ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶಾಸಕ ಕೆ.ವೈ.ನಂಜೇಗೌಡ

KannadaprabhaNewsNetwork | Published : May 30, 2024 12:54 AM

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಾಲೂರು

ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನಿಸಲು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು, ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೆ.ವೈ.ನಂಜೇಗೌಡ ಮನವಿ ಮಾಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪಟ್ಟಣ ಸೇರಿ ತಾಲೂಕಿನ ವಿವಿಧ ಶಾಲಾ- ಕಾಲೇಜುಗಳಿಗೆ ಭೇಟಿ ನೀಡಿ, ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯು ಸುಮಾರು ೧೮ ವರ್ಷಗಳಿಂದ ಆಗ್ನೆಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ, ಕಾಂಗ್ರೆಸ್ ಅಭ್ಯರ್ಥಿಗೆ ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದ್ದು, ಆಯ್ಕೆಯಾದರೆ ನಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ೫ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ.

ಹಾಗಾಗಿ ಡಿ.ಟಿ.ಶ್ರೀನಿವಾಸ್ ರನ್ನು ಎಂಎಲ್ಸಿಯಾಗಿ ಆಯ್ಕೆ ಮಾಡಿ, ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ನಿವೃತ್ತ ಶಿಕ್ಷಣಾಧಿಕಾರಿ ವೆಂಕಟರಾಮರೆಡ್ಡಿ, ಮುಖಂಡರಾದ ಗೋವಿಂದಪ್ಪ, ಎಂವಿ ಹನುಮಂತಯ್ಯ, ರವಿಕುಮಾರ್, ಗಂಗಾಧರಾವ್, ಸತೀಶ್, ಇನ್ನಿತರರು ಹಾಜರಿದ್ದರು.

Share this article