ಸಿಎಂ ವಿರುದ್ಧ ಸುಳ್ಳ ಆರೋಪ- ಆರ್‌.ಟಿ.ಐ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ದೂರು

KannadaprabhaNewsNetwork | Published : Jul 20, 2024 12:48 AM

ಸಾರಾಂಶ

ಎಂಡಿಎಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ರಾಜ್ಯ ಸರ್ಕಾರವು ಈಗಾಗಲೇ ನ್ಯಾಯಾಂಗ ತನಿಖೆಗೆ ವಹಿಸಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಎಂಡಿಎ) ಹಗರಣಕ್ಕೆ ಸಂಬಂಧಿಸಿದಂತೆ ಆರ್‌.ಟಿ.ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಬೇಕು ಎಂದು ಕಾಂಗ್ರೆಸ್ ನಿಯೋಗವು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರಿಗೆ ದೂರು ನೀಡಿದೆ.

ಎಂಡಿಎಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ರಾಜ್ಯ ಸರ್ಕಾರವು ಈಗಾಗಲೇ ನ್ಯಾಯಾಂಗ ತನಿಖೆಗೆ ವಹಿಸಿದೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೆಸರೆಯಲ್ಲಿದ್ದ 3 ಎಕರೆ 16 ಗುಂಟೆ ಜಮೀನನ್ನು ಎಂಡಿಎ ಅಧಿಸೂಚನೆ ಹೊರಡಿಸದೆ ವಶಕ್ಕೆ ಪಡೆದು, ಕಾನೂನುಬಾಹಿರವಾಗಿ ನಿವೇಶನಗಳನ್ನು ಮಾಡಿ ಹಂಚಿದ್ದಾರೆ. ಎಂಡಿಎ ತನ್ನಿಂದ ಆಗಿರುವ ತಪ್ಪನ್ನು ಒಪ್ಪಿಕೊಂಡು, ಪರಿಹಾರ ರೂಪದಲ್ಲಿ ಪಾರ್ವತಿ ಅವರಿಗೆ ಪರ್ಯಾಯವಾಗಿ ನಿವೇಶನವನ್ನು ನೀಡಲಾಗಿದೆ. ಆದರೆ, ಆರ್‌.ಟಿ.ಐ ಕಾರ್ಯಕರ್ತರು ಈ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ಧವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಪಾರ್ವತಿ ಅವರಿಗೆ ನಿವೇಶನ ನೀಡಿರುವುದು ಕಾನೂನುಬಾಹಿರ ಎಂದು ಆರೋಪಿಸಿ, ಸುಳ್ಳು ದಾಖಲೆಗಳನ್ನು ಪ್ರದರ್ಶಿಸಿ, ಸುಳ್ಳು ಮಾಹಿತಿ ನೀಡಿ, 20 ದಿನಗಳಿಂದಲೂ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಈ ಕುರಿತಂತೆ ಆರ್‌.ಟಿ.ಐ ಕಾರ್ಯಕರ್ತರ ಬಳಿ ದಾಖಲೆಗಳಿದ್ದರೆ, ಅವುಗಳನ್ನು ನ್ಯಾಯಾಂಗ ತನಿಖೆಗೆ ನೇಮಕಗೊಂಡಿರುವ ನಿವೃತ್ತ ನ್ಯಾಯಾಧೀಶ ದೇಸಾಯಿ ಅವರಿಗೆ ನೀಡಬೇಕು. ಇದನ್ನು ಹೊರತುಪಡಿಸಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರೊಂದಿಗೆ ಶಾಮೀಲಾಗಿ ಮುಖ್ಯಮಂತ್ರಿ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಮುಖಂಡರಾದ ಎಂ. ಶಿವಣ್ಣ, ಕೆ. ಮಹೇಶ್, ಮನೋನ್ಮಣಿ ಮೊದಲಾದವರು ಇದ್ದರು.

Share this article