ಉಪಚುನಾವಣೆ ಗೆಲುವು ಸಂಭ್ರಮಿಸಿದ ಕಾಂಗ್ರೆಸ್‌

KannadaprabhaNewsNetwork | Published : Nov 24, 2024 1:46 AM

ಸಾರಾಂಶ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ನಡೆಸಿದರು. ಸುಳ್ಳು, ಅಪಪ್ರಚಾರ, ಕುಟುಂಬ ರಾಜಕಾರಣಕ್ಕೆ ಮತ್ತು ಉದ್ದೇಶ ಪೂರ್ವಕವಾಗಿ ಟೀಕೆ ಟಿಪ್ಪಣಿ ಮಾಡಿರುವ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಸ್ಪಷ್ಟ ಸಂದೇಶವನ್ನು ಮತದಾರರು ಕೊಟ್ಟಿದ್ದಾರೆ. ಈ ಮೂರು ಕ್ಷೇತ್ರಗಳ ಜನರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ನಡೆಸಿದರು.

ನಂತರ ಕಾಂಗ್ರೆಸ್ ಮಾಧ್ಯಮ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆದಂಥ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿ ಹೊರ ಬಂದಿದ್ದಾರೆ. ಈ ಮೂರು ಕ್ಷೇತ್ರಗಳ ಅಭ್ಯರ್ಥಿಗಳಿಗೆ ಹಾಗೂ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು ಎಂದರು. ಇಂದು ಕಾಂಗ್ರೆಸ್ ಪಕ್ಷ ಬಡವರ, ಹಿಂದುಳಿದವರ, ಅಲ್ಪಸಂಖ್ಯಾತರ ಹಾಗೂ ರೈತರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆಡಳಿತ ನಡೆಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಒಪ್ಪಿಕೊಂಡ ಮತದಾರ ಈ ಉಪ ಚುನಾವಣೆಯಲ್ಲಿ ಉತ್ತಮ ಪಲಿತಾಂಶ ನೀಡಿದ್ದಾನೆ. ಸುಳ್ಳು, ಅಪಪ್ರಚಾರ, ಕುಟುಂಬ ರಾಜಕಾರಣಕ್ಕೆ ಮತ್ತು ಉದ್ದೇಶ ಪೂರ್ವಕವಾಗಿ ಟೀಕೆ ಟಿಪ್ಪಣಿ ಮಾಡಿರುವ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಸ್ಪಷ್ಟ ಸಂದೇಶವನ್ನು ಮತದಾರರು ಕೊಟ್ಟಿದ್ದಾರೆ. ಈ ಮೂರು ಕ್ಷೇತ್ರಗಳ ಜನರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.

ಜಾರ್ಖಂಡ್ ರಾಜ್ಯದಲ್ಲೂ ಕೂಡ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಿದೆ. ನಮ್ಮ ಪಕ್ಷದ ಅದಿ ನಾಯಕಿ ಪ್ರಿಯಾಂಕ ಗಾಂಧಿ ಅವರು ಕೇರಳದ ವಯನಾಡಿನಲ್ಲಿ ೩ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆ ಕ್ಷೇತ್ರದ ಜನತೆಗೂ ಕೂಡ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾಂಗ್ರೆಸ್ ಮುಖಂಡರಾದ ದೇವಪ್ಪ ಮಲ್ಲಿಗೆವಾಳು, ಚಂದ್ರಶೇಖರ್, ರಘು ದಾಸರಕೊಪ್ಪಲು, ಅಶೋಕ್ ನಾಯಕರಹಳ್ಳಿ, ಶಿವಕುಮಾರ್ ವಿಶ್ವನಾಥ್, ಬೂದೇಶ್, ರಾಮಚಂದ್ರು ಇತರರು ಉಪಸ್ಥಿತರಿದ್ದರು.

Share this article