ಕನ್ನಡಪ್ರಭ ವಾರ್ತೆ ವಿಜಯಪುರ
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಹೇಳಿದರು.ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರಕಾರದಿಂದ ನಾಮನಿರ್ದೇಶನಗೊಂಡು ಜಿಲ್ಲಾ ಅನುಷ್ಠಾನ ಸಮಿತಿ ಹಾಗೂ ತಾಲೂಕಾ ಸಮಿತಿಗಳ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿ ಅನುಷ್ಠಾನದಿಂದ ಎಲ್ಲ ವರ್ಗದವರಿಗೂ ಈ ಯೋಜನೆಗಳನ್ನು ತಲುಪಿ ಜನರು ಸಂತೋಷದಿಂದಿದ್ದಾರೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿಯೂ ಎಐಸಿಸಿ ವತಿಯಿಂದ ‘ಪಂಚನ್ಯಾಯ’ ಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ಈ ‘ಪಂಚನ್ಯಾಯ’ ಗಳನ್ನು ಈಡೇರಿಸಲು ಬದ್ಧವಾಗಿದೆ. ಸದರಿ ಯೋಜನೆಗಳ ಗ್ಯಾರಂಟಿ ಕಾರ್ಡ್ಗಳನ್ನು ಜಿಲ್ಲೆಯ ಪ್ರತಿ ಮನೆ ಮನೆಗೆ ಭೇಟಿ ನೀಡಿ ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಇಲಿಯಾಸ ಬೋರಾಮಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅದರಂತೆ ದೇವರ ಹಿಪ್ಪರಗಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಹಾಗೂ ಸದಸ್ಯರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹೊನಮಲ್ಲ ಸಾರವಾಡ, ಶ್ರೀಶೈಲ ಕವಲಗಿ, ವ್ಹಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ರಾಮನಗೌಡ ಬಗಲಿ, ರಮೇಶ ಗುಬ್ಬೇವಾಡ, ಸಣ್ಣಪ್ಪ ತಳವಾರ, ಶ್ರೀಕಾಂತ ಛಾಯಾಗೋಳ, ಮಹಾದೇವಿ ಗೋಕಾಕ, ಜಯಶ್ರೀ ಭಾರತೆ, ರಾಜೇಶ್ವರಿ ಚೋಳಕೆ, ಅಮಿತ ಚವ್ಹಾಣ, ನಿಂಗಪ್ಪ ಸಂಗಾಪೂರ, ಬಾಪುಗೌಡ ಪಾಟೀಲ, ಸುಭಾಷ ಕಾಲೇಬಾಗ, ಪ್ರಕಾಶ ಪಾಟೀಲ, ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಆನಂದ ಜಾಧವ ಮತ್ತು ಜಿಲ್ಲೆಯ ಎಲ್ಲ ತಾಲೂಕಾಧ್ಯಕ್ಷರುಗಳು ಹಾಗೂ ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.