ಶಿರಹಟ್ಟಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ದಿಟ್ಟ ನಿಲುವು-ನಿರ್ಧಾರಗಳಿಂದ ಭಾರತ ಹತ್ತು ವರ್ಷಗಳಲ್ಲಿ ವಿಶ್ವನಾಯಕತ್ವಕ್ಕೆ ಮುನ್ನುಗ್ಗಿದೆ. ಇವರ ಅಡಳಿತವನ್ನು ದೇಶದ ಜನತೆ ಮೆಚ್ಚಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದೆ. ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಪಂ ಮಾಜಿ ಅಧ್ಯಕ್ಷ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ವಿಶ್ವದ ಗಮನ ಸೆಳೆದಿದೆ. ದೇಶದ ಸಮಗ್ರ ಅಭಿವೃದ್ಧಿ ಮತ್ತು ಅಗ್ರಗಣ್ಯ ರಾಷ್ಟ್ರ ನಿರ್ಮಾಣಕ್ಕೆ ೩ನೇ ಬಾರಿ ಮೋದಿ ಅವರನ್ನು ಪ್ರದಾನಿ ಮಾಡಬೇಕು ಎಂದು ಕರೆ ನೀಡಿದರು.
ಈ ಬಾರಿ ಲೋಕಸಭಾ ಚುನಾವಣೆ ಅತ್ಯಂತ ಮಹತ್ವದ ಚುನಾವಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಬಸವರಾಜ ಬೊಮ್ಮಾಯಿ ಅವರನ್ನು ಪ್ರಚಂಡ ಬಹುಮತಗಳ ಅಂತರದಿಂದ ಗೆಲ್ಲಿಸಬೇಕು. ದೇಶವನ್ನು ಅಭಿವೃದ್ದಿ ಪಥದಲ್ಲಿ ಸಾಗಿಸುವ,ದೇಶದ ಸಮಗ್ರ ರಕ್ಷಣೆಗೆ ಮೋದಿ ಆಡಳಿತ ಅತ್ಯಂತ ಅವಶ್ಯಕ. ಭಾರತ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವುದರೊಂದಿಗೆ ದೇಶದ ಸಮಗ್ರ ಅಭಿವೃದ್ದಿ ಪರ ಕೆಲಸ ಮಾಡುತ್ತಿದ್ದಾರೆ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿ ೩ನೇ ಬಾರಿ ಪ್ರಧಾನಿಯಾಗುವುದು ಸತ್ಯ ಎಂದು ನುಡಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೪೦೦ಕ್ಕೂ ಹೆಚ್ಚು ಸ್ಥಾನಗಳನ್ನು ದೇಶದಲ್ಲಿ ಗೆಲ್ಲಲಿದೆ. ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ೨೫ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಜನರ ನೋವು ನಲಿವುಗಳಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದು, ಜನತೆ ಇದನ್ನು ಮರೆಯದೆ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.ಬಿಜೆಪಿ ಮುಖಂಡರಾದ ಯಲ್ಲಪ್ಪ ಇಂಗಳಗಿ, ರಾಮಣ್ಣ ಕಂಬಳಿ, ಅಕಬರಸಾಬ ಯಾದಗಿರಿ,ಬಸರಾಜ ವಡವಿ, ರವಿ ಹಳ್ಳಿ, ಬಸವರಾಜ ಹಲಸೂರ ಸೇರಿದಂತೆ ಅನೇಕರು ಇದ್ದರು.