ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್

KannadaprabhaNewsNetwork |  
Published : Mar 13, 2024, 02:04 AM IST
ಪೊಟೋ೧೨ಸಿಪಿಟಿ೨: ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಅಗಲಿದ ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮುಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ಕಾಂಗ್ರೆಸ್‌ನಲ್ಲಿನ ಒಳಜಗಳದಿಂದ ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಆ ಪಕ್ಷ ನಿರ್ನಾಮವಾಗಲಿದೆ. ರಾಜ್ಯ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಮತ್ತೆ ಪ್ರಮುಖ ಪಾತ್ರ ವಹಿಸಿಕೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತೊಮ್ಮೆ ಪರೋಕ್ಷವಾಗಿ ಪ್ರಸ್ತಾಪಿಸಿದರು.

ತಾಲೂಕಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಏನೇ ಹೇಳಬಹುದು, ಆದರೆ, ಈ ಸರ್ಕಾರ ಬಂದ ನಂತರ ಜನರ ಸಂಕಷ್ಟ ಹೆಚ್ಚಾಗಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆ ಪಕ್ಷದವರಿಗೆ ಎಷ್ಟೋ ಕಡೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಫಲಿತಾಂಶದ ಅರಿವಿರುವುದರಿಂದ ಲೋಕಸಭೆಗೆ ಸ್ಪರ್ಧಿಸಲು ಸಚಿವರು ಸಹ ಹಿಂಜರಿಯುತ್ತಿದ್ದಾರೆ. ಅವರಲ್ಲಿನ ಒಳಜಗಳದಿಂದ ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದರು.

ಡಿಕೆಶಿ ವಿರುದ್ಧ ವಾಗ್ದಾಳಿ:

ಚುನಾವಣೆಗೆ ಮುಂಚೆ ಡಿ.ಕೆ.ಶಿವಕುಮಾರ್ ಮೇಕೆದಾಟು ವಿಚಾರ ಪ್ರಸ್ತಾಪಿಸಿದರು. ಆದರೆ, ನೀರಾವರಿ ಸಚಿವರಾದ ನಂತರ ಅವರು ಒಂದೇ ಒಂದು ದಿನ ರಾಜ್ಯದ ನೀರಾವರಿ ಕುರಿತು ಯೋಜನೆ ರೂಪಿಸಿದ್ದಾರೆ. ಬೆಂಗಳೂರು ಉಸ್ತುವಾರಿ ಸಚಿವರಾಗಿ ಅವರು ಬೆಂಗಳೂರನ್ನು ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯರನ್ನು ಸೈಡಿಗೆ ತಳ್ಳಿದ್ದಾರೆ:

ಮೊನ್ನೆ ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಶಿವಕುಮಾರ್ ಸೈಡ್‌ಗೆ ತಳ್ಳಿದ್ದರು. ಮೆರವಣಿಗೆಯಲ್ಲಿ ಶಿವಕುಮಾರ್ ಆರ್ಭಟಿಸುತ್ತಿದ್ದರು. ಇದನ್ನು ನೋಡಿದ ಸಿದ್ದರಾಮಯ್ಯ ಬೆಂಗಲಿಗರು ಡಿ.ಕೆ.ಸುರೇಶ್ ಅವರಿಗೆ ಮತ ಹಾಕುತ್ತಾರಾ?. ಅವರಲ್ಲಿನ ಒಳಜಗಳ, ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲ ೨೮ ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಹತಾಶೆಯಲ್ಲಿ ಎಂಪಿ:

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಮೋದಿ ಮೆಚ್ಚಿದ ಎಚ್‌ಡಿಡಿ:

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಇದನ್ನು ನೋಡಿ ಮೆಚ್ಚಿರುವ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎನ್‌ಡಿಎಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾವುದೇ ಷರತ್ತು ವಿಧಿಸದೇ ಜೆಡಿಎಸ್ ವರಿಷ್ಠರು ಬಿಜೆಪಿ ಜತೆ ಕೈಜೋಡಿಸಿದ್ದಾರೆ. ತಾಲೂಕಿನಲ್ಲಿ ಎರಡು ಪಕ್ಷಗಳು ಪರಸ್ಪರ ವಿರುದ್ಧ ರಾಜಕೀಯ ಮಾಡಿದ್ದೇವೆ. ಆದರೆ, ಈಗ ಹೊಂದಾಣಿಕೆ ಅನಿವಾರ್ಯ. ರಾಜಕೀಯ ಎದುರಾಳಿ ಕಾಂಗ್ರೆಸ್ ಅನ್ನು ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಇದೇ ವೇಳೆ ಬಿಜೆಪಿ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಅ. ದೇವೇಗೌಡ, ಜಿಲ್ಲಾ ಪ್ರಭಾರಿ ವಿಜಯ್ ಕುಮಾರ್, ಮುಖಂಡರಾದ ಗೌತಮ್ ಗೌಡ. ಪ್ರಸಾದ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್.ಆನಂದ ಸ್ವಾಮಿ. ತಾಲೂಕು ಅಧ್ಯಕ್ಷ ರಾಜು ತೂಬಿನಕೆರೆ, ನಗರಾಧ್ಯಕ್ಷ ಶಿವಕುಮಾರ್, ಮಾಜಿ ಜಿಲ್ಲಾ ಅಧ್ಯಕ್ಷ ಹುಲುವಾಡಿ ದೇವರಾಜ್, ತಾಲೂಕು ಅಧ್ಯಕ್ಷ ಕೆ.ಟಿ.ಜಯರಾಮು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಉಮಾಶ್ರೀ ಎಚ್ಚರಿಕೆಗೆ ಹಿರಿಯ ರಂಗಕರ್ಮಿ ಪೆಚ್ಚು
ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು : ಸಿದ್ದರಾಮಯ್ಯ ತರಾಟೆ