ಚಿತ್ರದುರ್ಗ : ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಭಾರತೀಯ ಜನತಾಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಾದಾಟ ಶುರುವಾಗಿದೆ ಎಂದರು.
ಚುನಾವಣೆ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಗುಲ್ಬರ್ಗದಲ್ಲಿ ಕುಳಿತು ಕಲ್ಯಾಣ ಕರ್ನಾಟಕಕ್ಕೆ ಹನ್ನೊಂದುವರೆ ಸಾವಿರ ಕೋಟಿ ರು.ಗಳನ್ನು ಘೋಷಿಸಿ ರಾಜ್ಯದ ಜನರ ಕಿವಿಗೆ ಹೂವು ಮುಡಿಸಿದ್ದಾರೆ ಎಂದು ದೂರಿದರು.
ನೀರಾವರಿಗೆ ಬಸವರಾಜ್ ಬೊಮ್ಮಾಯಿ ಹದಿನೆಂಟು ಸಾವಿರ ಕೋಟಿ ರು.ಗಳನ್ನು ಘೋಷಿಸಿದ್ದರು. ಎಲ್ಲದಕ್ಕೂ ಈಗಿನ ಮುಖ್ಯಮಂತ್ರಿ ಕಲ್ಲು ಹಾಕಿ ಬಿಜೆಪಿ ಯೋಜನೆಗಳನ್ನೆಲ್ಲಾ ತಡೆದಿದ್ದಾರೆ. ರಾಜ್ಯದಲ್ಲಿ ನೆರೆ ವೀಕ್ಷಣೆಗೆ ಪ್ರವಾಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ, ಉಪ ಮುಖ್ಯಮಂತ್ರಿ ಬೆಂಗಳೂರಿಗಷ್ಟೆ ಮೀಸಲಾಗಿದ್ದಾರೆಂದು ಬಿ.ವೈ. ವಿಜಯೇಂದ್ರ ತರಾಟೆ ತೆಗೆದುಕೊಂಡರು.ಗೃಹಲಕ್ಷ್ಮಿ ಯೋಜನೆ ನಿಂತಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳನ್ನು ತೆಲಂಗಾಣದ ಬೇರೆ ಬೇರೆ ಹತ್ತು ಖಾತೆಗಳಿಗೆ ವರ್ಗಾಯಿಸಲಾಗಿದೆ.
ಮುಡಾ ಹಗರಣ, ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಬಳಸಬೇಕಾಗಿರುವ 24 ಸಾವಿರ ಕೋಟಿ ರು.ಗಳನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. 87 ಕೋಟಿ ರೂ.ಗಳನ್ನು ನುಂಗಿರುವುದಾಗಿ ಸ್ವತಃ ಮುಖ್ಯಮಂತ್ರಿಯೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ ಎಂದರು. ಪ್ರಧಾನಿ ನರೇಂದ್ರಮೋದಿ ಕಳೆದ 2 ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪ್ರತಿ ಬೂತ್ನಲ್ಲಿ ಐದಾರು ಜನರ ತಂಡ ಮಾಡಿಕೊಂಡು ಮನೆ ಮನೆಗೆ ಹೋಗಿ ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಎಲ್ಲಾ ಜಾತಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯತ್ವಾ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದರು.
ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ಹಾಕಬೇಕು. ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರಕ್ಕೆ ಶಾಸಕರು, ಮಾಜಿ ಶಾಸಕರುಗಳು, ಮುಖಂಡರುಗಳು ಪ್ರವೇಶಿಸಬೇಕೆಂದು ಸೂಚಿಸಿದರು.ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಾಂಗ್ರೆಸ್ನಿಂದ ಅನೇಕ ಆಪಾದನೆಗಳನ್ನು ಎದುರಿಸಿ ಅಧಿಕಾರ ಕಳೆದುಕೊಳ್ಳುವಂತಾಯಿತು. ನಮ್ಮ ಪಕ್ಷ 66 ಸ್ಥಾನಗಳಲ್ಲಿ ಗೆದ್ದು ವಿಧಾನಸಭೆಯಲ್ಲಿ ವಿರೋಧ ಪಕ್ಷದಲ್ಲಿ ಕುಳಿತಿದೆ. ಮುಂದೆ ಎದುರಾಗುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳೊಂದಿಗೆ ಗೆಲ್ಲಬೇಕು. ಅದಕ್ಕಾಗಿ ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಿ ಎಂದು ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುತ್ತಿರುವುದರಿಂದ ನಾಗಮಂಗದಲ್ಲಿ ಗಣೇಶ ಮೆರವಣಿಗೆಯಲ್ಲಿ ಅನ್ಯ ಕೋವಿನವರು ಕಲ್ಲು, ಪೆಟ್ರೋಲ್ ಬಾಂಬ್ ತೂರಿ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಪಾಂಡವಪುರದಲ್ಲಿ ಸಂಘದ ಕಾರ್ಯಾಲಯದೊಳಗೆ ಪೊಲೀಸರು ಬೂಟುಗಾಲಿನಲ್ಲಿ ಪ್ರವೇಶಿಸಿದ್ದಾರೆ ಇದು ಅವರಿಗೆ ಶುಭ ಸೂಚನೆಯಲ್ಲ ಎಂದು ಎಚ್ಚರಿಸಿದರು.
ಚಿತ್ರದುರ್ಗ ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲೂ ಕಿಡಿಗೇಡಿಗಳು ಗಲಾಟೆ ಮಾಡಬಹುದು. ಇನ್ನಾದರೂ ಕಾರ್ಯಕರ್ತರು ಎಚ್ಚೆತ್ತುಕೊಳ್ಳಿ. ದೇಶದ್ರೋಹಿಗಳಿಗೆ ಕಾಂಗ್ರೆಸ್ ರತ್ನಗಂಬಳಿ ಹಾಸುತ್ತಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾಂಗ್ರೆಸ್ನ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವವನಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.ಸಂಸದ ಗೋವಿಂದ ಕಾರಜೋಳ ಮಾತನಾಡಿ, ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಶುರುವಾಗಿದೆ. ಚಿತ್ರದುರ್ಗದಲ್ಲಿ ಎಂಪಿ ಸ್ಥಾನ ಗೆದ್ದ ಮೇಲೆ ಕಾರ್ಯಕರ್ತರಿಗೆ ಆನೆ ಬಲ ಬಂದಂತಾಗಿದೆ. ಆದರೆ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆ ಹಿಂದುಳಿದಿದೆ. ಮೂರುವರೆ ಲಕ್ಷ ಸದಸ್ಯತ್ವ ಗುರಿ ನೀಡಿದೆ.
ಕಾರ್ಯಕರ್ತರು ಮನಸ್ಸು ಮಾಡಿದರೆ ಸದಸ್ಯತ್ವ ಅಭಿಯಾನ ದೊಡ್ಡದೇನಲ್ಲ. ಇನ್ನು ನಾಲ್ಕೈದು ದಿನಗಳಲ್ಲಿ ಕೊಟ್ಟಿರುವ ಗುರಿ ತಲುಪಬೇಕು ಎಂದರು. ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಪ್ರಾಸ್ತಾವಿಕ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಹೊಳಲ್ಕೆರೆ ಶಾಸಕ ಡಾ.ಎಂ. ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಭೀಮಸಮುದ್ರದ ಜಿ.ಎಸ್. ಅನಿತ್ಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಗೌಡ, ಶರಣ ತಳ್ಳಿಕೆರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ. ಸುರೇಶ್ ಸಿದ್ದಾಪುರ, ಸಂಪತ್ಕುಮಾರ್, ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೆಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಎಸ್. ಲಿಂಗಮೂರ್ತಿ, ಬಿಜೆಪಿ ಮಾಜಿ ಅಧ್ಯಕ್ಷ ಜಿ.ಎನ್. ಸುರೇಶ್, ಕುಮಾರಸ್ವಾಮಿ, ಮಲ್ಲಿಕಾರ್ಜುನ ವೇದಿಕೆಯಲ್ಲಿದ್ದರು.