ಪರಿಣಾಮ ಸಂಬಂಧಗಳು, ಸಂವೇದನೆ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಮೊಬೈಲ್, ಕಂಪ್ಯೂಟರ್ ಗಳ ದಾಸರಾಗಿ ಯಾಂತ್ರಿಕ ಜೀವನ ನಡೆಸುತ್ತಿದ್ದೇವೆ ಎಂದು ವಿಷಾದಿಸಿದರು.

ಮಾನವೀಯ ಮೌಲ್ಯಗಳು, ಸಂಬಂಧಗಳು, ಸಂವೇದನೆಗಳನ್ನು ಪುನರುಜ್ಜೀವನಗೊಳಿಸಬೇಕಾದರೆ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯತ್ತ ನಾವು ಮತ್ತೆ ಹೊರಳ ಬೇಕು, ಅವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಆಧುನಿಕತೆ ಅಬ್ಬರದಲ್ಲಿ ಮರೆಯಾಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಹೇಳಿದರು.

ಏ.26 ರಂದು ಕುವೆಂಪು ಕಲಾಮಂದಿರದಲ್ಲಿ ನಡೆಯಲಿರುವ 6ನೇ ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ, ಬೋರಲಿಂಗಯ್ಯ ಸೇರಿದಂತೆ ನಾಡಿನ ಹಿರಿಯ ಜಾನಪದ ಕಲಾವಿದರು, ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನಕ್ಕೆ ಮುನ್ನ ತಾಲೂಕು ಕಚೇರಿಯಿಂದ ವಿವಿಧ ಜಾನಪದ ಕಲಾತಂಡಗಳು ಮತ್ತು ಪೂರ್ಣ ಕುಂಭದೊಂದಿಗೆ ಸಮ್ಮೇಳನಾಧ್ಯಕ್ಷರನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮುಖಾಂತರ ಕುವೆಂಪು ಕಲಾಮಂದಿರಕ್ಕೆ ಕರೆ ತರಲಾಗುವುದು ಎಂದು ಹೇಳಿದರು.

ಜಿಲ್ಲೆಯ ಜಾನಪದ ಕಲಾವಿದರಿಗೆ ಕಲೆಗಳ ಪ್ರದರ್ಶನಕ್ಕೆ ಸಮ್ಮೇಳನದಲ್ಲಿ ವೇದಿಕೆ ಕಲ್ಪಿಸಲಾಗುವುದು, ಹಿರಿಯ ಜಾನಪದ ಕಲಾವಿದರನ್ನು ಸನ್ಮಾನಿಸಿ, ಗೌರವಿಸಲಾಗುವುದು, ಜಾನಪದ ಸಿರಿ ಪ್ರಶಸ್ತಿ ನೀಡಲಾಗುವುದು, ರೈತ ಜಾನಪದ, ಮಹಿಳಾ ಜಾನಪದ, ಜಾನಪದರ ಜಗುಲಿ, ವಿಷಯ ಕುರಿತ ಗೋಷ್ಠಿಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಸಮ್ಮೇಳನ ಅಚ್ಚುಕಟ್ಟಾಗಿ, ಯಾವುದೇ ಲೋಪವಿಲ್ಲದಂತೆ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

4ನೇ ಜಿಲ್ಲಾ ಜಾನಪದ ಸಮ್ಮೇಳನದ ಅಧ್ಯಕ್ಷ ಬೆಳವಾಡಿ ಪರಮೇಶ್ವರಪ್ಪ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಸಂಚಾಲಕಿ ಗಾಯತ್ರಿ, ಜಿಲ್ಲಾ ಸಂಚಾಲಕ ಬಕ್ಕಿ ರವಿ, ಉಪಾಧ್ಯಕ್ಷ ತಿಪ್ಪೇಶ್, ಶೈಲಾ ಬಸವರಾಜ್, ತಾಲೂಕು ಅಧ್ಯಕ್ಷ ಸಚಿನ್ ಸಿಂಗ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ನೇತ್ರ, ಉಪಾಧ್ಯಕ್ಷೆ ಅನ್ನಪೂರ್ಣ, ಎಂ.ಎಸ್.ನಾಗರಾಜ್, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಕುನ್ನಳ್ಳಿ ರವಿ, ವಿನೀತ್ ಕುಮಾರ್, ಸಖರಾಯಪಟ್ಟಣ ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ವರದಾನ
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕೆರೆಗಳ ಪಾತ್ರ ಅತಿಮುಖ್ಯ