ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂಗೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ
ಭ್ರಷ್ಟಾಚಾರದಿಂದ ಸಚಿವ ಸ್ಥಾನ ಕಳೆದುಕೊಂಡ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವುದು ಸಾಬೀತಾಗಿದೆ. ಕೂಡಲೇ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ದಿನಕ್ಕೊಂದು ವಿಧಾನಸಭಾ ಕ್ಷೇತ್ರದಂತೆ ಸೋಮವಾರ ಹಳಿಯಾಳ ಕ್ಷೇತ್ರದಿಂದ ನಡೆದ ಧರಣಿಯಲ್ಲಿ ಮಾತನಾಡಿದರು.ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ವಾಲ್ಮೀಕಿ ನಿಗಮದಲ್ಲಿನ ಹಗರಣ ಹೊರಕ್ಕೆ ಬರುತ್ತಿದ್ದಂತೆ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗಿತ್ತು. ನಂತರ ಈಗ ಪುನಃ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇದು ಕೇವಲ ಪರಿಶಿಷ್ಟ ಜಾತಿ, ಪಂಗಡದವರಿಗಷ್ಟೇ ಅಲ್ಲ, ಇಡಿ ರಾಜ್ಯದ ಜನತೆಗೆ ದ್ರೋಹ ಮಾಡಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಭ್ರಷ್ಟಾಚಾರ ನಡೆಸಿರುವ ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಸುಬ್ರಾಯ ವಾಳ್ಕೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನಾಯ್ಕ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ್ ಹೆಗಡೆ, ಶಿವಾಜಿ ನರಸಾನಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ನಗರ ಮಂಡಲ ನಾಗೇಶ್ ಕುರ್ಡೇಕರ್, ಅಂಕೋಲಾ ಮಂಡಲದ ಅಧ್ಯಕ್ಷ ಸಂಜಯ ನಾಯ್ಕ, ಎಸ್ ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಂತೋಷ ತಳವಾರ್, . ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ್, ಹೇಮಂತ್ ಕುಮಾರ್, ಮಂಗೇಶ್ ದೇಶಪಾಂಡೆ, ಅನಿಲ್ ಮುತ್ನಾಳ್, ಗೀತಾ ಶಿಕಾರಿಪುರ, ವೈಶಾಲಿ ತಾಂಡೇಲ್, ಸತೀಶ್ ವಡ್ಡರ್ ಮೊದಲಾದವರಿದ್ದರು.ರಾಜ್ಯಪಾಲರಿಗೆ ಮನವಿ
ಸಚಿವ ನಾಗೇಂದ್ರ ಅವರು ಇನ್ನೂ ಆರೋಪ ಮುಕ್ತರಾಗಿಲ್ಲ. ಅವರು ಸಂವಿಧಾನದ ಮೌಲ್ಯಗಳಿಗೆ ಅಪಚಾರ ಎಸಗಿದ್ದಾರೆ. ಅವರಿಗೆ ಜಾಮೀನು ಸಿಕ್ಕಿದೆಯೇ ಹೊರತೂ ಕ್ಲೀನ್ ಚಿಟ್ ಸಿಕ್ಕಿಲ್ಲ. ಇದರಿಂದ ಕೂಡಲೇ ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಗೆ ಸೂಚಿಸುವಂತೆ ಮನವಿ ಮಾಡಲಾಗಿದೆ.