ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಓಎಂಆರ್ ಸಂಖ್ಯೆ ಗೊಂದಲ: ಡೀಸಿ ಮನವರಿಕೆ ನಂತರ ಪರೀಕ್ಷಾರ್ಥೀಗಳಿಗೆ ಹೆಚ್ಚುವರಿ ಸಮಯ

KannadaprabhaNewsNetwork |  
Published : Aug 03, 2026, 01:30 AM IST
2ಎಚ್ಎಸ್ಎನ್16 :  | Kannada Prabha

ಸಾರಾಂಶ

ಸುಮಾರು ಒಂದು ಗಂಟೆ ಕಾಲ ಗೊಂದಲದಿಂದ ಪರೀಕ್ಷಾ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಜಿಲ್ಲಾಧಿಕಾರಿ ಹಾಗೂ ಪರೀಕ್ಷಾ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಬಳಿಕ ಎರಡು ಕೊಠಡಿಗಳ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಉಳಿದ ಪರೀಕ್ಷೆಗಳು ಯಾವುದೇ ಅಡಚಣೆಯಿಲ್ಲದೆ ಶಾಂತಿಯುತವಾಗಿ ಪೂರ್ಣಗೊಂಡವು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ ನಗರದ ಗಂಧದಕೋಠಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಹೊಂದಾಣಿಕೆ ಸಂಬಂಧ ಉಂಟಾದ ಗೊಂದಲದಿಂದ ಎರಡು ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಸುಮಾರು ಒಂದು ಗಂಟೆ ವಿಳಂಬವಾಗಿ ಆರಂಭವಾದ ಘಟನೆ ಭಾನುವಾರ ನಡೆದಿದೆ.

ಬೆಳಗ್ಗೆ ಪ್ರಶ್ನೆಪತ್ರಿಕೆ ವಿತರಿಸಿದ ಬಳಿಕ ಕೆಲ ಅಭ್ಯರ್ಥಿಗಳು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ಶೀಟ್‌ನಲ್ಲಿರುವ ಕ್ರಮಸಂಖ್ಯೆಗಳು ಹೊಂದಾಣಿಕೆಯಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಪರೀಕ್ಷೆ ಬರೆಯಲು ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂಲದ ವಾತಾವರಣ ನಿರ್ಮಾಣವಾಯಿತು. ಅಧಿಕಾರಿಗಳ ವಿರುದ್ಧ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಉಳಿದ ಕೊಠಡಿಗಳಲ್ಲಿಯೂ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಕೆಲಕಾಲ ವಿಳಂಬ ಉಂಟಾಯಿತು. ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಭ್ಯರ್ಥಿಗಳಿಗೆ ಪರೀಕ್ಷಾ ವಿಧಾನವನ್ನು ವಿವರಿಸಿ ಮನವರಿಕೆ ಮಾಡಿಕೊಟ್ಟರು.

ಸುಮಾರು ಒಂದು ಗಂಟೆ ಕಾಲ ಗೊಂದಲದಿಂದ ಪರೀಕ್ಷಾ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಜಿಲ್ಲಾಧಿಕಾರಿ ಹಾಗೂ ಪರೀಕ್ಷಾ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಬಳಿಕ ಎರಡು ಕೊಠಡಿಗಳ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಉಳಿದ ಪರೀಕ್ಷೆಗಳು ಯಾವುದೇ ಅಡಚಣೆಯಿಲ್ಲದೆ ಶಾಂತಿಯುತವಾಗಿ ಪೂರ್ಣಗೊಂಡವು.

ಪರೀಕ್ಷೆ ಬರೆದ ಅಭ್ಯರ್ಥಿಗಳು ಮಾಧ್ಯಮದೊಂದಿಗೆ ಮಾತನಾಡಿ, ಓಎಂಆರ್ ನಲ್ಲಿ ಕ್ರಮ ಸಂಖ್ಯೆ ಗೊಂದಲವಾಗಿದ್ದು, ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಲ್ಲಿ ಕ್ರಮ ಸಂಖ್ಯೆ ಬೇರೆ ಬೇರೆ ಇದ್ದವು. ಇದನ್ನು ಪ್ರಶ್ನಿಸಿದಾಗ ಆರಂಭದಲ್ಲಿ ಅಲ್ಲಿನ ಸಿಬ್ಬಂದಿ ಹಾಗೂ ಅಧಿಕಾರಿಗಳು ಸುಮ್ಮನೆ ಪರೀಕ್ಷೆ ಬರೆಯುವಂತೆ ಸೂಚಿಸಿದರು. ಆದರೆ ನಂತರ ತೀವ್ರ ಆಕ್ಷೇಪ ವ್ಯಕ್ತವಾದಾಗ ಶಾಂತಿಯುತವಾಗಿ ಬರೆಯಿಸಿ ಎಂದು ಸೂಚನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ, ಪ್ರಶ್ನೆಪತ್ರಿಕೆಯಲ್ಲಿರುವ ಕ್ರಮಸಂಖ್ಯೆಯನ್ನು ಅಭ್ಯರ್ಥಿಗಳು ಓಎಂಆರ್ ಉತ್ತರ ಪತ್ರಿಕೆಯಲ್ಲಿರುವ ನಿಗದಿತ ಬಾಕ್ಸ್‌ನಲ್ಲಿ ದಾಖಲಿಸಬೇಕು. ಓಎಂಆರ್‌ನಲ್ಲಿ ಈಗಾಗಲೇ ಮುದ್ರಿತವಾಗಿರುವ ಸಂಖ್ಯೆ ಮತ್ತು ಪ್ರಶ್ನೆಪತ್ರಿಕೆಯ ಸಂಖ್ಯೆ ಒಂದೇ ಇರಬೇಕೆಂಬ ನಿಯಮ ಇಲ್ಲ. ಪರೀಕ್ಷೆಯ ಮೌಲ್ಯಮಾಪನಕ್ಕೆ ಅಗತ್ಯವಾಗಿರುವುದು ಅಭ್ಯರ್ಥಿಗಳು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಯನ್ನು ಸರಿಯಾಗಿ ನಮೂದಿಸುವುದಷ್ಟೇ ಎಂದು ಸ್ಪಷ್ಟಪಡಿಸಿದರು. ಈ ವಿವರಣೆಯ ಬಳಿಕವೂ ಕೆಲ ಅಭ್ಯರ್ಥಿಗಳು ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರೂ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿ ಅದೇ ವಿಧಾನ ಸರಿಯಾಗಿದೆ ಎಂಬುದನ್ನು ದೃಢಪಡಿಸಿದ ನಂತರ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಒಪ್ಪಿಕೊಂಡರು.

ಕೆಲ ಅಭ್ಯರ್ಥಿಗಳಿಗೆ ಪರೀಕ್ಷಾ ವಿಧಾನದ ಕುರಿತು ತಪ್ಪು ಕಲ್ಪನೆ ಉಂಟಾಗಿತ್ತು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್‌ನಲ್ಲಿರುವ ಮುದ್ರಿತ ಸಂಖ್ಯೆಗಳು ಒಂದೇ ಆಗಿರಬೇಕು ಎಂದು ಅವರು ಭಾವಿಸಿದ್ದರು. ವಾಸ್ತವದಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಯನ್ನು ಓಎಂಆರ್‌ನಲ್ಲಿರುವ ನಿಗದಿತ ಸ್ಥಳದಲ್ಲಿ ನಮೂದಿಸಿದರೆ ಸಾಕು. ಈ ಬಗ್ಗೆ ಅಧಿಕಾರಿಗಳು ವಿವರಿಸಿದರೂ ಕೆಲವರು ಗೊಂದಲಕ್ಕೊಳಗಾದ ಕಾರಣ ವಿಳಂಬವಾಯಿತು. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಎರಡು ಕೊಠಡಿಗಳ ಅಭ್ಯರ್ಥಿಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾರ್ಥಿಗಳು ಮಾತ್ರ ಪರೀಕ್ಷೆ ಆರಂಭಕ್ಕೂ ಮುನ್ನವೇ ಓಎಂಆರ್ ಭರ್ತಿ ಮಾಡುವ ವಿಧಾನ ಹಾಗೂ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ನಮೂದಿಸುವ ಪ್ರಕ್ರಿಯೆ ಕುರಿತು ಸ್ಪಷ್ಟ ಸೂಚನೆಗಳನ್ನು ನೀಡಿದ್ದರೆ ಈ ರೀತಿಯ ಗೊಂದಲ ಉಂಟಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ಸೂಚನೆಗಳನ್ನು ನೀಡದ ಕಾರಣ ಅನಗತ್ಯ ಆತಂಕ ಉಂಟಾಯಿತು ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಅಚ್ಚುಕಟ್ಟು ವ್ಯಾಪ್ತಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ, ಮರಗಳ ಮಾರಣ ಹೋಮ
ನೀರಿಲ್ಲದೆ ಬರಿದಾಗಿರುವ ದೊಡ್ಡಕೆರೆ ಕೆಲವರಿಂದ ಒತ್ತುವರಿ