ಕಾರ್ಯಕರ್ತರು ಒಪ್ಪಿದವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹುದ್ದೆ

KannadaprabhaNewsNetwork |  
Published : Jul 31, 2026, 01:15 AM IST
 | Kannada Prabha

ಸಾರಾಂಶ

ತುಮಕೂರು ಜಿಲ್ಲಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಎಐಸಿಸಿ ವೀಕ್ಷಕಿ ಸಂಗೀತ ಬೇನಿವಾಲ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಒಪ್ಪಿದವರನ್ನು ಜಿಲ್ಲಾಧ್ಯಕ್ಷರಾಗಿ ನೇಮಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಕಳೆದ ಏಳು ದಿನಗಳಿಂದ ತುಮಕೂರು ಜಿಲ್ಲಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಎಐಸಿಸಿ ವೀಕ್ಷಕಿ ಸಂಗೀತ ಬೇನಿವಾಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಉಪಾಧ್ಯಕ್ಷ ರಾಹುಲ್‌ಗಾಂಧಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ನಿರ್ದೇಶನದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮಾಹಿತಿ ಸಂಗ್ರಹಿಸುವ ಕೆಲಸ ಮಾಡಲಾಗಿದೆ. ಆಗಸ್ಟ್ 14 ರವರೆಗೆ ಕಾರ್ಯಕರ್ತರು ಮುಕ್ತವಾಗಿ ಭೇಟಿಯಾಗಿ, ಇಲ್ಲವೇ ಪಕ್ಷ ತಂದಿರುವ ಅರ್ಜಿಗಳ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದಾಗಿದೆ ಎಂದರು.

ಸಂಘಟನ್ ಅಭಿಯಾನದ ಪ್ರಮುಖ ಉದ್ದೇಶ, ಇದುವರೆಗೂ ಜಿಲ್ಲಾಧ್ಯಕ್ಷರ ನೇಮಕಕ್ಕೆ ಇದ್ದ ಶಾಸಕರು, ಮಂತ್ರಿಗಳ ಶಿಫಾರಸ್ಸು ಹೊರತು ಪಡಿಸಿ,ಎಲ್ಲ ಕಾರ್ಯಕರ್ತರು, ಮುಖಂಡರುಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ, ಎಲ್ಲರಿಗೂ ಒಪ್ಪಿಗೆಯಾಗುವ ನಾಯಕನನ್ನು ಆಯ್ಕೆ ಮಾಡಬೇಕೆಂಬುದಾಗಿದೆ.ಹಾಗಾಗಿ ತಳಮಟ್ಟದಲ್ಲಿ ಕಾರ್ಯಕರ್ತರು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದರು.

ಇದುವರೆಗೂ 25 ಕ್ಕೂ ಹೆಚ್ಚು ಜನರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎಐಸಿಸಿ ನಿಯಮಗಳ ಪ್ರಕಾರ ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಪಕ್ಷದಲ್ಲಿ ಕಾರ್ಯನಿರ್ವಹಿಸಬೇಕು.ಕಾಂಗ್ರೆಸ್ ತತ್ವ ಸಿದ್ದಾಂತಗಳಿಗೆ ಬದ್ದವಾಗಿರುವ ವ್ಯಕ್ತಿಯಾಗಿರಬೇಕು. 55 ವರ್ಷಗಳ ಒಳಗಿರಬೇಕು. ಒಂದು ವೇಳೆ ವಯಸ್ಸು ಹೆಚ್ಚಾಗಿದ್ದರೂ ಪಕ್ಷದಲ್ಲಿ ಸಕ್ರಿಯರಾಗಿ ತೊಡಗಿಕೊಂಡಿದ್ದರೆ ಅವಕಾಶ ಕಲ್ಪಿಸಬಹುದು. ಎಐಸಿಸಿ ನನಗೆ ವಹಿಸಿರುವ ಕೆಲಸವನ್ನು ಅತ್ಯಂತ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಮಾಡಿ,ವರದಿ ಸಲ್ಲಿಸುತ್ತೇನೆ ಎಂದರು.

ಈಗಾಗಲೇ ಬಿಹಾರ,ಉತ್ತರಾಖಂಡ ಹಾಗೂ ಮಹಾರಾಷ್ಟ್ರಗಳಲ್ಲಿ ನನಗೆ ವಹಿಸಿದ್ದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಯಾರ ಒತ್ತಡಕ್ಕೂ ಮಣಿಯದೆ ನಿಷ್ಪಕ್ಷಪಾತ ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಲಿದ್ದೇನೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಯಾರನ್ನು ನಿರ್ಲಕ್ಷಿಸಿಲ್ಲ. ನಾನು ಬರುವುದರ ಬಗ್ಗೆ ಜಿಲ್ಲಾಧ್ಯಕ್ಷರಿಗೆ ಮಾಹಿತಿ ಇತ್ತು. ಅವರು ಎಲ್ಲಾ ಮುಖಂಡರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.ಈಗಲೂ ಕಾಲಾವಕಾಶವಿದೆ. ಹಾಗಾಗಿ ತಮ್ಮ ಮನವಿ ಸಲ್ಲಿಸಬಹುದು. ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಕಾರ್ಯಕರ್ತರಿಗೆ ಯಾವುದೇ ರೀತಿಯ ಸ್ಥಾನಮಾನ ಸಿಕ್ಕಿಲ್ಲ ಎಂಬ ಬೇಸರ ಇರುವುದು ನಮ್ಮ ಗಮನಕ್ಕೆ ಬಂದಿದೆ.ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರು, ಪದಾಧಿಕಾರಿಗಳ ಗಮನಕ್ಕೆ ತರುತ್ತೇನೆ.ಹೊಸ ಅಧ್ಯಕ್ಷರ ನೇಮಕ ನಂತರ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವೀಕ್ಷಕ ಮೀಲಿಂದ್ ದೇವಸೇನ, ವಿಜಯಕುಮಾರ್, ರೇಖಾ ಹುಚ್ಚಪ್ಪಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಎಂ.ಎಲ್.ಸಿ. ರಮೇಶ್‌ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅರ್.ರಾಮಕೃಷ್ಣ,ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಷಣ್ಮುಗಪ್ಪ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿ ರೋಸ್ಟರ್ ತಿದ್ದುಪಡಿಗೆ ಆಗ್ರಹಿಸಿ ಲಂಬಾಣಿ ಸಮಾಜದಿಂದ ಮನವಿ
ವಿಷಾಹಾರದಿಂದ 57 ವಿದ್ಯಾರ್ಥಿಗಳು ಅಸ್ವಸ್ಥ: ಭುಗಿಲೆದ್ದ ಆಕ್ರೋಶ