ಸರ್ಕಾರಕ್ಕೆ 2 ವರ್ಷ ಹಿನ್ನೆಲೆಯಲ್ಲಿ ಇಂದು ಮುದ್ದೇಬಿಹಾಳದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದ ಸಿ.ಬಿ.ಅಸ್ಕಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ನಡೆಯುತ್ತಾ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬಂತೆ ರಾಜ್ಯದ ಅಭಿವೃದ್ಧಿ ಚಿಂತನೆಗಳೊಂದಿಗೆ ದಾಪುಗಾಲು ಹಾಕುತ್ತಾ 2 ವರ್ಷ ಯಶಸ್ವಿಯಾಗಿ ಆಡಳಿತ ನಡೆಸಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಬಡವರ ಪಾಲಿನ ಭಾಗ್ಯವಿಧಾತ ಎಂಬಂತಾಗಿದೆ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತನ್ನ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದರೊಂದಿಗೆ ರಾಜ್ಯದ ಅಭಿವೃದ್ಧಿ ಕಾರ್ಯಗಳೊಂದಿಗೆ ಮುನ್ನಡೆದಿದೆ ಎಂದರು.
ಮೇ 20ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ಹಿನ್ನೆಲೆ ಮುದ್ದೇಬಿಹಾಳ ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂಬ ಇಚ್ಚೆಯೊಂದಿಗೆ ಪೂರ್ವಭಾವಿ ಸಭೆಯನ್ನು ಮೇ 17ರಂದು ಬೆಳಗ್ಗೆ 10.30 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಸಭಾ ಭವನದಲ್ಲಿ ಕರೆಯಲಾಗಿದೆ. ಕಾರಣ ಈ ಭಾಗದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯದ ಎಲ್ಲ ಕ್ಷೇತ್ರಗಳಿಗೂ ತಾರತಮ್ಯ ಮಾಡದೇ ಅಭಿವೃದ್ಧಿ ಕಾರ್ಯಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಮುಂದೆ ಸಾಗುತ್ತಿದೆ. ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯೊಂದಿಗೆ ಜನರ ಹಿತಕಾಯುವುದರೊಂದಿಗೆ ಸರ್ಕಾರವು ಮುನ್ನಡೆಯುತ್ತಿದೆ ಎಂದರು.
ಮುದ್ದೇಬಿಹಾಳದಲ್ಲಿ ಮೇ 17ರಂದು ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರೆಪ್ಪ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ವಹಿಸಿಕೊಳ್ಳಲಿದ್ದಾರೆ. ಅಲ್ಲದೇ ಇವರ ಜೊತೆಗೆ ಜಿಲ್ಲೆಯ ಅನೇಕ ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ. ಹೀಗಾಗಿ ಮತಕ್ಷೇತ್ರದ ಕಾಂಗ್ರೆಸ್ ಹಿರಿಯರು, ಮುಖಂಡರು ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.