ವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ, ತುಮಕೂರುವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, ನಾಲ್ಕು ಚಕ್ರ ವಾಹನ (ವೈಟ್ ಬೋರ್ಡ್) ಹೊಂದಿರುವವರು ನಿಯಮಾವಳಿಯನ್ವಯ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿರುವುದಿಲ್ಲ. ರಾಜ್ಯದಲ್ಲಿ ಅಂಕಿ ಅಂಶಗಳ ಪ್ರಕಾರ ಶೇ. 80ರಷ್ಟು ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿವೆ. ಕರ್ನಾಟಕವು ದೇಶದಲ್ಲಿ ತೆರಿಗೆ ಪಾವತಿಸುವಲ್ಲಿ 2ನೇ ಸ್ಥಾನದಲ್ಲಿದ್ದರೂ ಶೇ.80ರಷ್ಟು ಬಿಪಿಎಲ್ ಕುಟುಂಬವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.ಜಿಲ್ಲೆಯಲ್ಲಿ 4547 ಆದಾಯ ತೆರಿಗೆ ಪಾವತಿದಾರರು, 219 ಸರ್ಕಾರಿ ನೌಕರರು, ವಾರ್ಷಿಕ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಕೌಟುಂಬಿಕ ಆದಾಯ ಹೊಂದಿರುವವರು ಸೇರಿ 19 ಸಾವಿರಕ್ಕು ಹೆಚ್ಚು ಪಡಿತರ ಚೀಟಿಯನ್ನು ಹೊಂದಿದ್ದಾರೆ. ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರನ್ನು ಪತ್ತೆಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಪಿಎಲ್ ಕುಟುಂಬದ ಅರ್ಹರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕೆಂಬ ದೃಷ್ಟಿಯಿಂದ ಅನರ್ಹ ಪಡಿತರ ಚೀಟಿಯನ್ನು ರದ್ದುಪಡಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಲುವಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ವಿರೋಧಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.ರಾಜ್ಯದ ಜನತೆ ನಮ್ಮ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಹಲವಾರು ಭರವಸೆಗಳನ್ನು ಈಡೇರಿಸಿದ್ದೇವೆ. ಐದು ವರ್ಷ ಕಳೆಯುವುದರೊಳಗೆ ಎಲ್ಲ ಭರವಸೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಒಂದು ಬಾರಿ ತಿರುವಳಿ (ಒಟಿಎಸ್) ಮೂಲಕ ಆಸ್ತಿ ತೆರಿಗೆ ಬಾಕಿ ಪಾವತಿಸಲು ಅವಕಾಶ ನೀಡಿರುವಂತೆ ಪಾಲಿಕೆಯಲ್ಲಿಯೂ ಅವಕಾಶ ಕಲ್ಪಿಸಬೇಕು ಎಂಬ ಮನವಿಗೆ ಸ್ಪಂದಿಸಿದ ಅವರು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಪಾಲಿಕೆಯಲ್ಲೂ ಸಹ ಒಂದು ಬಾರಿ ತೀರುವಳಿ(ಒಟಿಎಸ್)ಗೆ ಸಮಯ ನಿಗಧಿ ಮಾಡಲಾಗುವುದು ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.