ಕೊಪ್ಪಳ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಏನೂ ಸಾಧಿಸಿಲ್ಲ, ಅದು ಭ್ರಷ್ಟಾಚಾರದಲ್ಲಿ ಗಿನ್ನೆಸ್ ದಾಖಲೆ ಮಾಡಿದೆ ಅಷ್ಟೇ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಿಡಿಕಾರಿದ್ದಾರೆ.
ಸರ್ಕಾರದ ದುಡ್ಡು ಖರ್ಚು ಮಾಡಿ, ಯಾವ ಸಾಧನೆಗಾಗಿ ಇಂತಹ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದರು.
ವಾಲ್ಮೀಕಿ ಹಗರಣದ ಮೂಲಕ ₹ 80 ಕೋಟಿ ಹಣವನ್ನು ಬಳ್ಳಾರಿ ಮತ್ತು ಗೋವಾ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಸಾಲ ಮಾಡುವುದರಲ್ಲಿ ಗಿನ್ನೆಸ್ ದಾಖಲೆ ಮಾಡಿದ್ದು, ಅದನ್ನು ತೋರಿಸಬೇಕು ಎಂದು ಆಗ್ರಹಿಸಿದರು.ಅಬಕಾರಿ ಇಲಾಖೆಯಲ್ಲಿ ನಡೆದಿರುವುದು ಸಣ್ಣ ಹಗರಣವೇ, ಬಾರ್ ಲೈಸನ್ಸ್ ನೀಡಲು ₹700 ಕೋಟಿ ಲಂಚದ ಹಗರಣ ಇದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಭಾಗಿಯಾಗಿದೆ. ಇಂತಹ ಸರ್ಕಾರ ಅದ್ಯಾವ ಗಿನ್ನೆಸ್ ದಾಖಲೆಯ ಸಾಧನೆ ಮಾಡಿದೆ. ಇದಕ್ಕಿಂತ ಮಿಗಿಲಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿದೆ ಎಂದು ಆರೋಪಿಸಿದರು.
ಕೇಸರಿ ಪೇಟ ಧರಿಸಲಿ : ಶಾಲೆಗಳಿಗೆ ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಪೇಟಾ ಧರಿಸಿ ಹೋಗಲಿ ಎಂದು ಜನಾರ್ದನ ರೆಡ್ಡಿ ಹೇಳಿದರು.