ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ: ಪ್ರೊ.ಎಂ.ಪಂಚಲಿಂಗೇಗೌಡ

KannadaprabhaNewsNetwork |  
Published : Apr 26, 2026, 02:45 AM IST
25ಕೆಎಂಎನ್ ಡಿ14 | Kannada Prabha

ಸಾರಾಂಶ

ಪಾಂಡವಪುರ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಮೊದಲ ಮೂವರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕೆಲಸವನ್ನು ಸಂಸ್ಥೆ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಗ್ರಾಮೀಣ ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುತ್ತಿದೆ ಎಂದು ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಪ್ರೊ.ಎಂ.ಪಂಚಲಿಂಗೇಗೌಡ ಹೇಳಿದರು.

ತಾಲೂಕಿನ ಜಯಂತಿ ನಗರದಲ್ಲಿ ಇರುವ ಶ್ರೀಶಂಭಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮೊದಲ ಮೂವರು ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಮೊದಲ ಮೂವರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕೆಲಸವನ್ನು ಸಂಸ್ಥೆ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರಿಸಾಟಿಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಅಧಿಕ ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಕೇವಲ ಪುಸ್ತಕ ಓದುವುದು ಮಾತ್ರವಲ್ಲ ಪುಸ್ತಕ ಹೊರತಾದ ವಿಷಯಗಳ ಬಗ್ಗೆಯೂ ಅರಿವು ಮೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳಿಗೆ ಉತ್ತಮ ಕೋಚಿಂಗ್ ನೀಡುವ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಕೆಲಸವನ್ನು ಪೋಷಕರು ಮಾಡಬೇಕು, ಸಂಸ್ಥೆಯೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಎಲ್ಲಾ ಕೋಚಿಂಗ್ ವ್ಯವಸ್ಥೆ ಮಾಡಿಕೊಟ್ಟಿದೆ. ಜೊತೆಗೆ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಗಳು, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ವಿಜ್ಞಾನವಸ್ತು ಪ್ರದರ್ಶನ, ಡ್ರಾಯಿಂಗ್ ಸ್ಪರ್ಧೆ, ಕ್ರೀಡೆ, ರಂಗಗೀತೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಿಕೊಂಡು ಬರುತ್ತಿದ್ದೇವೆ ಎಂದರು.

ತಾಲೂಕಿನ ಒಟ್ಟು 43 ಪ್ರೌಢಶಾಲೆಗಳಲ್ಲಿ ಅಧಿಕ ಅಂಕಗಳಿಸಿದ ಪ್ರತಿಶಾಲೆ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆ ಅಧ್ಯಕ್ಷ ಪಿ.ಹೊನ್ನರಾಜು, ಉಪಾಧ್ಯಕ್ಷ ಬಾಲಚಂದ್ರು, ಕಾರ್ಯದರ್ಶಿ ಪಿ.ಅಕ್ಷಯ್, ಟ್ರಸ್ಟಿ ಎಸ್.ಶಂಕರ್, ಪ್ರಾಂಶುಪಾಲೆ ಸೌಮ್ಯ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೇತನ್‌ ಮನೆಗೆ ರಾಜ್‌ ಅಭಿಮಾನಿಗಳ ಮುತ್ತಿಗೆ
ಎಸ್ಸೆಸ್ಸೆಲ್ಸಿಯಲ್ಲಿ ಕ್ರೈಸ್ ಶಾಲೆ ಉತ್ತಮ: ಮಹದೇವಪ್ಪ