* ಬಿಜೆಪಿಯಿಂದ ಸರ್ಕಾರದ ವಿರುದ್ಧ ಘೋಷಣೆ, ಪ್ರತಿಭಟನೆ ಬೆಳಗಾವಿಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ದುರಾಡಳಿತಕ್ಕೆ ಸಾಕ್ಷಿ
ಮಹಿಳೆಯರಿಗೆ ರಾಜ್ಯದಲ್ಲಿ ಭದ್ರತೆ ಇಲ್ಲದಿರುವುದು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿ ಸ್ವಾಮಿ, ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಇತರರ ನೇತೃತ್ವದಲ್ಲಿ ಪ್ರತಿಭಟಿಸುವ ಜೊತೆಗೆ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.ಶಾಸಕ ಬಿ.ಪಿ.ಹರೀಶ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅರಾಜಕತೆ ವಾತಾವರಣ ನಿರ್ಮಾಣವಾಗುತ್ತಿದೆ. ಗ್ಯಾರಂಟಿ ಯೋಜನೆ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿ, ಜನಹಿತವನ್ನೇ ಕಡೆಗಣಿಸುತ್ತಿದೆ. ಬರದಿಂದ ಇಡೀ ರಾಜ್ಯವೇ ತತ್ತರಿಸಿದ್ದು, ಬರ ನಿರ್ವಹಣೆ, ಅಭಿವೃದ್ಧಿ, ಆಡಳಿತ ಹೀಗೆ ಎಲ್ಲದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಆಳ್ವಿಕೆ ವಿಫಲವಾಗಿದೆ. ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿರುವುದು ನಾಚಿಕೆಗೇಡಿನ ಸಂಗತಿ. ಇದು ಕಾಂಗ್ರೆಸ್ನ ದುರಾಡಳಿತಕ್ಕೆ ಸಾಕ್ಷಿ ಎಂದರು.
ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ಮಾತನಾಡಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ಮಹಿಳೆಯರಿಗಾಗಲೀ, ಹಿಂದೂಗಳಿಗೆ ಗೌರವ, ರಕ್ಷಣೆ ಇಲ್ಲವಾಗಿದೆ. ದೌರ್ಜನ್ಯಕ್ಕೀಡಾದ ಮಹಿಳೆಗೆ ಸಾಂತ್ವನ ಹೇಳುವಷ್ಟೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವ್ಯವದಾನವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕರ್ಮಕಾಂಡ ಮುಚ್ಚಿ ಹಾಕಲಷ್ಟೇ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಈಚೆಗೆ ಸಂಸತ್ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ ಆರೋಪಿಗಳೆಲ್ಲರೂ ಕಾಂಗ್ರೆಸ್ ಅನುಯಾಯಿಗಳೆಂಬುದು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟವಾಗಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದ್ದು, ಇದು ಆರಂಭವಷ್ಟೇ ಎಂದರು.
ದೇಶದಲ್ಲೇ ಅತೀ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗುತ್ತಿರುವುದು ನೋವಿನ ಸಂಗತಿ. ಮಹಿಳಾ ಸಬಲೀಕರಣ ಬಗ್ಗೆ ದೊಡ್ಡದಾಗಿ ಮಾತನಾಡುವ ಕಾಂಗ್ರೆಸ್ ಆಳ್ವಿಕೆಯಲ್ಲಿ ಹೆಣ್ಣು ಜೀವ ಮತ್ತು ಜೀವನಕ್ಕೆ ಭದ್ರತೆಯೇ ಇಲ್ಲದಂತಾಗಿದೆ. ಬೆಳಗಾವಿ ಅಧಿವೇಶನ ಸಂದರ್ಭದಲ್ಲೇ ಮಹಿಳೆಯೊಬ್ಬರ ಬೆತ್ತಲೆಗೊಳಿಸಿ, ಥಳಿಸಿರುವುದು ಕಾಂಗ್ರೆಸ್ನ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ಸಂತ್ರಸ್ತ ಮಹಿಳೆಗೆ ಸರ್ಕಾರ 10 ಲಕ್ಷ ರು. ಪರಿಹಾರ ನೀಡಬೇಕು. ಡಾ.ಎ.ಎಚ್.ಶಿವಯೋಗಿ ಸ್ವಾಮಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ,